ಕರ್ನಾಟಕ ರಾಜ್ಯ ಸರ್ಕಾರ ಇಂದು ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ನಾವು ಇದನ್ನು ಖಂಡಿಸುತ್ತೇವೆ, ಅಲ್ಲದೆ ಇದರ ವಿರುದ್ದ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ರಾಜ್ಯ ಸರ್ಕಾರ ಇಂದು ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ನಾವು ಇದನ್ನು ಖಂಡಿಸುತ್ತೇವೆ, ಅಲ್ಲದೆ ಇದರ ವಿರುದ್ದ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ವಾಕ್ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯಮೊಟಕುಗೊಳಿಸುವ ಕಾನೂನು. ಈಗಾಗಲೇ ದ್ವೇಷದ ಭಾಷಣ ತಡೆಯಲು ಸಾಕಷ್ಟು ಕಾನೂನುಗಳಿವೆ. ಆ ಕಾನೂನು ಬಳಸಬಹುದು. ಆದರೆ, ಹತ್ತು ವರ್ಷದ ಶಿಕ್ಷೆ ಕಾನೂನು ತಂದು ಸರ್ಕಾರದ ವಿರುದ್ದ, ಅವರ ಪಕ್ಷದ ವಿರುದ್ದ ಮಾತನಾಡುವವರಿಗೆ ಜಾಮೀನುರಹಿತ ವಾರಂಟ್ ತಂದು ಜೈಲಿಗೆ ಕಳುಹಿಸುವ ಹುನ್ನಾರ ಇದರಲ್ಲಿ ಇದೆ. ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧ ಎಂದು ಆರೋಪಿಸಿದ್ದಾರೆ.
ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಆಗಿದೆ ಎಂಬ ಭಾವನೆ ಬರುತ್ತಿದೆ. ಸರ್ಕಾರ ಯಾವುದೇ ಅಭಿವೃದ್ದಿ ಕೆಲಸ ಮಾಡದೆ, ಎಲ್ಲ ರಂಗದಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿದೆ. ದೀನ ದಲಿತರ ಹಣವನ್ನು ಲಪಟಾಯಿಸಿರುವ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಅದರ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ, ಅವರ ಧ್ವನಿ ಧಮನಿಸುವ ಧಮನಕಾರಿ ಕಾನೂನು ತಂದಿದ್ದಾರೆ. ಇದು ಒಂದು ರೀತಿಯಲ್ಲಿ ಸಿದ್ದರಾಮಯ್ಯ ಅವರ ರಾಜಕಾರಣಕ್ಕೆ ಇದು ಕಪ್ಪು ಚುಕ್ಕೆ. ವ್ಯಕ್ತಿ ಸ್ವಾತಂತ್ರ್ಯ ಹಾಗೂ ಸಂವಿಧಾನದ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದರ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ. ನಾವು ಇದನ್ನು ಖಂಡಿಸುತ್ತೇವೆ. ಅಲ್ಲದೆ ಇದರ ವಿರುದ್ಧ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.