ಮಕ್ಕಳ ಗ್ರಾಮಸಭೆ ಕ್ರಿಯಾತ್ಮಕವಾಗಿ ನಡೆಯಲಿ

| Published : Jan 07 2024, 01:30 AM IST

ಸಾರಾಂಶ

ಹೊಸಪೇಟೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮನ್ವಯ ಸಮಿತಿಗಳ ಸಭೆ ನಡೆಯಿತು. ಡಿಸಿ ಎಂ.ಎಸ್. ದಿವಾಕರ ಅಗತ್ಯ ಸೂಚನೆ ನೀಡಿದರು.

ಹೊಸಪೇಟೆ: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳು ಮಕ್ಕಳ ಗ್ರಾಮಸಭೆಗಳನ್ನು ಕ್ರಿಯಾತ್ಮಕವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮನ್ವಯ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಪಂಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿಗಳನ್ನು ರಚಿಸಬೇಕು. ಕಾಲಕಾಲಕ್ಕೆ ಸಭೆಗಳನ್ನು ನಡೆಸಿ, ಸಮಾಲೋಚನೆ ಮಾಡಬೇಕು. ಇತ್ತೀಚೆಗೆ ಜಿಲ್ಲೆಯಲ್ಲಿ ಫೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು. ಮಕ್ಕಳ ರಕ್ಷಣೆ, ಕಾಯ್ದೆಗಳ ಬಗ್ಗೆ ಜನ ಸಮುದಾಯಕ್ಕೆ ಹೆಚ್ಚಿನ ಅರಿವು ಮೂಡಿಸಲು ಅಧಿಕಾರಿಗಳು ಕ್ರಮ ಕೊಳ್ಳಬೇಕು ಎಂದರು. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸುರಕ್ಷಣೆ ಕಾಯ್ದೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ, ಬಾಲ್ಯ ವಿವಾಹವನ್ನು ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ, ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ, ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಪ್ರಗತಿ ಪರಿಶೀಲನಾ ಸಮಿತಿ, ಮಕ್ಕಳ ಪಾಲನಾ ಸಂಸ್ಥೆಗಳ ಜಿಲ್ಲಾ ತನಿಖಾ ಸಮಿತಿ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಸೇರಿದಂತೆ ಎಲ್ಲ ಸಮಿತಿಗಳು ಕಾರ್ಯನ್ಮುಖವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಬಳ್ಳಾರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ರಾಜೇಶ ಹೊಸಮನಿ, ಜಿಪಂ ಉಪಕಾರ್ಯದರ್ಶಿ ಭೀಮಪ್ಪ ಲಾಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ ಎಸ್. ಉಪಸ್ಥಿತರಿದ್ದರು.