ಕನ್ನಡಪ್ರಭ ವಾರ್ತೆ, ಶಿಡ್ಲಘಟ್ಟ:
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ರಾಜ್ಯಸಭಾ ಸದಸ್ಯತ್ವ ಅವಧಿ ಬರುವ ಜೂನ್ ನಲ್ಲಿ ಮುಕ್ತಾಯವಾಗುವುದರಿಂದ ಮತ್ತೊಮ್ಮೆ ರಾಜ್ಯಸಭೆಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಕಳಿಸಬೇಕು ಎಂಬುದೇ ನಮ್ಮ ಆಶಯ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.ನಗರದ ಹೊರಹೊಲಯದ ಹಂಡಿಗನಾಳ ಗ್ರಾಮದ ಶ್ರೀ ಬಾಲಾಜಿ ಕನ್ವೆನ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಮಣ್ಣಿನ ಮಗ ಹೆಚ್. ಡಿ. ದೇವೇಗೌಡ ಅವರ 94ನೇ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಮಾತನಾಡಿ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಉತ್ತಮ ರಾಜಕೀಯ ಭವಿಷ್ಯ ಇದೆ ಎಂದರು. ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಿದರೆ, ರಾಜ್ಯದ ರೈತರಿಗೆ ಹೆಮ್ಮೆಯಾಗುತ್ತದೆ. ರಾಜ್ಯ ಅಭಿವೃದ್ಧಿಯಾಗುತ್ತದೆ ಅದರಲ್ಲೂ ಮುಖ್ಯವಾಗಿ ನೀರಾವರಿ ಯೋಜನೆಗಳು, ರೈತರ ಪರ ಸದನದಲ್ಲಿ ಧ್ವನಿ ಎತ್ತಲಿದ್ದಾರೆ. ಅಷ್ಟೇ ಅಲ್ಲದೆ ಈ ರಾಜ್ಯದ ಪರ ಯೋಜನೆಗಳನ್ನು, ಅನುದಾನಗಳನ್ನು ತರುವ ಪ್ರಯತ್ನವನ್ನು ಅವರು ಮಾಡುತ್ತಾರೆಂಬ ನಂಬಿಕೆಯಿದೆ ಎಂದರು.ಈ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದ ರಾಜು, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಯ್ಯ, ಕೆಂಚಾರ್ಲಹಳ್ಳಿ ಕೃಷ್ಣಾರೆಡ್ಡಿ, ಶಿಡ್ಲಘಟ್ಟ ತಾಲೂಕು ಜೆಡಿಎಸ್ ಅಧ್ಯಕ್ಷ ಡಿ.ಬಿ. ವೆಂಕಟೇಶ್, ನಗರ ಘಟಕ ಅಧ್ಯಕ್ಷೆ ಮಂಜುಳಮ್ಮ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಜಿಲ್ಲಾ ಜೆಡಿಎಸ್ ಮುಖಂಡ ವಕ್ಕಲೇರಿ ರಾಮು, ಪೂಲಕುಂಟಹಳ್ಳಿ ರಘುನಾಥರೆಡ್ಡಿ, ಮುಖಂಡರಾದ ಗಂಜಿಗುಂಟೆ ನರಸಿಂಹಮೂರ್ತಿ, ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.
ಸುದ್ದಿ ಚಿತ್ರ ೧ಹಂಡಿಗನಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ 94ನೇ ಹುಟ್ಟುಹಬ್ಬದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.