ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ

| Published : Dec 28 2024, 12:46 AM IST

ಸಾರಾಂಶ

ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯ ಅಭಿಷೇಕ್ ನಗರದ ರಸ್ತೆ ಒತ್ತುವರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ನಗರದ ಅಭಿವೃದ್ಧಿ ಸೇರಿದಂತೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಯಾರೂ ಅಡ್ಡಿಪಡಿಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಕೆಲಸಕ್ಕೆ ದುರುದ್ದೇಶದಿಂದ ಅಡ್ಡಿಪಡಿಸಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಬೆಳಗ್ಗೆ ಬಳ್ಳಾರಿ ರಸ್ತೆಯ ಅಭಿಷೇಕ್ ನಗರಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿಯಿಂದ ಅಭಿಷೇಕ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಸರ್ಕಾರಿ ಗೋಮಾಳವನ್ನು ಖಾಸಗಿ ವ್ಯಕ್ತಿಯೊಬ್ಬ ಅಕ್ರಮಿಸಿಕೊಂಡು ರಸ್ತೆ ಬಿಡಲು ತಕರಾರುವೆತ್ತಿದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿ ತಹಸೀಲ್ದಾರ್, ಪೌರಾಯುಕ್ತರ ಮತ್ತು ಸರ್ವೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಕೂಡಲೇ ಮಾರ್ಕ್ ಮಾಡಿ ರಸ್ತೆ ನಿರ್ಮಿಸುವ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ ಅವರು, ಅಡ್ಡಿಪಡಿಸಲು ಯತ್ನಿಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದರು.

ತಹಸೀಲ್ದಾರ್ ರೇಹಾನ್ ಪಾಷ ಮಾತನಾಡಿ, ಕಳೆದ ಮೂರು ದಿನಗಳ ಹಿಂದೆ ಭೇಟಿ ನೀಡಿ ಸೂಚನೆ ನೀಡಿದರೂ ಸಹ ರಸ್ತೆ ಬಿಟ್ಟುಕೊಡಲು ಸಿದ್ದರಿಲ್ಲ. ಆದ್ದರಿಂದ ಕೂಡಲೇ ಸಾರ್ವಜನಿಕರ ಹಿತದೃಷ್ಠಿಯಿಂದ ರಸ್ತೆ ನಿರ್ಮಿಸಲಾಗುವುದು. ಈ ಬಗ್ಗೆ ಈಗಾಗಲೇ ಶಾಸಕ ಟಿ.ರಘುಮೂರ್ತಿ ಸಹ ಸೂಚನೆ ನೀಡಿದ್ದಾರೆ. ಸರ್ಕಾರಿ ಗೋಮಾಳ ಕಬಳಿಕೆಯಿಂದ ನಿವಾಸಿಗಳು ಸುತ್ತಿಬಳಿಸಿ ಅಭಿಷೇಕ್ ನಗರಕ್ಕೆ ಹೋಗಬೇಕಿದೆ. ನೇರ ರಸ್ತೆಯಾದರೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಹೇಳಿದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಜೈತುಂಬಿ, ಪೌರಾಯುಕ್ತ ಎಚ್.ಜಿ.ಜಗರೆಡ್ಡಿ, ಸಹಾಯಕ ಎಂಜಿನಿಯರ್ ಲೋಕೇಶ್, ಸರ್ವೆ ಅಧಿಕಾರಿ ಪ್ರಸನ್ನ ಕುಮಾರ್ ಸೇರಿ ಅನೇಕರಿದ್ದರು.