ಸಾರಾಂಶ
ಬಳ್ಳಾರಿ: ಭಾರತವು ಸಮಾಜವಾದ ತತ್ವ, ಪ್ರಜಾಪ್ರಭುತ್ವ, ಗಣರಾಜ್ಯದ ಮತ್ತು ಜಾತ್ಯತೀತ ತತ್ವದ ಸಾರ್ವಭೌಮತ್ವನ್ನು ಆಳವಡಿಸಿಕೊಂಡಿದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ. ಅನೇಕ ಭಾಷೆಗಳನ್ನು ಮಾತನಾಡುವ ಜನ ಹಾಗೂ ವಿವಿಧ ಸಾಂಸ್ಕೃತಿಕ ಹಿನ್ನಲೆಯನ್ನು ಹೊಂದಿರುವುದು ವೈಶಿಷ್ಟಮಯ ದೇಶ ನಮ್ಮದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ತಿಳಿಸಿದರು.
ಜಿಲ್ಲಾಡಳಿತ ವತಿಯಿಂದ ನಗರದ ವಿಮ್ಸ್ ಮೈದಾನದಲ್ಲಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ, ಪಥಸಂಚಲನ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಮಾತನಾಡಿದರು.ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ಧತಿಯನ್ನು ಅಳವಡಿಸಿಕೊಂಡ ಸಂಭ್ರಮದ ದಿನ ಇಂದು. 1950ರ ಜನವರಿ 26ರಂದು ಇಡೀ ಸ್ವತಂತ್ರ ಭಾರತವನ್ನು ‘ಗಣರಾಜ್ಯವೆಂದು'''' ಘೋಷಿಸಲಾಯಿತು. ಅದೇ ದಿನದಂದು ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಜಾರಿಗೊಂಡಿತು. ಭಾರತದ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಲೇಬೇಕು ಎಂದರು.
ಭಾರತವನ್ನು ಜಗತ್ತಿನ ಅತ್ಯಂತ ಪ್ರಬುದ್ಧ, ಪ್ರಗತಿಪರ, ಭದ್ರ, ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಲು ನಾವೆಲ್ಲ ಒಂದಾಗಿ ಒಗ್ಗೂಡಬೇಕಾಗಿದೆ. ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.ಜನಪರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಜಿಲ್ಲೆಯ ಫಲಾನುಭವಿಗಳು ಸಾಕಷ್ಟು ಇದರ ಸದುಪಯೋಗ ಪಡೆದಿದ್ದಾರೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 2,51,798 ಫಲಾನುಭವಿಗಳು, ಗೃಹಲಕ್ಷ್ಮಿ ಯೋಜನೆಯಡಿ 2,69,668 ಫಲಾನುಭವಿಗಳು, ಅನ್ನಭಾಗ್ಯ ಯೋಜನೆಯಡಿ 2,61,866 ಫಲಾನುಭವಿಗಳು, ಶಕ್ತಿ ಯೋಜನೆಯಡಿ 1,28,43,670 ಫಲಾನುಭವಿಗಳು ಸದುಪಯೋಗ ಪಡೆದುಕೊಂಡಿದ್ದಾರೆ. ಯುವನಿಧಿ ಯೋಜನೆಯನ್ನು ಜ. 12ರಂದು ರಾಜ್ಯದ ಮುಖ್ಯಮಂತ್ರಿ ಅವರಿಂದ ಚಾಲನೆ ನೀಡಲಾಗಿದೆ ಎಂದರು.
75ನೇ ಗಣರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಪಥಸಂಚಲನದಲ್ಲಿ ದಳಗಳ ದಳಪತಿ ಡಿಎಆರ್ನ ಆರ್ಪಿಐ ಎ. ಗೋವಿಂದ ಅವರ ನೇತೃತ್ವದಲ್ಲಿ 30 ತಂಡಗಳು ಪರೇಡ್ ನಡೆಸಿದವು. ಪಥಸಂಚಲನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು.ಪ್ರಾಥಮಿಕ ಶಾಲೆ ವಿಭಾಗದಲ್ಲಿ ಕಿವುಡ ಮತ್ತು ಮೂಗ ಮಕ್ಕಳ ಶಾಲೆ(ಪ್ರಥಮ), ಎಂಜಿಎಂ ಪ್ರಾಥಮಿಕ ಶಾಲೆ(ದ್ವಿತೀಯ), ಬಾಲಭಾರತಿ ಪ್ರಾಥಮಿಕ ಶಾಲೆ(ತೃತೀಯ).
ಪ್ರೌಢಶಾಲೆ ವಿಭಾಗದಲ್ಲಿ ಸಂತಜಾನರ ಪ್ರೌಢಶಾಲೆ(ಪ್ರಥಮ), ಸತ್ಯ ಪ್ರೌಢಶಾಲೆ (ದ್ವಿತೀಯ) ಹಾಗೂ ಬಂಡಿಹಟ್ಟಿಯ ಸರ್ಕಾರಿ ಪ್ರೌಢಶಾಲೆಗೆ ತೃತೀಯ ಬಹುಮಾನ ಪಡೆದವು.ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ವೈ.ಎಸ್. ಯೋಗೇಶ್, ಡಿ.ಎಂ. ಲಿಪಿಕ, ರಜನಿ ಲಕ್ಕ, ಕುನಾಲ್ ಎಚ್., ಮಹಮ್ಮದ್ ಯಾಸೀನ್, ದೀಕ್ಷೀತ್.ಕೆ.ಎಸ್., ಇ. ಜಾಸ್ಮೀನ್, ತ್ರಿಶೀಕಾ ಪಿ., ನಿವೇದಿತಾ ಅವರನ್ನು ಸನ್ಮಾನಿಸಲಾಯಿತು.
ಕೊನೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮೇಯರ್ ಬಿ. ಶ್ವೇತಾ, ಉಪಮೇಯರ್ ಬಿ. ಜಾನಕಿ, ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ, ಎಸ್ಪಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಡಿಸಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.