ಕನ್ನಡಪ್ರಭ ವಾರ್ತೆ ಜಮಖಂಡಿಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ಸಮಾಜ ಮತ್ತು ದೇಶದ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳಾಗಿದ್ದಾರೆ ಎಂದು ಶಾಸಕ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ತಾಲೂಕು ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ,

ಕನ್ನಡಪ್ರಭ ವಾರ್ತೆ ಜಮಖಂಡಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ಸಮಾಜ ಮತ್ತು ದೇಶದ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳಾಗಿದ್ದಾರೆ ಎಂದು ಶಾಸಕ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ತಾಲೂಕು ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಶಿಕ್ಷಕರ ಸಂಘಟನೆಗಳು ಹಾಗೂ ಸರ್ಕಾರಿ ನೌಕರರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಬಸವ ಭವನದಲ್ಲಿ ನಡೆದ ಶಿಕ್ಷಕರ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರಲ್ಲಿ ವಿದ್ಯೆ, ಅನುಭವ ಮತ್ತು ಬೋಧನಾ ಚಾತುರ್ಯದ ಜೊತೆಗೆ ಸರಳತೆ, ಮಾನವೀಯತೆ, ಔದಾರ್ಯ ಹಾಗೂ ವಾತ್ಸಲ್ಯ ಇರಬೇಕು. ಪ್ರಾಮಾಣಿಕತೆ ಮತ್ತು ಶ್ರದ್ಧೆಯಿಂದ ಸೇವೆ ಸಲ್ಲಿಸಿದ ಶಿಕ್ಷಕರನ್ನು ಸಮಾಜ ಎಂದಿಗೂ ಗೌರವದಿಂದ ಸ್ಮರಿಸುತ್ತದೆ ಎಂದು ಹೇಳಿದರು.

ಬದಲಾಗುತ್ತಿರುವ ಕಾಲಘಟ್ಟದಲ್ಲಿ ಶಿಕ್ಷಕರು ಕೂಡ ನಿರಂತರವಾಗಿ ಕಲಿಯಬೇಕು. ವಿಜ್ಞಾನ, ತಂತ್ರಜ್ಞಾನ ಹಾಗೂ ಹೊಸ ಶಿಕ್ಷಣ ಪದ್ಧತಿಗಳ ಬಗ್ಗೆ ಜ್ಞಾನ ಪಡೆದು ಅದನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು. ಉತ್ತಮ ಪ್ರಜೆಗಳನ್ನು ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪರಿಸರ ಸಂರಕ್ಷಣೆ ಹಾಗೂ ಇಂಧನ ಉಳಿತಾಯದ ಅಗತ್ಯವನ್ನು ವಿವರಿಸಿದ ಅವರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮನೆಯಿಂದ ಶಾಲೆಗೆ ಶಾಲೆಯಿಂದ ಮನೆಗೆ ಸೈಕಲ್ ಬಳಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಇಂಧನ ಬಳಕೆ ಹಾಗೂ ವಾಯುಮಾಲಿನ್ಯ ಕಡಿಮೆ ಮಾಡಲು ಸಹಕರಿಸಬೇಕು. ಭವಿಷ್ಯದ ಪೀಳಿಗೆಗಾಗಿ ಪರಿಸರ, ನೀರು, ಭೂಮಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಈ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಶಿಕ್ಷಕರು ಕೈಗೊಳ್ಳಬೇಕು ಎಂದು ತಿಳಿಸಿದರು.ತಹಸೀಲ್ದಾರ್‌ ಅನೀಲ ಬಡಿಗೇರ ಮಾತನಾಡಿ, ಶಿಕ್ಷಕ ವೃತ್ತಿಯು ಮನಸ್ಸಿಗೆ ಆತ್ಮತೃಪ್ತಿ ನೀಡುವ ಶ್ರೇಷ್ಠ ವೃತ್ತಿಯಾಗಿದೆ. ಮಕ್ಕಳಿಗೆ ಶಿಕ್ಷಣ ನೀಡುವುದರ ಜತೆಗೆ ಅವರ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಳಗಲಿಯ ಸಿದ್ಧಾರೂಢ ಶಿವಯೋಗಾಶ್ರಮದ ಸಿದ್ದರಾಮ ಶಿವಯೋಗಿಗಳು ಉಪನ್ಯಾಸ ನೀಡಿದರು. ನಿವೃತ್ತ ಹಾಗೂ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಭಾರತಿ ಮದೀನವರ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು, ಶಿಕ್ಷಕಿ ಶ್ವೇತಾ ಕಲ್ಲೂರ, ಚಿದಾನಂದ ಜಡಿಮಠ ನಿರೂಪಿಸಿದರು. ಮುಖ್ಯ ಶಿಕ್ಷಕ ರಮೇಶ ಅವಟಿ ವಂದಿಸಿದರು.ಡಾ.ರಾಧಾಕೃಷ್ಣನ್‌ ಭಾವಚಿತ್ರದ ಮೆರವಣಿಗೆ: ನಗರದ ಹಳೆ ತಹಸೀಲ್ದಾರ್‌ ಕಚೇರಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ ಅವರ ಭಾವಚಿತ್ರದ ಭವ್ಯ ಮೆರವಣಿಗೆ ವಿವಿಧ ವಾದ್ಯ ಮೇಳದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ವೇದಿಕೆಯಲ್ಲಿ ಬಿಆರ್‌ಸಿಓ ಕಾಡೇಶ ಕೋಲೂರ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಪಂಚಾಕ್ಷರಿ ನಂದೇಶ, ನಾಗಪ್ಪ ಸನದಿ, ಬಿ.ಪಿ.ಬಾಗೇನವರ, ಪಿ.ಬಿ.ಅಜ್ಜನವರ, ನರಸಿಂಹ ಕಲ್ಲೊಳಿ, ಸಿ.ಜಿ.ಕಡಕೋಳ, ಮಹಾಂತೇಶ ನರಸನಗೌಡ್ರ, ಸಂತೋಷ ತಳಕೇರಿ, ಎ.ಎಂ.ನದಾಫ, ಎಂ.ಎನ್.ಟಕ್ಕಳಕಿ, ಜಗದೀಶ ಮೇತ್ರಿ ಇತರರು ಇದ್ದರು.