ಬಿಜೆಪಿ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸುವ ಮೂಲಕ ಪಕ್ಷದ ಮುಂದೆ ಇರುವ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕಿದೆ.
ಕನ್ನಡಪ್ರಭ ವಾರ್ತೆ ಕಾರವಾರ
ಬಿಜೆಪಿ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸುವ ಮೂಲಕ ಪಕ್ಷದ ಮುಂದೆ ಇರುವ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಹೇಳಿದರು.ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಮಂಡಲ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಈ ತಿಂಗಳಲ್ಲಿ ನಡೆಯಲಿರುವ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಪ್ರತಿಯೊಂದು ಮನೆ, ಅಂಗಡಿ-ಮುಂಗಟ್ಟು ಹಾಗೂ ಸಂಘ-ಸಂಸ್ಥೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವಂತೆ ಜನಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಜಂತರ್ ಮಂತರ್ನಲ್ಲಿ ನಡೆದ ಹೋರಾಟ ವಿದ್ಯಾರ್ಥಿಗಳ ಪರವಾಗಿರದೇ, ಅದರ ಹಿಂದೆ ರಾಜಕೀಯ ಉದ್ದೇಶಗಳಿವೆ ಎಂಬುದು ಬಹಿರಂಗವಾಗಿದೆ ಎಂದು ಆರೋಪಿಸಿದರು.ಜಿಲ್ಲಾ ಉಪಾಧ್ಯಕ್ಷ ಹಾಗೂ ಹರ್ ಘರ್ ತಿರಂಗಾ ಅಭಿಯಾನದ ಜಿಲ್ಲಾ ಸಂಚಾಲಕ ಸುಬ್ರಾಯ ವಾಳ್ಕೆ, ಅಭಿಯಾನದ ಅಂಗವಾಗಿ ತಿರಂಗಾ ಯಾತ್ರೆ, ಜಾಥಾ ಹಾಗೂ ಬೈಕ್ ರ್ಯಾಲಿಗಳನ್ನು ಆಯೋಜಿಸಿ ರಾಷ್ಟ್ರಭಕ್ತಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಅಭಿಯಾನದ ಜಿಲ್ಲಾ ಸಹ-ಸಂಚಾಲಕ ರೋಷನ್ ನೇತ್ರಾವಳಿ ಮಾತನಾಡಿ, ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದರು.ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಪಕ್ಷದ ಕಾರ್ಯಕರ್ತ ಉಲ್ಲಾಸ ಧಾಮಸಾಡೇಕರ್ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು.
ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ ಪ್ರಾಸ್ತಾವಿಕವಾಗಿ ಮಾತನಾಡಿದರು.ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ ಅಧ್ಯಕ್ಷತೆ ವಹಿಸಿ, ಪಕ್ಷದ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳ ಕಾರ್ಯಕರ್ತರು ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಜಿಲ್ಲಾ ಉಪಾಧ್ಯಕ್ಷ ಸಂಜಯ ಸಾಳುಂಕೆ ಮಾತನಾಡಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ ಅಮದಳ್ಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸೂರಜ್ ದೇಸಾಯಿ ವಂದಿಸಿದರು.ಜಿಲ್ಲಾ ಉಪಾಧ್ಯಕ್ಷ ಹಾಗೂ ಮಂಡಲ ಪ್ರಭಾರಿ ಗಜಾನನ ಗುನಗಾ, ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಸುನಿಲ್ ಸೋನಿ, ಜಿಲ್ಲಾ ಮಾಧ್ಯಮ ಸಹ-ಸಂಚಾಲಕ ಕಿಶನ್ ಕಾಂಬ್ಳೆ ಇದ್ದರು.