ಸಾರಾಂಶ
ರಾಣಿಬೆನ್ನೂರು: ಅಂಬೇಡ್ಕರ್ ಚಿಂತನೆ ಎಲ್ಲ ಸಮುದಾಯವರಿಗೆ ಅವಕಾಶಗಳನ್ನು ಕಲ್ಪಿಸಿದೆ ಎಂದು ನಗರಸಭಾ ಸದಸ್ಯ ಪುಟ್ಟಪ್ಪ ಮರಿಯಮ್ಮನವರ ತಿಳಿಸಿದರು.ನಗರದ ಆಂಗ್ಲೋ- ಉರ್ದು ಹೈಸ್ಕೂಲ್ ಮೈದಾನದಲ್ಲಿ ಸೋಮವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಮತ್ತು ವಿವಿಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಒಕ್ಕೂಟಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಇಬ್ಬರನ್ನೂ ಒಂದೇ ದೃಷ್ಟಿಯಿಂದ ನೋಡಲು ಸಾಧ್ಯವಿಲ್ಲ. ಇಬ್ಬರೂ ಮಹನೀಯರು ದೇಶದ ಅಭ್ಯುದಯಕ್ಕಾಗಿ ವಿವಿಧ ರೀತಿಯ ಕೊಡುಗೆ ನೀಡಿದ್ದಾರೆ. ಆಹಾರ ಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಜಗಜೀವನರಾಂ ಚಿಂತನೆ ಕಾರಣ. ದೇಶದ ಅಭಿವೃದ್ಧಿ ದೃಷ್ಟಿಯಿಂದ ರಷ್ಯಾ ದೇಶದ ಮಾದರಿ ಪಂಚವಾರ್ಷಿಕ ಯೋಜನೆಗಳನ್ನು ಅಳವಡಿಸಲು ಅಂಬೇಡ್ಕರ್ ಕಾರಣ.ಅಂಬೇಡ್ಕರ್ ಕುರಿತು ಆಳವಾಗಿ ಅಧ್ಯಯನ ಮಾಡಿದಲ್ಲಿ ಅವರನ್ನು ಅರಿಯಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಶೋಷಿತ ವರ್ಗದ ಜನರ ಮೇಲೆ ತಾಂತ್ರಿಕ ಶೋಷಣೆ ನಡೆಯುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರು ಶೈಕ್ಷಣಿಕವಾಗಿ ಮುಂದುವರಿಯಬೇಕು ಎಂದರು.ನಗರಸಭೆ ಅಧ್ಯಕ್ಷೆ ಚಂಪಕ ಬಿಸಲಹಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ಅಂಗವಾಗಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ತಹಸೀಲ್ದಾರ್ ಆರ್.ಎಚ್. ಭಾಗವಾನ್, ನಗರಸಭೆ ಪೌರಾಯುಕ್ತ ಪಕ್ಕೀರಪ್ಪ ಇಂಗಳಗಿ, ಸದಸ್ಯರಾದ ಪ್ರಕಾಶ ಪೂಜಾರ, ಗಂಗಮ್ಮ ಹಾವನೂರ, ಡಿವೈಎಸ್ಪಿ ಡಾ. ಗಿರೀಶ ಭೋಜಣ್ಣನವರ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ನೀಲಕಂಠ ಅಂಗಡಿ, ಸಹಾಯಕ ಕೃಷಿ ನಿರ್ದೇಶಕಿ ಶಾಂತಮಣಿ, ಸಿಪಿಐ ಡಾ. ಶಂಕರ್, ಬಿಇಒ ಶ್ಯಾಮಸುಂದರ ಅಡಿಗ, ಜಿಪಂ ಮಾಜಿ ಅಧ್ಯಕ್ಷ ಮಂಜುನಾಥ ಓಲೇಕಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಕೆಂಚರೆಡ್ಡಿ, ಟಿಎಚ್ಒ ಡಾ. ರಾಜೇಶ್ವರಿ ಕದರಮಂಡಲಗಿ, ಸಿಡಿಪಿಒ ಪಾರ್ವತಿ ಹುಂಡೇಕಾರ, ನೀಲಕಂಠಪ್ಪ ಕುಸಗೂರ, ಮೈಲಪ್ಪ ಗೋಣಿಬಸಮ್ಮನವರ, ಮೈಲಪ್ಪ ದಾಸಪ್ಪನವರ, ಪ್ರಭಾಕರ ಶಿಗ್ಲಿ, ಸಣ್ಣತಮ್ಮಪ್ಪ ಬಾರ್ಕಿ, ಶೇರುಖಾನ್ ಕಾಬೂಲಿ, ಹನುಮಂತಪ್ಪ ಕಬ್ಬಾರ, ಚಂದ್ರಣ್ಣ ಬೇಡರ, ರಾಮಪ್ಪ ನಾಯಕ, ರಮೇಶ ನಾಯಕ, ಮಾಲತೇಶ ಬ್ಯಾಡಗಿ ಮತ್ತಿತರರಿದ್ದರು. ಇದಕ್ಕೂ ಪೂರ್ವದಲ್ಲಿ ಇಲ್ಲಿನ ಹರಳಯ್ಯ ನಗರದ ಮಾಯಮ್ಮ ದೇವಸ್ಥಾನ ಬಳಿಯಿಂದ ಅಂಬೇಡ್ಕರ್ ಹಾಗೂ ಜಗಜೀವನರಾಂ ಭಾವಚಿತ್ರಗಳನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಮಾರಂಭದ ಸ್ಥಳಕ್ಕೆ ತರಲಾಯಿತು.