ಹೊನ್ನಾವರ: ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಪಪಂ ಮುಖ್ಯಾಧಿಕಾರಿ ಏಸು ಎಸ್‌. ಬೆಂಗಳೂರು ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರಕೃತಿಯನ್ನು ರಕ್ಷಿಸುವುದು ಮತ್ತು ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಡುಗೊರೆಯಾಗಿ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಜಾಗತಿಕ ತಾಪಮಾನ ನಿಯಂತ್ರಿಸಲು ಪ್ರತಿಯೊಬ್ಬರೂ ಕನಿಷ್ಠ ಒಂದೊಂದು ಗಿಡವನ್ನು ನೆಟ್ಟು, ಅದನ್ನು ಪೋಷಿಸಿ ಬೆಳೆಸಬೇಕು. ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗದೇ ನಿರಂತರ ಪ್ರಕ್ರಿಯೆಯಾಗಬೇಕು ಎಂದು ಅವರು ಕರೆ ನೀಡಿದರು.

ಲೋಕ ಕಲ್ಯಾಣ ಮೇಳ: ಇದೇ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಸ್ಥರ ಆರ್ಥಿಕ ಸಬಲೀಕರಣ ಹಾಗೂ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಹೊನ್ನಾವರ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ''ಲೋಕ ಕಲ್ಯಾಣ ಮೇಳ'' ಹಮ್ಮಿಕೊಳ್ಳಲಾಗಿತ್ತು.

ಮೇಳದಲ್ಲಿ ಉಪಸ್ಥಿತರಿದ್ದ ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರು, ಬೀದಿಬದಿ ವ್ಯಾಪಾರಿಗಳಿಗೆ ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ವ್ಯವಹಾರದ ಮಹತ್ವ ಹಾಗೂ ಅದರ ಬಳಕೆಯಿಂದ ಸಿಗುವ ಪ್ರಯೋಜನಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಇದೇ ವೇಳೆ, ಬೀದಿಬದಿ ವ್ಯಾಪಾರಿಗಳ ಸ್ವಾವಲಂಬನೆಗಾಗಿ ಸರ್ಕಾರದ ವತಿಯಿಂದ ಸಿಗುವ ವಿವಿಧ ಸಾಲ ಸೌಲಭ್ಯಗಳು, ವಿಶೇಷವಾಗಿ ''''''''ಪಿ.ಎಂ. ಸ್ವನಿಧಿ'''''''' ಯೋಜನೆ ಮತ್ತು ಕಡಿಮೆ ಬಡ್ಡಿದರದಲ್ಲಿ ಸಿಗುವ ಸಾಲಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ವ್ಯಾಪಾರಿಗಳಲ್ಲಿದ್ದ ಗೊಂದಲಗಳನ್ನು ಪರಿಹರಿಸಿದರು.

ಶ್ರಮಯೋಗಿ ಮಾನ್‌-ಧನ್‌: ಪಪಂ ಆವರಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (PM-SYM) ಪಿಂಚಣಿ ಯೋಜನೆಯ ನೋಂದಣಿ ಕಾರ್ಯಕ್ಕೆ ಎಸ್‌ಕೆಡಿಆರ್‌ಪಿ ಸಂಘದವರು ನೋಂದಣಿ ಕೌಂಟರ್‌ ತೆರೆದಿದ್ದು, ಅರ್ಹ ವ್ಯಾಪಾರಸ್ಥರು ಮತ್ತು ಶ್ರಮಿಕರು ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿ ಬದಿ ವ್ಯಾಪಾಸ್ಥರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡರು.


ಪಟ್ಟಣದ ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರು ಹಾಗೂ ಹಿರಿಯ ಅಧಿಕಾರಿಗಳು ಹಾಗೂ ಪಟ್ಟಣದ ಪ್ರಮುಖ ಬೀದಿ ಬದಿ ವ್ಯಾಪಾರಸ್ಥರು, ಪಟ್ಟಣ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.