ಭಟ್ಕಳದಲ್ಲಿ ವೆಂಕಟೇಶ್ವರ ವಿದ್ಯಾವರ್ಧಕ ಸಂಘದಿಂದ ಪಿಯು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ

ಕನ್ನಡಪ್ರಭ ವಾರ್ತೆ ಭಟ್ಕಳ

ಪಟ್ಟಣದ ಆಸರಕೇರಿಯ ತಿರುಮಲ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಘದಿಂದ ಪಿಯು ವಿದ್ಯಾರ್ಥಿಗಳಿಗೆ ನೀಡುವ ಪಠ್ಯ ಪುಸ್ತಕ ವಿತರಣಾ ಸಮಾರಂಭವನ್ನು ಭಟ್ಕಳ ನಾಮಧಾರಿ ಅಭಿವೃದ್ಧಿ ಸಂಘ ಮತ್ತು ಶ್ರೀ ಗುರುಮಠದ ಅಧ್ಯಕ್ಷ ಅರುಣ ನಾಯ್ಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಉತ್ತಮವಾಗಿ ಕಲಿಯುವುದಲ್ಲದೆ ನಮ್ಮ ಸಂಸ್ಕೃತಿ, ಆಚಾರ- ವಿಚಾರವನ್ನು ಉಳಿಸಿ ಬೆಳಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಪ್ರಸ್ತುತ ವಿದ್ಯಾರ್ಥಿಗಳು ನಮ್ಮ ಪರಂಪರೆ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ನಾವು ಶಾಲೆಗೆ ಹೋಗುವಾಗ ನಮ್ಮ ಪಾಲಕರಿಗೆ ಹಾಗೂ ಗುರುಹಿರಿಯರಿಗೆ ಗೌರವ ಕೊಡುತ್ತಿದ್ದೆವು. ಶಾಲೆಗೆ ಹೋಗುವ ಮೊದಲು ತಂದೆ-ತಾಯಿಯರಿಗೆ ನಮಸ್ಕರಿಸಿ ಹೋಗುತ್ತಿದ್ದೆವು. ಆದರೆ ಇಂದಿನ ವಿದ್ಯಾರ್ಥಿಗಳು ಇದೆಲ್ಲವನ್ನು ಮರೆತಿದ್ದಾರೆ. ಇದು ಆಗಬಾರದು. ನಮ್ಮ ಸಮಾಜ, ನಮ್ಮ ದೇವಸ್ಥಾನ ಇದೆಲ್ಲವನ್ನು ಮರೆತರೆ ತಾವು ಎಷ್ಟೇ ದೊಡ್ಡ ಹುದ್ದೆಗೆ ಹೋದರೂ ಪ್ರಯೋಜನವಿಲ್ಲ. ವೆಂಕಟೇಶ್ವರ ವಿದ್ಯಾವರ್ಧಕ ಸಂಘವು ಕಳೆದ ೧೩ ವರ್ಷಗಳಿಂದ ಸಮಾಜದ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಿಯು ಪಠ್ಯಪುಸ್ತಕವನ್ನು ನೀಡುತ್ತಾ ಬಂದಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಗುರುಮಠ ದೇವಸ್ಥಾನದ ಉಪಾಧ್ಯಕ್ಷ ಹಾಗೂ ನಿವೃತ್ತ ಮುಖ್ಯಶಿಕ್ಷಕ ಎಂ.ಕೆ. ನಾಯ್ಕ, ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಕೆ.ಆರ್. ನಾಯ್ಕ ಮಾತನಾಡಿದರು. ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮನಮೋಹನ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಗುರುಮಠದ ಸದಸ್ಯರಾದ ವಾಸು ನಾಯ್ಕ, ಶ್ರೀಧರ ನಾಯ್ಕ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ ನಾಯ್ಕ ಸ್ವಾಗತಿಸಿದರು. ಚಂದ್ರಶೇಖರ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ರವಿ ನಾಯ್ಕ ವಂದಿಸಿದರು. ವಿವಿಧ ಕ್ಷೇತ್ರದಲ್ಲಿ ಮಾಡಿದ ಸಾಧನೆ ಪರಿಗಣಿಸಿ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಕೆ.ಆರ್. ನಾಯ್ಕರನ್ನು ಗೌರವಿಸಿ ಸನ್ಮಾನಿಸಲಾಯಿತು.

-------

22ಬಿಕೆಲ್1: ಭಟ್ಕಳದ ವೆಂಕಟೇಶ್ವರ ವಿದ್ಯಾವರ್ಧಕ ಸಂಘದಿಂದ ಪಿಯು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.