ಬಿಳಿಸುಳಿ ರೋಗದ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರಿಗೆ ಡಿಸಿ ಸಲಹೆಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲೆಯಲ್ಲಿ ಮುಸುಕಿನ ಜೋಳದ ಬೆಳೆಗೆ ಬಿಳಿಸುಳಿ ರೋಗ ಬಂದಿರುವುದರಿಂದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ರೈತರು ಪರ್ಯಾಯ ಬೆಳೆ ಬೆಳೆಯುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಸುಕಿನ ಜೋಳ ಬೆಳೆಗೆ ಬಿಳಿಸುಳಿ ರೋಗ ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿ ಪುನಃ ಅದೇ ಬೆಳೆ ಬೆಳೆದರೆ ರೋಗಬರುವ ಸಂಭವ ಹೆಚ್ಚಿರುತ್ತದೆ. ಆ ಕಾರಣಕ್ಕೆ ರೈತರು ಎಚ್ಚರವಹಿಸಿ ಇತರೆ ಬೆಳೆ ಬೆಳೆಯಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮುಸುಕಿನ ಜೋಳ ಬೆಳೆಗೆ ಬಿಳಿಸುಳಿ ರೋಗ ಹರಡುತ್ತಿರುವುರಿಂದ ಪ್ರತಿ ತಾಲೂಕುಗಳಲ್ಲಿ ಬಿತ್ತನೆಗೆ ಎಷ್ಟು ಗುರಿ ಇತ್ತು, ಎಷ್ಟು ವಿಸ್ತೀರ್ಣದಲ್ಲಿ ಬಿತ್ತನೆ ಮಾಡಲಾಗಿದೆ. ಎಷ್ಟು ವಿಸ್ತೀರ್ಣದಲ್ಲಿ ಬಿಳಿಸುಳಿ ರೋಗ ಬಂದಿದೆ. ಮುಸುಕಿನ ಜೋಳ ಬೆಳೆಗೆ ಎಷ್ಟು ರೈತರು ವಿಮೆ ಮಾಡಿಸಿದ್ದಾರೆ ಎಂಬುದರ ಕುರಿತು ಶುಕ್ರವಾರದೊಳಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಪ್ರತಿ ಶುಕ್ರವಾರ ಇರುತ್ತದೆ. ಅತೀ ತುರ್ತು ಸಂದರ್ಭದಲ್ಲಿ ಸೋಮವಾರ ಕೂಡ ಸಭೆ ನಡೆಸಲಾಗುವುದು ಎಂದು ತಿಳಿಸಿದರು.ಹೈನುಗಾರಿಕೆಗೆ ಉತ್ತೇಜನಜಿಲ್ಲೆಯಲ್ಲಿ ಹೈನುಗಾರಿಕೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಇದರ ರಕ್ಷಣೆಗೆ ಹೆಚ್ಚಿನ ನಿಗಾ ವಹಿಸಬೇಕಿದೆ. ಬಡ ರೈತರ ಬದುಕಿಗೆ ಆಧಾರವಾಗಿರುವ ಹೈನುಗಾರಿಕೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಬಿತ್ತನೆ ಬೀಜ ಬೇಡಿಕೆಗೆ ಅನುಗುಣವಾಗಿ ವಿತರಣೆಗೆ ಕ್ರಮಕೈಗೊಳ್ಳುವಂತೆ, ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಿ ಎಂದು ತಿಳಿಸಿದರಲ್ಲದೆ, ಬೆಳೆ ವಿಮೆ ಮಾಡಿಸಲು ರೈತರಿಗೆ ಪ್ರೋತ್ಸಾಹ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬೆಳೆ ಸಮೀಕ್ಷೆ ಜುಲೈ ೧ರಿಂದ ಪ್ರಾರಂಭವಾಗಿದೆ.
ಇದನ್ನು ಅನಿಶ್ಚಿತವಾಗಿ ತಪಾಸಣೆ ಮಾಡಲು ಒಂದು ತಂಡ ರಚಿಸಲು ಸೂಚನೆ ನೀಡಿದರು.
ಜಿಲ್ಲೆ ಜಾನುವಾರುಗಳ ರಕ್ಷಣೆಗಾಗಿ ಮೇವು ಬೆಳೆಯಲು ಪಶುಪಾಲನಾ ಇಲಾಖೆ ಮೂಲಕ ಮೇವಿನ ಕಿರು ಪೊಟ್ಟಣಗಳನ್ನು ರೈತರಿಗೆ ವಿತರಣೆ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.ಜಿಲ್ಲಾ ಮಟ್ಟದ ಮೇವು ಕಾರ್ಯಪಡೆ ಅಡಿಯಲ್ಲಿ ಕ್ರೀಯಾ ಯೋಜನೆ ತಯಾರಿಸಲು ಗ್ರೌಂಡ್ ಲೆವೆಲ್ನಲ್ಲಿ ಪರಿಸ್ಥಿತಿ ಪರಿಗಣಿಸಿ ತಯಾರಿಸಿ ಎಂದು ತಿಳಿಸಿದರು.
ತೋಟಗಾರಿಕೆ ಬೆಳೆಗಳ ಮಧ್ಯೆ ಮೇವಿನ ಬೆಳೆಗಳನ್ನು ಬೆಳೆಯಲು ಕಿರು ಮೇವಿನ ಪೊಟ್ಟಣಗಳನ್ನು ವಿತರಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು. ಅಜೋಲಾ ಮೇವು ಬೆಳೆ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಅಂತರ್ಜಲ ಮಟ್ಟವನ್ನು ಪರಿಶೀಲಿಸಲು ಅರಸೀಕೆರೆ ತಾಲೂಕಿನ ಬಾಣಾವರವನ್ನು ಪ್ರಾಯೋಗಿಕವಾಗಿ ತೆಗೆದು ಕೊಳ್ಳುವಂತೆ ತಿಳಿಸಿದರಲ್ಲದೆ, ನೀರಿನ ಮಾದರಿಗಳ ಗುಣಮಟ್ಟ ಪರೀಶಿಲನೆಗೆ ಹೆಚ್ಚಿನ ಒತ್ತು ನೀಡುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಯುವಂತಿಲ್ಲ. ಜೊತೆಗೆ ಯಾವುದೇ ಅವಘಡಗಳು ಸಂಭವಿಸದಂತೆ ವಿಫಲವಾದ ಕೊಳವೆ ಬಾವಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ಜಂಟಿ ಕೃಷಿ ನಿರ್ದೇಶಕರಾದ ರಮೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.