ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮದಲ್ಲಿ ತಹಸೀಲ್ದಾರ

ಕನ್ನಡಪ್ರಭ ವಾರ್ತೆ ಹೊನ್ನಾವರ


ಯುವಜನರಲ್ಲಿ ದೇಶಪ್ರೇಮ ಚಿಗುರಬೇಕು. ಹೊನ್ನಾವರ ತಾಲೂಕಿನಲ್ಲಿ ಹಲವರು ಸೈನಿಕರಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಹಸೀಲ್ದಾರ ಪ್ರವೀಣ ಕರಾಂಡೆ ಹೇಳಿದರು.

ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ವತಿಯಿಂದ ಭಾನುವಾರ ಆಯೋಜಿಸಿದ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೈನಿಕರು ತಮ್ಮ ವೈಯಕ್ತಿಕ ಜೀವನವನ್ನು ಮರೆತು ದೇಶಕ್ಕಾಗಿ ಸೇವೆ ಸಲ್ಲಿಸುತ್ತಾರೆ. ತಾಲೂಕಿನಲ್ಲಿರುವ ಮಾಜಿ ಸೈನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದರು.

ಡಾ. ಅನಂತಮೂರ್ತಿ ಶಾಸ್ತ್ರಿ ಮಾತನಾಡಿ, ದೇಶಸೇವೆಯೇ ಪರಮೋಚ್ಚ ಸೇವೆ. ಸೈನಿಕರು ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವುದರಿಂದ ನಾವು ಆರಾಮಾಗಿದ್ದೇವೆ. ದಕ್ಷಿಣ ಭಾರತದಲ್ಲಿ ಗಡಿ ಭಯವಿಲ್ಲದಿರುವುದರಿಂದ ನಮಗೆ ಸೈನ್ಯದ ಬಗ್ಗೆ ಹೆಚ್ಚಿನ ಅರಿವು ಮತ್ತು ಭಾವನಾತ್ಮಕತೆಯಿಲ್ಲ. ನಾವು ನಮ್ಮ ಮನೋಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ದೇಶಸೇವೆಗೆ ನಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಕಾರ್ಗಿಲ್ ಯುದ್ಧದಲ್ಲಿ ಮಡಿದವರಿಗೆ ಪುಷ್ಪನಮನ ಸಲ್ಲಿಸಲಾಯಿತು. ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮನೆಯವರನ್ನು ಗೌರವಿಸಲಾಯಿತು. ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕ್ಯಾ. ಅಶೋಕ ನಾಯ್ಕ ಮಾತನಾಡಿದರು.

ಸಂಘದ ಗೌರವಾಧ್ಯಕ್ಷ ವಾಮನ ನಾಯ್ಕ ಹಾಗೂ ಸಂಘದ ಸದಸ್ಯರು, ವಿವಿಧ ಸಂಘಟನೆಗಳ ಪ್ರಮುಖರಾದ ಅಣ್ಣಪ್ಪ ಮುಕ್ರಿ, ಹೆನ್ರಿ ಲೀಮಾ, ಜಿ.ಎನ್.ಗೌಡ, ಎಂ.ಜಿ.ನಾಯ್ಕ, ಸುಧೀಶ ನಾಯ್ಕ, ರಾಜು ಭಂಡಾರಿ, ವಿಕ್ರಮ ನಾಯ್ಕ, ಭಾರತಿ ಡಯಾಸ್ ಮತ್ತಿತರಿದ್ದರು. ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ರಾಜೇಶ ನಾಯ್ಕ ಸ್ವಾಗತಿಸಿದರು. ಕೋಶಾಧ್ಯಕ್ಷ ರವಿ ನಾಯ್ಕ ವಂದಿಸಿದರು. ದಿನೇಶ ಕಾಮತ್ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಸಂಘಟನೆಗಳಿಂದ ಮಾಜಿ ಸೈನಿಕರನ್ನು ಗೌರವಿಸಲಾಯಿತು.