ಬಾಲ ಕಾರ್ಮಿಕರ ನೇಮಿಸಿಕೊಂಡರೆ ಕಾನೂನು ಕ್ರಮ: ಮೀನಾ ನಾಗರಾಜ್‌

| Published : Jun 02 2024, 01:46 AM IST

ಸಾರಾಂಶ

ಚಿಕ್ಕಮಗಳೂರು, ಜಿಲ್ಲೆಯಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯ ಲ್ಲಿ ಕಾರ್ಮಿಕರ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಿಂದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆ

ಕನ್ನಡಪ್ರಭ ವಾರ್ತೆ,ಚಿಕ್ಕಮಗಳೂರು

ಜಿಲ್ಲೆಯಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಮಿಕರ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಿಂದ ಶನಿವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಗಡಿ ಮತ್ತು ವಾಣಿಜ್ಯ ಉದ್ದಿಮೆ ಗಳು, ಗ್ಯಾರೇಜ್‌ಗಳು, ಕಾಫಿ ಪ್ಲಾಂಟೇಷನ್, ಹೋಟೆಲ್ ಮತ್ತಿತರ ಪ್ರದೇಶಗಳಲ್ಲಿ ಬಾಲ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆ ನಡೆಸಿ ಕ್ರಮಕೈಗೊಳ್ಳಬೇಕು ಎಂದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಅಂಗಡಿ ವಾಣಿಜ್ಯ ಸಂಸ್ಥೆಗಳಿಗೆ ಪರವಾನಿಗೆ ಕೊಡುವ ಸಮಯದಲ್ಲಿ ಮಾಲೀಕರಿಗೆ ಬಾಲ ಮತ್ತು ಕಿಶೋರ ಕಾರ್ಮಿಕನನ್ನು ನೇಮಿಸಿಕೊಳ್ಳದಂತೆ ತಿಳುವಳಿಕೆ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಇದುವರೆಗೆ 2176 ತಪಾಸಣೆ ಮಾಡಿ, ದಾಖಲು ಮಾಡಿರುವ 23 ಪ್ರಕರಣಗಳಲ್ಲಿ 22 ಪ್ರಕರಣಗಳಿಗೆ ಪರಿಹಾರ ಕಂಡು ಕೊಳ್ಳಲಾಗಿದೆ. 10 ಪ್ರಕರಣಗಳಲ್ಲಿ ದಂಡ ಹಾಕಲಾಗಿದೆ ಎಂದ ಜಿಲ್ಲಾಧಿಕಾರಿಗಳು, ಇದೇ ಜೂನ್ 12 ರಂದು ಬಾಲ ಕಾರ್ಮಿಕರ ನಿರ್ಮೂಲನ ದಿನದಂದು ಅರ್ಥಪೂರ್ಣವಾಗಿ ವಿವಿಧ ಇಲಾಖೆಗಳು ಸೇರಿ ಆಚರಿಸಲು ಹಾಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಹಾಯಕ ಕಾರ್ಮಿಕ ಆಯುಕ್ತ ಕೆ.ಎಲ್. ರವಿಕುಮಾರ್ ಇಲಾಖೆಯ ಮಾಹಿತಿ ಸಭೆಗೆ ನೀಡಿದರು.ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಹಾಗೂ ಜಿಲ್ಲಾ ಮಟ್ಟದ ಅನುಷ್ಟಾಣಾಧಿಕಾರಿಗಳು ಉಪಸ್ಥಿತರಿದ್ದರು.

ಪೋಟೋ ಫೈಲ್‌ ನೇಮ್‌ 1 ಕೆಸಿಕೆಎಂ 5ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆ ನಡೆಯಿತು. ಎಸ್ಪಿ ಡಾ.ವಿಕ್ರಂ ಅಮಟೆ, ನ್ಯಾ. ಹನುಮಂತಪ್ಪ ಇದ್ದರು.