ಸಾರಾಂಶ
ನರಸಿಂಹರಾಜಪುರ, ಗ್ರಾಮ ಆರೋಗ್ಯ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸೋಣ ಎಂದು ಮೆಣಸೂರು ಗ್ರಾಪಂ ಅಧ್ಯಕ್ಷೆ ಬಿಂದುಸತೀಶ್ ಕರೆ ನೀಡಿದರು.
ಮೆಣಸೂರು ಗ್ರಾಮ ಪಂಚಾಯಿತಿ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರಗ್ರಾಮ ಆರೋಗ್ಯ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸೋಣ ಎಂದು ಮೆಣಸೂರು ಗ್ರಾಪಂ ಅಧ್ಯಕ್ಷೆ ಬಿಂದುಸತೀಶ್ ಕರೆ ನೀಡಿದರು.
ಮಂಗಳವಾರ ಮೆಣಸೂರು ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ಇಲಾಖೆ, ತಾ.ಪಂ, ಮೆಣಸೂರು ಗ್ರಾಪಂ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಕಾರ್ಯಪಡೆ ತಂಡದವರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ. ಎಲ್ಲಾ ಅಭಿವೃದ್ಧಿ ಕಾರ್ಯಗಳ ಜೊತೆಗೆ ಆರೋಗ್ಯಕ್ಕೂ ಮಹತ್ವ ನೀಡುವ ಮೂಲಕ ಸಂಪೂರ್ಣ ಗ್ರಾಮಗಳ ಅಭಿವೃದ್ಧಿ ಸಾಧಿಸಬೇಕು ಎಂದು ಸಲಹೆ ನೀಡಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ತರಬೇತಿ ನೀಡಿ, ಸರ್ಕಾರ ಗ್ರಾಪಂನ ಎಲ್ಲಾ ಸದಸ್ಯರನ್ನು ಒಳಗೊಂಡ ಕಾರ್ಯಪಡೆ ತಂಡ ಗಳಿಗೆ ಗ್ರಾಮ ಆರೋಗ್ಯ ಕಾರ್ಯಕ್ರಮದ ತರಬೇತಿಯನ್ನು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಯಲ್ಲೂ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯ ಕ್ರಮದ ಮುಖ್ಯ ಉದ್ದೇಶ ಎಂದರೆ ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ ಎಂಬ ಆಶಯ ಸಾಕಾರಗೊಳಿಸುವುದು ಮತ್ತು ಸಾರ್ವಜನಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವುದಾಗಿದೆ. ಕೋವಿಡ್ ನಿಯಂತ್ರಣದಲ್ಲಿ ಗ್ರಾಪಂ ಕಾರ್ಯಪಡೆ ತಂಡಗಳು ಯಶಸ್ವಿ ಯಾದ ಹಿನ್ನೆಲೆಯಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಕಾರ್ಯಪಡೆ ಸಮಿತಿ ಮೇಲ್ವಿಚಾರಣೆಯಲ್ಲಿ ಪ್ರಾರಂಭಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಡಾ.ನಿಶಾಲ್, ಕ್ಷಯ ರೋಗ ಪರಿವೀಕ್ಷಕ ಪವನ್ ಕರ್, ನಾಗಲತ, ಡೈಸಿ, ಪ್ರಭಾಕರ್ ಬೇರೆ ಬೇರೆ ರೋಗಗಳ ಬಗ್ಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷೆ ಪಚ್ಚೆಯಮ್ಮ, ಸದಸ್ಯರಾದ ಡಿ.ಆರ್.ಶ್ರೀನಾಥ್, ಎನ್.ಡಿ.ಪ್ರಸಾದ್, ಶಿಲ್ಪಅನಿಲ್, ಬಿನುಜೋಸೆಫ್, ಯಾಸ್ಮಿನ್, ಪಿಡಿಒ ಸಂತೋಷ್ಕುಮಾರ್, ಆರೋಗ್ಯ ಇಲಾಖೆ ಸಿಬ್ಬಂದಿ ನಮಿತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ. ಸಿಬ್ಬಂದಿ ಉಪಸ್ಥಿತರಿದ್ದರು.