ಸಾರಾಂಶ
ಕಲಬುರ್ಗಿಯಲ್ಲಿ ನಡೆದ ವಕೀಲರ ಹತ್ಯೆಯನ್ನು ಖಂಡಿಸಿ ಪಟ್ಟಣದಲ್ಲಿ ನ್ಯಾಯವಾದಿಗಳ ಸಂಘದ ಸದಸ್ಯರು ಕಾರ್ಯಕಲಾಪ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದರು. ಆನಂತರ ತಪ್ಪಿತಸ್ಥರನ್ನು ಬಂಧಿಸುವಂತೆ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಹತ್ಯೆ ಖಂಡಿಸಿದ ಬ್ಯಾಡಗಿ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು, ನ್ಯಾಯವಾದಿಗಳ ಹಿತರಕ್ಷಣಾ ಕಾಯಿದೆ ಜಾರಿ ಮಾಡುವಂತೆ ಆಗ್ರಹಿಸಿದರು.
ಬ್ಯಾಡಗಿ: ಕಲಬುರ್ಗಿಯಲ್ಲಿ ನಡೆದ ವಕೀಲರ ಹತ್ಯೆಯನ್ನು ಖಂಡಿಸಿ ಪಟ್ಟಣದಲ್ಲಿ ನ್ಯಾಯವಾದಿಗಳ ಸಂಘದ ಸದಸ್ಯರು ಕಾರ್ಯಕಲಾಪ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದರು. ಆನಂತರ ತಪ್ಪಿತಸ್ಥರನ್ನು ಬಂಧಿಸುವಂತೆ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದ ಆನಂತರ ಮಾತನಾಡಿದ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎನ್. ಬಾರ್ಕಿ, ಒಂದು ವಾರದ ಹಿಂದೆಯಷ್ಟೇ ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣ ಇನ್ನೂ ಮಾಸಿಲ್ಲ. ಇದರ ಬೆನ್ನಲ್ಲೆ ಇದೀಗ ಕಲಬುರ್ಗಿಯಲ್ಲಿ ನ್ಯಾಯವಾದಿಗಳ ಸಂಘದ ಸದಸ್ಯರಾಗಿರುವ ಈರಣ್ಣಗೌಡ ಪಾಟೀಲ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಲ್ಲೆ-ಹತ್ಯೆ ಪ್ರಕರಣ ಹೆಚ್ಚುತ್ತಲೇ ಸಾಗಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನ್ಯಾಯವಾದಿಗಳ ಹಿತರಕ್ಷಣಾ ಕಾಯಿದೆ ಜಾರಿ ಮಾಡುವಂತೆ ಆಗ್ರಹಿಸಿದರು.ಉಪಾಧ್ಯಕ್ಷ ಬಸವರಾಜ್ ಹಿರೇಮಠ ಮಾತನಾಡಿ, ಇದೊಂದು ಪೈಶಾಚಿಕ ಕೃತ್ಯ. ಇಷ್ಟು ಬರ್ಬರವಾಗಿ ವಕೀಲರೊಬ್ಬರನ್ನು ಹತ್ಯೆ ಮಾಡಿದ್ದು, ಇಡೀ ದೇಶವೆ ಬೆಚ್ಚಿ ಬಿಳುವಂತೆ ಮಾಡಿದೆ. ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಆನಂತರ ತಲೆ ಮೇಲೆ ಕಲ್ಲು ಹಾಕಿ ಕೊಲೆಗಡುಕರು ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬ್ಯಾಡಗಿ ತಾಲೂಕು ನ್ಯಾಯವಾದಿಗಳ ಸಂಘದ ಸದಸ್ಯರು ಭಾಗವಹಿಸಿದ್ದರು.