ಉಡುಪಿ: ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಸ್ನಾತಕೋತ್ತರ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಸಂಶೋಧನಾ ಕಲ್ಪನೆಯಿಂದ ಸಂಶೋಧನಾ ವಿಷಯದವರೆಗೆ : ಪರಿಣಾಮಕಾರಿ ವಿಷಯ ಆಯ್ಕೆಯ ತಂತ್ರಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪ್ರೊ. ಬಿಂದು ಟಿ., ಸಹಾಯಕ ಪ್ರಾಧ್ಯಾಪಕ ಮರ್ವಿನ್ ಡಿಸೋಜಾ, ಉಪನ್ಯಾಸಕಿಯರಾದ ಸ್ಮಿತಾ ಹಾಗೂ ನಾಗಲಕ್ಷ್ಮಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಾಲರಾಜ್ ಡಿ. ಬಿ., ಸಂಶೋಧನಾ ವಿಷಯವನ್ನು ಆಯ್ಕೆ ಮಾಡುವಲ್ಲಿ ಅನುಸರಿಸಬೇಕಾದ ವಿಧಾನಗಳು, ಉತ್ತಮ ಸಂಶೋಧನಾ ವಿಷಯದ ಲಕ್ಷಣಗಳು, ಸಾಹಿತ್ಯ ಸಮೀಕ್ಷೆಯ ಮಹತ್ವ ಹಾಗೂ ಸಂಶೋಧನಾ ಕ್ಷೇತ್ರದಲ್ಲಿನ ಹೊಸ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಿದರು.

ಪ್ರಥಮ ಎಂ.ಕಾಂ ವಿದ್ಯಾರ್ಥಿಗಳಾದ ಸ್ನೇಹಾ ಮತ್ತು ತಂಡ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವಿನಾಶ್ ಕಾರ್ಯಕ್ರಮ ನಿರೂಪಿಸಿದರು. ಪ್ರಜ್ವಲ್ ಸ್ವಾಗತಿಸಿದರು. ಪ್ರತೀಕ್ಷಾ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಪೂಜಾ ವಂದಿಸಿದರು. ಕಾರ್ಯಕ್ರಮವನ್ನು ಎಂ.ಕಾಂ. ಸಂಯೋಜಕ ಡಾ. ದತ್ತ ಕುಮಾರ್ ಸಂಘಟಿಸಿದರು. ಕಾರ್ಯಕ್ರಮದಲ್ಲಿ ಎಂ.ಕಾಂ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.