ಕನ್ನಡಪ್ರಭ ವಾರ್ತೆ ಬಾಗಲಕೋಟೆಬಾಗಲಕೋಟೆ- ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಿ ಆ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸುವುದು ಅವಶ್ಯಕವಾಗಿದ್ದು ಈ ದಿಸೆಯಲ್ಲಿ ವಿಕಲಚೇತರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವುದು ಅಗತ್ಯವಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.

ಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತ ಶ್ರವಣ ಸಾಧನಗಳನ್ನು ವಿತರಿಸಿ ಮಾತನಾಡಿದ ಅವರು, ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಅನೇಕ ಆರೋಗ್ಯ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಅಡಿಪ್ ಯೋಜನೆಯಡಿ ರೋಗಿಗಳಿಗೆ ಶ್ರವಣ ಸಾಧನಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಒಟ್ಟು 32 ಫಲಾನುಭವಿಗಳಿಗೆ 64 ಶ್ರವಣ ಸಾಧನಗಳನ್ನು ವಿತರಿಸಿದ್ದೇವೆ. ಒಟ್ಟಾರೆ ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಕಾರ್ಯಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಕುಮಾರೇಶ್ವರ ಆಸ್ಪತ್ರೆಯ ಮೂಲಕ ಪ್ರಯತ್ನಿಸಲಾಗುತ್ತಿದೆ ಎಂದರು.

ಬಿ.ವಿ.ವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ, ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ, ಡಾ.ಶ್ರೀರಾಮ ಕೋರಾ, ಉಪಪ್ರಾಚಾರ್ಯ ಡಾ.ಸಿ.ಎಸ್.ಹಿರೇಮಠ, ಬಿ.ವಿ.ವಿ.ಎಸ್ ವಾಕ್ ಮತ್ತು ಶ್ರವಣ ಸಂಸ್ಥೆಯ ಪ್ರಾಚಾರ್ಯ ಡಾ.ಶ್ರೀವಿದ್ಯಾ ಮತ್ತು ಸಿಬ್ಬಂದಿ, ಮೆಡಿಕಲ್ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯರು, ವಿದ್ಯಾರ್ಥಿಗಳು ಮತ್ತು ಫಲಾನುಭವಿಗಳು ಹಾಗೂ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.