ಕನ್ನಡಪ್ರಭ ವಾರ್ತೆ ಗುಡಿಬಂಡೆ
ಪ್ರತಿಯೊಬ್ಬ ವಿದ್ಯಾರ್ಥಿಯೂ ಇಷ್ಟಪಟ್ಟು ಓದಬೇಕು, ಆ ಮೂಲಕ ಒಳ್ಳೆಯ ಸಾಧನೆ ಮಾಡಬೇಕು. ಓದುವುದು ಕಷ್ಟ ಎಂದು ಭಾವಿಸಿದರೆ ಸಾಧನೆ ಮಾಡುವುದು ಕಷ್ಟ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ತಾಲೂಕಿನ ಕೊಂಡರೆಡ್ಡಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪ್ರಾದೇಶಿಕ ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಸೇರಿ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ 5 ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಡುವ ಅಭಿಯಾನ ಹಾಗೂ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಓದುವುದನ್ನು ಕಷ್ಟ ಎಂದು ಭಾವಿಸಿ, ಸಾಧನೆ ಮಾಡುವಲ್ಲಿ ಎಡವುತ್ತಿದ್ದಾರೆ. ಯಾವುದೇ ವಿಷಯವನ್ನು ಇಷ್ಟ ಪಟ್ಟು ಪರಿಶ್ರಮ ಹಾಗೂ ಛಲದಿಂದ ಓದುವ ಮೂಲಕ ಸಾಧನೆ ಮಾಡಬಹುದಾಗಿದೆ. ಇಂದಿನ ಆಧುನಿಕ ಕಾಲದಲ್ಲಿ ಮೊಬೈಲ್ ಹಾಗೂ ಇಂಟರ್ ನೆಟ್ ಗಳ ಕಾರಣದಿಂದ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಹದಿಹರೆಯದ ವಯಸ್ಸಿನಲ್ಲಿ ಪ್ರೀತಿ- ಪ್ರೇಮದ ಪಾಶಕ್ಕೆ ಬಿದ್ದು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಕೆಟ್ಟ ಅಭ್ಯಾಸಗಳತ್ತ ಮುಖ ಮಾಡದೇ ಓದಿನ ಕಡೆ ಗಮನ ಹರಿಸಿ ಸಾಧನೆ ಮಾಡಬೇಕು. ಮುಂದೊಂದು ದಿನ ನಮ್ಮ ಹಾಗೇ ನೀವು ವೇದಿಕೆಯ ಮೇಲೆ ಕೂತು ಒಳ್ಳೆಯ ಸಂದೇಶ ನೀಡುವಂತಾಗಬೇಕು ಎಂದರು.ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಎಲ್ಲೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ನಂತರ ಎಲ್ಲೋಡು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬಳಿಕ ಕೊಂಡರೆಡ್ಡಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮದೊಂದಿಗೆ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಅಶ್ವತ್ಥ್ ರೆಡ್ಡಿ ವಹಿಸಿದ್ದರು. ಈ ವೇಳೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಾಂತರಾಜ್, ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿದ್ದಣ್ಣ ಬಿ. ಹಂದ್ರಾಳ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಶಿಲ್ಪ ಬಿ., ಹಿರಿಯ ಶ್ರೇಣಿ ನ್ಯಾಯಾಧೀಶ ಪ್ರೇಮ್ ಕುಮಾರ್, ನ್ಯಾಯಾಧೀಶರಾದ ಮಹಾಲಕ್ಷ್ಮೀ ಹಾಗೂ ವರುಣ್ ರಾಜ್ ಆರ್., ತಹಸೀಲ್ದಾರ್ ಸಿಗ್ಬತ್ತುಲ್ಲಾ, ಕಾರ್ಯನಿರ್ವಹಣಾಧಿಕಾರಿ ನಾಗಮಣಿ, ಆರೋಗ್ಯಾಧಿಕಾರಿ ಡಾ. ಅಕ್ಷಯ್ ಶ್ರೀನಿವಾಸ್, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರಾಜಶೇಖರ್ ಸೇರಿ ನ್ಯಾಯಾಲಯದ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.