ಪ್ರತಿಯೊಬ್ಬರ ಜೀವನ, ಬದುಕು ಇತರರಿಗೆ ಸ್ಫೂರ್ತಿ ಆಗಲಿ: ಪ್ರಾಂಶುಪಾಲೆ ಎಂ.ಆರ್.ಸುಮತಿ

| Published : Nov 09 2024, 01:21 AM IST

ಪ್ರತಿಯೊಬ್ಬರ ಜೀವನ, ಬದುಕು ಇತರರಿಗೆ ಸ್ಫೂರ್ತಿ ಆಗಲಿ: ಪ್ರಾಂಶುಪಾಲೆ ಎಂ.ಆರ್.ಸುಮತಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಯೊಬ್ಬರ ಜೀವನ, ಬದುಕು ಇತರರಿಗೆ ಸ್ಫೂರ್ತಿದಾಯಕವಾಗಿರಬೇಕು. ಸದೃಢ ಮಾನಸಿಕ ಹಾಗೂ ದೈಹಿಕ ಚಟುವಟಿಕೆಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಪ್ರೇರೇಪಿಸಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಎಂ.ಆರ್.ಸುಮತಿ ಅವರು ತಿಳಿಸಿದರು. ಚಾಮರಾಜನಗರದಲ್ಲಿ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಸಮಿತಿಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರತಿಯೊಬ್ಬರ ಜೀವನ, ಬದುಕು ಇತರರಿಗೆ ಸ್ಫೂರ್ತಿದಾಯಕವಾಗಿರಬೇಕು. ಸದೃಢ ಮಾನಸಿಕ ಹಾಗೂ ದೈಹಿಕ ಚಟುವಟಿಕೆಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಪ್ರೇರೇಪಿಸಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಎಂ.ಆರ್.ಸುಮತಿ ಅವರು ತಿಳಿಸಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಆಯೋಜಿಸಲಾಗಿದ್ದ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಸಮಿತಿಗಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ನಾಯಕತ್ವ ಗುಣ ಬೆಳೆಸುತ್ತದೆ. ಉತ್ತಮ ಭವಿಷ್ಯ ವೃದ್ಧಿಸುವ ದಿಸೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ.ಥಿಯೋಡರ್ ಲೂಥರ್ ಅವರು ಮಾತನಾಡಿ, ಸಂವಿಧಾನದಿಂದ ದೇಶದ ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯುವಂತಾಗಿದೆ. ಪ್ರತಿಯೊಬ್ಬರಿಗೂ ಅವಕಾಶಗಳಿದ್ದು, ಅದನ್ನು ಸದ್ಬಳಕೆ ಮಾಡಿಕೊಂಡು ಮುಂದಿನ ಭವಿಷ್ಯ ರೂಪಿಸಿಕೊಳ್ಳಬೇಕು. ಅವಕಾಶವನ್ನು ಯಾವುದೇ ಕಾರಣಕ್ಕೂ ದುರುಪಯೋಗಪಡಿಸಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಯೋಚಿಸಿ ಮುಂದುವರಿಯಬೇಕು. ಸಮಾಜವನ್ನು ವ್ಯವಸ್ಥಿತವಾಗಿ ಕಟ್ಟುವಂತಹ ಅವಕಾಶ ಹೆಣ್ಣು ಮಕ್ಕಳಲ್ಲಿದೆ. ಪೋಷಕರು ಮಕ್ಕಳ ಮೇಲೆ ನಂಬಿಕೆ ಇಡಬೇಕು. ಪಠ್ಯೇತರ ಚಟುವಟಿಕೆಯಿಂದ ಬದುಕನ್ನು ರೂಪಿಸಿಕೊಳ್ಳುವ ಅನೇಕ ಅವಕಾಶಗಳಿವೆ. ವಿದ್ಯಾರ್ಥಿಗಳಲ್ಲಿರುವ ಸೂಕ್ತ ಪ್ರತಿಭೆ ಅನಾವರಣಗೊಳಿಸಲು ಸಾಂಸ್ಕೃತಿಕ ಸಮಿತಿ ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.

ಕೊಳ್ಳೇಗಾಲ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಜಯಶಂಕರ್, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ, ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ರಾಷ್ಟೀಯ ಸೇವಾ ಯೋಜನೆಯ ಸಂಯೋಜಕರಾದ ಡಾ. ಜಿ. ಮಲ್ಲೇಶ್, ಐ.ಕ್ಯೂ.ಎ.ಸಿ ಸಮಿತಿ ಸಂಚಾಲಕರಾದ ಎಸ್.ಆರ್. ದೀಪ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಹೆಚ್.ಎಸ್ ರುಕ್ಮಿಣಿ, ಕ್ರೀಡಾ ಸಮಿತಿಯ ಸಂಚಾಲಕ ಡಾ. ಶಾಂತರಾಜು, ರಾಷ್ಟ್ರೀಯ ಸೇವಾ ಯೋಜನೆ ಘಟಕ ಸಂಚಾಲಕಿ ಎಂ.ಸಿ. ಪ್ರಭಾವತಿ, ಪತ್ರಾಂಕಿತ ವ್ಯವಸ್ಥಾಪಕಿ ಜಿ.ಎನ್. ಸಾಕಮ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.