ಸಾರಾಂಶ
ಕನ್ನಡಪ್ರಭ ವಾರ್ತೆ ಗದಗ
ಅಧಿಕಾರಿಗಳು ಜನಸಾಮಾನ್ಯರಿಗೆ ವಿವಿಧ ಸೌಲಭ್ಯಗಳನ್ನು ತಲುಪಿಸುವಲ್ಲಿ ಸಮಯೋಚಿತವಾಗಿ, ಪ್ರಾಮಾಣಿಕವಾಗಿ, ನಿಷ್ಠೆಯಿಂದ ಕರ್ತವ್ಯ ನಿರ್ವಹಿಬೇಕು. ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆ ಹಾಗೂ ಸೌಜನ್ಯದಿಂದ ವರ್ತಿಸುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.ಶುಕ್ರವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಸಾರ್ವಜನಿಕರಿಂದ ಅಹವಾಲು ಹಾಗೂ ಮನವಿ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ಸಂವಿಧಾನ ಸಮಪಾಲು,ಸಮಬಾಳು ಎನ್ನುವ ಪವಿತ್ರ ಧ್ಯೇಯೋದ್ದೇಶವನ್ನು ಹೊಂದಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಗೌರವಯುತ ಜೀವನ ನಡೆಸಲು ಅವರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕಾನೂನುಗಳು ಹಾಗೂ ವಿವಿಧ ಸೌಲಭ್ಯಗಳು ತಾಯಿ ಗರ್ಭದಲ್ಲಿರುವಾಗಲೇ ಆ ಮಗುವಿಗೆ ಪ್ರಾರಂಭವಾಗುತ್ತವೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ಕೊಟ್ಟಿದ್ದು, ಅವುಗಳು ಸದುಪಯೋಗವಾಗಬೇಕು. ನಮಗೆ ದೇಶ ಏನು ಕೊಟ್ಟಿದೆ ಎನ್ನುವುದರ ಬದಲು ದೇಶಕ್ಕಾಗಿ ನಾವು ಏನು ಕೊಟ್ಟಿದ್ದೇವೆ ಎಂದು ಪ್ರತಿಯೊಬ್ಬರೂ ತಮ್ಮಷ್ಟಕ್ಕೆ ತಾವೇ ಅರ್ಥೈಸಿಕೊಳ್ಳಬೇಕಾಗಿದೆ ಎಂದರು.ಯಾವುದೇ ಆಮಿಷಕ್ಕೆ ಒಳಗಾಗದೇ ಸಂದರ್ಭಾನುಸಾರ ಕಾನೂನು ನಿಯಮಾವಳಿಗಳ ಪ್ರಕಾರ ಭ್ರಷ್ಟಾಚಾರರಹಿತ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ನೌಕರನ ಕರ್ತವ್ಯ. ಸಾರ್ವಜನಿಕರಿಂದ ತೆರಿಗೆ ರೂಪದಲ್ಲಿ ಬಂದ ಹಣವನ್ನು ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ವಿನಿಯೋಗಿಸುತ್ತದೆ. ಆಸ್ಪತ್ರೆಗಳ ನಿರ್ಮಾಣ, ರಸ್ತೆ, ಶಿಕ್ಷಣ, ಹೀಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಇಲಾಖಾಧಿಕಾರಿಗಳು ವಿನಾಕಾರಣ ವಿಳಂಬ ನೀತಿ ಅನುಸರಿಸಬಾರದು. ನೌಕರರ ಕರ್ತವ್ಯ, ದುರ್ನಡತೆಗೆ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಲು ಮತ್ತು ವರದಿ ಮಾಡಲು ಸ್ಥಾಪಿಸಿರುವ ಸಂಸ್ಥೆಯೇ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಾಗಿದೆ ಎಂದು ಹೇಳಿದರು.
ದೂರುದಾರರು ಅವರ ಕುಂದುಕೊರತೆ ಹಾಗೂ ಪರಿಹಾರದ ಬಗ್ಗೆ ಸ್ಪಷ್ಟವಾಗಿ ತಿಳಿಸಿ, ಅವರ ಹೆಸರು, ದೂರವಾಣಿ ಸಂಖ್ಯೆ, ಇಮೇಲ್ ಐ.ಡಿ. ಸಂಪೂರ್ಣ ವಿಳಾಸ ಮತ್ತು ಸಾರ್ವಜನಿಕ, ಸರ್ಕಾರಿ ನೌಕರರ ಹೆಸರು, ವಿಳಾಸ, ಹುದೆಯ ವಿವರಗಳನ್ನು ದೂರಿನಲ್ಲಿ ತಿಳಿಸಬೇಕು. ದೂರಿನ ಜೊತೆಗೆ ನಮೂನೆ-1 ಮತ್ತು 2ನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳ ದೃಢೀಕೃತ ಅಥವಾ ಯಥಾ ಪ್ರತಿಗಳೊಂದಿಗೆ ಲೋಕಾಯುಕ್ತ ಸಂಸ್ಥೆಗೆ ನೀಡಬೇಕು ಎಂದರು.ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನೂಕು ನುಗ್ಗಲಾಗದಂತೆ ಒಬ್ಬೊಬ್ಬರಾಗಿ ತಮ್ಮ ಅಹವಾಲುಗಳೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದೂರು ನೀಡಲು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ಪಿ ಬಿ.ಎಸ್. ನೇಮಗೌಡ, ಜಿಪಂ ಸಿಇಒ ಭರತ್ ಎಸ್., ಹೆಚ್ಚುವರಿ ಎಸ್ಪಿ ಎಂ.ಬಿ. ಸಂಕದ, ಸಂಪನ್ಮೂಲ ವ್ಯಕ್ತಿ ಪ್ರಕಾಶ ನಾಡಗೇರ, ಉಪನಿಬಂಧಕ ಅಮರನಾರಾಯಣ ಕೆ., ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ, ಪಿ.ಎಂ. ಪಾಟೀಲ, ಗದಗ ಲೋಕಾಯುಕ್ತ ಎಸ್ಪಿ ಸತೀಶ ಚಿಟಗುಬ್ಬಿ, ಡಿವೈಎಸ್ಪಿ ವಿಜಯ ಬಿರಾದಾರ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಜಿ.ಎಸ್. ಪಲ್ಲೇದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.ವೆಂಕಟೇಶ ಅಲ್ಕೋಡ ಹಾಗೂ ತಂಡದವರು ನಾಡಗೀತೆ ಪ್ರಸ್ತುತಪಡಿಸಿದರು. ಪ್ರಾಚಾರ್ಯ ಬಸವರಾಜ ಗಿರಿತಿಮ್ಮಣ್ಣವರ ನಿರೂಪಿಸಿದರು.