ಹುಬ್ಬಳ್ಳಿ:

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಹು-ಧಾ ಅವಳಿ ನಗರಕ್ಕೆ ಮಾತ್ರ ಸೀಮಿತವಾಗದೆ ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ್ದು. ಈ ಭಾಗದಲ್ಲಿ ಕೈಗಾರಿಕೆ, ಉದ್ಯಮ ಸ್ಥಾಪಿಸುವ ಮೂಲಕ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ಮಂಗಳವಾರ ಇಲ್ಲಿನ ಎಪಿಎಂಸಿ ಯಾರ್ಡ್ ಹುಬ್ಬಳ್ಳಿ-ಧಾರವಾಡ ವಿವಿಧೋದ್ದೇಶ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಕೈಗಾರಿಕೆ ಮತ್ತು ವಾಣಿಜ್ಯ ಪ್ರದರ್ಶನ, ವಿಚಾರ ಸಂಕಿರಣ ಮತ್ತು ಮಾರಾಟ ಅಭಿವೃದ್ಧಿ ಕಾರ್ಯಕ್ರಮವಾದ ಇನ್‌ಕಾಮೆಕ್ಸ್-2026 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಆರ್ಥಿಕ ಸ್ಥಿತಿಗತಿಯಲ್ಲಿ ಹುಬ್ಬಳ್ಳಿ-ಧಾರವಾಡ ತೀರಾ ಹಿಂದುಳಿದಿದ್ದು, ಬೆಂಗಳೂರು ಮಾತ್ರ ಮುಂದೆ ಸಾಗುತ್ತಿದೆ. ಈ ಬಗ್ಗೆ ನಾವೆಲ್ಲರೂ ಚಿಂತಿಸಬೇಕಾದ ಅನಿವಾರ್ಯತೆ ಎದುರಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕಂಡಿಲ್ಲ. ಈ ಬಗ್ಗೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಗಮನ ಹರಿಸಬೇಕು. ಜತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಲ್ಲ. ಈ ಬಗ್ಗೆ ನಾವು ಕಾಳಜಿ ತೋರದಿದ್ದರೆ ತೊಂದರೆ ಅನುಭವಿಸಬೇಕಾಗುತ್ತದೆ. ಈಗಾಗಲೇ ಕೇಂದ್ರ ಸಚಿವರೊಂದಿಗೆ ಮಾತನಾಡಿ ಹುಬ್ಬಳ್ಳಿಯಲ್ಲಿರುವ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿಸುವಂತೆ ಮನವಿ ಮಾಡಿದ್ದು, ವಿಮಾನಯಾನ ಸಚಿವರು ಸಮ್ಮತಿ ಸೂಚಿಸಿದ್ದಾರೆ ಎಂದರು.

ಕಡಿಮೆ ದರದಲ್ಲಿ ಭೂಮಿ ನೀಡಿ:


ಅವಳಿ ನಗರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಕಡಿಮೆ ದರದಲ್ಲಿ ಭೂಮಿ ನೀಡುವಂತಾಗಬೇಕು. ಈ ಬಗ್ಗೆ ನಾನು ಸಾಕಷ್ಟು ಬಾರಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿದ್ದೇನೆ. ಪ್ರಯತ್ನ ಪಟ್ಟಾಗ ಸರ್ಕಾರ ಕಡಿಮೆ ದರದಲ್ಲಿ ಭೂಮಿ ನೀಡಲು ಒಪ್ಪುತ್ತದೆ. ಆದರೆ, ಸರ್ಕಾರಿ ಅಧಿಕಾರಿಗಳು ಅದಕ್ಕೆ ಹಸಿರು ನಿಶಾನೆ ತೋರುವುದಿಲ್ಲ. ಆಂಧ್ರಪ್ರದೇಶದಲ್ಲಿ ಕಡಿಮೆ ದರದಲ್ಲಿ ಕೈಗಾರಿಕೆ ಸ್ಥಾಪನೆಗೆ ಭೂಮಿ ನೀಡಲಾಗುತ್ತದೆ. ನಮ್ಮಲ್ಲಿ ಮಾತ್ರ ಸಾಧ್ಯವಾಗುವುದಿಲ್ಲ ಎಂದರೆ ಏನರ್ಥ ಎಂದು ಬೇಸರ ವ್ಯಕ್ತಪಡಿಸಿದರು.

ತ್ರಿವಳಿ ನಗರ:

ಹುಬ್ಬಳ್ಳಿ-ಧಾರವಾಡ ಅತೀ ಹೆಚ್ಚು ಅಭಿವೃದ್ಧಿ ಹೊಂದಿರುವ ನಗರಗಳಾಗಿವೆ. ಪಕ್ಕದಲ್ಲಿಯೇ ಬೆಳಗಾವಿಯೂ ಹೆಚ್ಚು ಅಭಿವೃದ್ಧಿ ಹೊಂದಿದ್ದು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯನ್ನು ತ್ರಿವಳಿ ನಗರವನ್ನಾಗಿ ಮಾಡಿದರೆ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ. ಧಾರವಾಡ-ಬೆಳಗಾವಿ ರೈಲು ನೇರ ಮಾರ್ಗ ಮಾಡಲು ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದ್ದು, ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ಮಾಡಲಾಗುತ್ತಿದೆ. ನೇರ ರೈಲು ಮಾರ್ಗವಾದರೆ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ ಎಂದು ಶೆಟ್ಟರ್‌ ಹೇಳಿದರು.

ಈ ವೇಳೆ ವಿಪ ಸದಸ್ಯ ಪ್ರದೀಪ ಶೆಟ್ಟರ್, ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗುಂಡೂರ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಇನ್‌ಕಾಮೆಕ್ಸ್‌ ಚೇರ್‌ಮನ್‌ ಮಹದೇವ ಕರಮರಿ, ಉದಯ ರೇವಣಕರ, ಪ್ರವೀಣ ಅಗಡಿ, ಪ್ರಕಾಶ ಶೃಂಗೇರಿ, ಜಯಪ್ರಕಾಶ ಟೆಂಗಿನಕಾಯಿ, ಸಿದ್ದೇಶ್ವರ ಕಮ್ಮಾರ, ಉದಯ ರೇವಣಕರ ಸೇರಿದಂತೆ ಹಲವರಿದ್ದರು.