ಸಾರಾಂಶ
ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಬಡಜನರಿಗಾಗಿ ಬಂದ ಯೋಜನೆಗಳನ್ನು ಅಧಿಕಾರಿಗಳು ನಿಜವಾದ ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಯೋಜನೆ ಉದ್ದೇಶ ಸಾರ್ಥಕತೆ ಪಡೆಯುತ್ತದೆ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಕನ್ನಡಪ್ರಭ ವಾರ್ತೆ ಮಸ್ಕಿ
ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಬಡಜನರಿಗಾಗಿ ಬಂದ ಯೋಜನೆಗಳನ್ನು ಅಧಿಕಾರಿಗಳು ನಿಜವಾದ ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಯೋಜನೆ ಉದ್ದೇಶ ಸಾರ್ಥಕತೆ ಪಡೆಯುತ್ತದೆ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ‘ಆದಿ ಕರ್ಮಯೋಗಿ’ ಅಭಿಯಾನದ ಅಡಿಯಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 243 ಗ್ರಾಮಗಳು ಈ ಕಾರ್ಯಕ್ರಮಕ್ಕೆ ಆಯ್ಕೆ ಯಾಗಿವೆ, ಅದರಲ್ಲಿ ಮಸ್ಕಿ ಕ್ಷೆತ್ರದ 100 ಗ್ರಾಮಗಳು ಸೇರಿವೆ ಎಂದರು. ಹಿಂದುಳಿದ ಗ್ರಾಮಗಳು ಅಭಿವೃದ್ಧಿಯಾಗಬೇಕು, ಆದ್ದರಿಂದ ಪ್ರತಿಯೊಂದು ಹಳ್ಳಿಗಳಲ್ಲಿ ಸಮಸ್ಯೆಗಳನ್ನು ನೋಡಿ ಉತ್ತಮ ವ್ಯವಸ್ಥೆ ಆದಾಗ ಮಾತ್ರ ಹಳ್ಳಿಗಳು ಸುಧಾರಣೆಯಾಗಲು ಸಾಧ್ಯ ಎಂದು ಹೇಳಿದರು. ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿದಾಗ ಮಾತ್ರ ಯೋಜನೆಗಳು ಸಮರ್ಪಕವಾಗಿ ಮುಟ್ಟಲು ಸಾಧ್ಯವಾಗುತ್ತವೆ ಎಂದು ತಿಳಿಸಿದ ಅವರು ಪ್ರತಿಯೊಂದರ ಸರ್ವೇ ಕಾರ್ಯ ನಡೆಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಟಿ. ರೋಣಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಎರಡು ದಿನಗಳ ಕಾಲ ನಡೆದ ತರಬತಿಯಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ 200 ಕ್ಕೂ ಹೆಚ್ಚು ಫಲಾನುಭವಿಗಳು ಪಾಲ್ಗೊಂಡಿದ್ದರು.