ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಿರಲಿ: ಶಾಸಕ ರಾಜುಗೌಡ

| Published : Feb 13 2025, 12:47 AM IST

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಿರಲಿ: ಶಾಸಕ ರಾಜುಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಯಾವುದೇ ಅನುದಾನ ವಾಪಸ್ ಹೋಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನಿಗಾ ವಹಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಬುಧವಾರ ನಡೆದ 2024-25ನೇ ಸಾಲಿನ 01 ತ್ರೈಮಾಸಿಕದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿನಿತ್ಯ ನನ್ನ ಗಮನಕ್ಕೆ ತರುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲರಾಗಿದ್ದೀರಿ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದ ಹಾಗೇ ಕ್ರಮ ಕೈಗೊಳ್ಳಲು ಪಿಡಿಒ, ಇಒ, ಕೆಇಬಿ ಹಾಗೂ ಕುಡಿಯುವ ನೀರು ಇಲಾಖೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳ ಸಹಕಾರ ಅತ್ಯಗತ್ಯವಾಗಿದೆ. ಕರ್ತವ್ಯ ನಿಷ್ಠೆ, ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ಎಂದು ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕರು ಏರುಧ್ವನಿಯಲ್ಲಿ ಅಧಿಕಾರಿಗಳ ವಿರುದ್ಧ ಗುಡುಗಿದರು.

ಸಭೆಯಲ್ಲಿ ತೋಟಗಾರಿಕೆ, ಕೃಷಿ, ಪಂಚಾಯತ್ ರಾಜ್, ಅರಣ್ಯ, ಆರೋಗ್ಯ, ಅಕ್ಷರ ದಾಸೋಹ, ಕೆಆರ್‌ಐಡಿಎಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು ತಮ್ಮ-ತಮ್ಮ ಇಲಾಖೆಯ ಪ್ರಗತಿ ವಿವರ ಮಂಡಿಸಿದರು. ಈ ಸಂದರ್ಭದಲ್ಲಿ ಕೆಡಿಪಿ ನೂತನ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಮಾಡಲಾಯಿತು.

ವೇದಿಕೆಯ ಮೇಲೆ ಜಿಪಂ ಯೋಜನಾ ಅಧಿಕಾರಿ ನಿಂಗಪ್ಪ ಗೋಠೆ, ತಹಸೀಲ್ದಾರ್ ಪ್ರಕಾಶ ಸಿಂದಗಿ, ಬಾಗೇವಾಡಿ ತಹಸೀಲ್ದಾರ್ ಎಸ್.ಎಸ್. ಸೋಮನಕಟ್ಟಿ, ತಾಳಿಕೋಟಿ ತಹಸೀಲ್ದಾರ್ ಕೀರ್ತಿ ಚಾಲಕ, ತಾಪಂ ಇಒ ಭಾರತಿ ಚೆಲುವಯ್ಯ, ಪ್ರಕಾಶ ದೇಸಾಯಿ, ಪಪಂ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ, ಕೆಡಿಪಿ ಸದಸ್ಯರಾದ ಪ್ರಕಾಶ ಗುಡಿಮನಿ, ಮುರ್ತೂಜಾ ತಾಂಬೋಳಿ, ಸಂತೋಷ ಸಾಸಟ್ಟಿ, ಶಂಕ್ರಪ್ಪ ಬಂಗಾರಗುಂಡ, ಭೀಮರಾಯ ಬುಳ್ಳಾ ಸೇರಿದಂತೆ ನಾಲ್ಕು ತಾಲೂಕಿನ ತಾಲೂಕು ಮಟ್ಟದ ಅಧಿಕಾರಿಗಳು, ತಾಪಂ ಸಿಬ್ಬಂದಿ ವರ್ಗ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪೊಲೀಸರಿಗೆ ನೂತನ ವಾಹನ ವಿತರಿಸಿದ ಶಾಸಕ ರಾಜುಗೌಡ

ದೇವರಹಿಪ್ಪರಗಿ:

ಶಾಸಕರ ಅನುದಾನದಲ್ಲಿ ಪಟ್ಟಣದ ಪೊಲೀಸ್ ಠಾಣೆಗೆ ನೂತನ ಬೊಲೆರೋ ವಾಹನವನ್ನು ಪಿಎಸ್ಐ ಬಸವರಾಜ ತಿಪ್ಪರಡ್ಡಿಗೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ವಿತರಿಸಿದರು.

ಪಟ್ಟಣದ ಪ್ರವಾಸಿ ಮಂದಿರದ ಬಳಿ ಬುಧವಾರ ವಾಹನ ವಿತರಣೆ ಮಾಡಿ ಮಾತನಾಡಿದ ಅವರು, ಪೊಲೀಸ್ ಠಾಣೆಗೆ ವಾಹನಗಳ ಅವಶ್ಯಕತೆ ಇದೆ. ಪಟ್ಟಣದ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಕಾರಣ ವಾಹನಗಳ ದಟ್ಟಣೆಯನ್ನು ನಿಭಾಯಿಸಲು ಹಾಗೂ ಪೊಲೀಸ್ ಠಾಣೆ ಹೆಚ್ಚು ಜನಸ್ನೇಹಿಯಾಗಲು ಬೇಕಾದ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು. ಜಿಪಂ ಯೋಜನಾಧಿಕಾರಿ ನಿಂಗಪ್ಪ ಗೋಠೆ, ತಹಸೀಲ್ದಾರ್ ಪ್ರಕಾಶ ಸಿಂದಗಿ, ತಾಪಂ ಇಒ ಭಾರತಿ ಚೆಲುವಯ್ಯ, ಪಪಂ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟೆ ಸೇರಿ ತಾಲೂಕು ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.