ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ: ಡಾ. ಕೆ.ವಿದ್ಯಾ ಕುಮಾರಿ

| Published : Sep 22 2024, 01:56 AM IST

ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ: ಡಾ. ಕೆ.ವಿದ್ಯಾ ಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತಾರಾಷ್ಟ್ರೀಯ ಕಡಲ ತೀರ ಸ್ವಚ್ಛತಾ ದಿನದ ಅಂಗವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ಕಡಲ ತೀರ ಸ್ವಚ್ಛತಾ ದಿನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಜಲಚರಗಳ ಅಸ್ತಿತ್ವಕ್ಕೆ ತೊಂದರೆಯಾಗುತ್ತಿದೆ. ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಡಲ ತೀರ ಸ್ವಚ್ಛತಾ ದಿನವನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಸಮುದ್ರ ತೀರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಹೇಳಿದರು.ಅವರು ಶನಿವಾರ ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತಾರಾಷ್ಟ್ರೀಯ ಕಡಲ ತೀರ ಸ್ವಚ್ಛತಾ ದಿನದ ಅಂಗವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ನಡೆದ ಕಡಲ ತೀರ ಸ್ವಚ್ಛತಾ ದಿನ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಸಾರ್ವಜನಿಕರು ಅನುಪಯುಕ್ತ ಪ್ಲಾಸ್ಟಿಕ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೀದಿಬದಿ ಎಸೆಯುವುದರಿಂದ ಪರಿಸರ ಮಾಲಿನ್ಯ ಆಗುವುದಲ್ಲದೇ, ಅವುಗಳು ಸಮುದ್ರ ತಲುಪಿ ಜಲಚರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ 2 ವಾರಗಳ ಕಾಲ ಸ್ವಚ್ಛತಾ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಧ್ಯೇಯ ವಾಕ್ಯವನ್ನು ಬೋಧಿಸಲಾಯಿತು. ನಂತರ ಕೋಡಿ ಕಡಲತೀರದಲ್ಲಿರುವ ತ್ಯಾಜ್ಯಗಳನ್ನು ವಿಂಗಡಿಸಿ ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿ ಅಮೃತಾ ಗುಪ್ತಾ, ಪರಿಸರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ರಂಗಸ್ವಾಮಿ, ಸಾಮಾಜಿಕ ಅರಣ್ಯದ ಅರಣ್ಯಾಧಿಕಾರಿ ರವೀಂದ್ರನಾಥ್ ಹಾಗೂ ಕುಂದಾಪುರ ಪುರಸಭೆಯ ಕಾರ್ಯ ನಿರ್ವಹಣಾಧಿಕಾರಿ ಆನಂದ, ಕುಂದಾಪುರ ಪುರಸಭೆಯ ಅಧಿಕಾರಿಗಳು ಹಾಗೂ ಸ್ವಚ್ಛತಾ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ, ಪರಿಸರ ಇಲಾಖೆ ಹಾಗೂ ಬಿ.ಬಿ.ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಭಾಗವಹಿಸಿದ್ದರು.