ಸಾರಾಂಶ
ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ-2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿ ಪಾಲಿಸಬೇಕು ಎಂದು ಅಖಿಲ ಭಾರತ ವಕೀಲರ ಒಕ್ಕೂಟ ಒತ್ತಾಯಿಸಿದೆ.
ಕುಷ್ಟಗಿ:
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ವಕೀಲರ ಒಕ್ಕೂಟದ ತಾಲೂಕು ಘಟಕದಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ವಕೀಲರು, ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ-2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿ ಪಾಲಿಸಬೇಕು. ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ ರದ್ದುಪಡಿಸುವುದು, ಕಿರಿಯ ವಕೀಲರಿಗೆ 2 ವರ್ಷ ಮಾಸಿಕ ₹ 10,000 ಸಹಾಯಧನ ನೀಡಬೇಕು. ರಾಜ್ಯದ ತಾಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ ₹ 5 ಲಕ್ಷ ಮತ್ತು ಜಿಲ್ಲಾ ವಕೀಲರ ಸಂಘಗಳಿಗೆ ₹ 10 ಲಕ್ಷ ಅನುದಾನ ನೀಡುವಂತೆ ಒತ್ತಾಯಿಸಿದರು.
ವಕೀಲರಿಗೆ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ವಕೀಲರ ಅಕಾಡೆಮಿ ಸ್ಥಾಪನೆ, ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯ ಸ್ಥಾಪನೆ, ನ್ಯಾಯಾಲಯಗಳಿಗೆ ಮೂಲಭೂತ ಸೌಲಭ್ಯ, ಒದಗಿಸುವುದು, ಜಿಲ್ಲೆಗೊಂದು ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ, ವಕೀಲರ ಪರಿಷತ್ ಕಚೇರಿಯನ್ನು ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒಂದು ತಿಂಗಳೊಳಗೆ ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಿ ನಮ್ಮ ನಡೆಯನ್ನು ವಿಧಾನಸೌಧ, ವಕೀಲರ ಪರಿಷತ್ತುಗಳ ಕಡೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.ಈ ವೇಳೆ ಹಿರಿಯ ವಕೀಲರಾದ ಸಿ,ಪಿ. ಪಾಟೀಲ್, ಆರ್.ಕೆ. ದೇಸಾಯಿ, ಶಿವಕುಮಾರ ದೊಡ್ಡಮನಿ, ಸಂಗನಗೌಡ ಪಾಟೀಲ, ವೀರೇಶ ನಾಲತವಾಡ, ರಾಮಣ್ಣ ಮೇಟಿ, ಬಿ.ಆರ್. ಪಾಟೀಲ, ಎಸ್.ಎನ್. ನಾಯಕ, ರಾಜೇಂದ್ರ ಮೂಲಿಮನಿ, ಹುಲಗಪ್ಪ ಚೂರಿ, ನಿತೀಶ್ ಕುರಿ ಸೇರಿದಂತೆ ಇತರರು ಇದ್ದರು.