ಸರ್ಕಾರ ಇನ್ನಾದರೂ ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ಜನರಿಗೆ ಅಗತ್ಯವಿರುವ ಮಾತ್ರೆಗಳು ಹಾಗೂ ಇಂಜಕ್ಷನ್ ಔಷಧಗಳನ್ನು ವಿತರಣೆ ಮಾಡಲು ಕ್ರಮ ವಹಿಸಬೇಕು. ಆಸ್ಪತ್ರೆಗಳಿಗೆ ಕನಿಷ್ಠ ಸಿಬ್ಬಂದಿ ವರ್ಗದವರನ್ನು ನೇಮಕ ಮಾಡಬೇಕು. ಇಲ್ಲದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆ ಏಳುವ ಕಾಲ ದೂರವಿಲ್ಲ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಟಿ.ಮಂಜು ಭೂಮಿಪೂಜೆ ನೆರವೇರಿಸಿದರು.

ವಿಠಲಾಪುರ, ಅಂಬಿಗರಹಳ್ಳಿ, ಸಂಗಾಪುರ, ಯಗಚಗುಪ್ಪೆ, ಆಲಂಬಾಡಿ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಅನುದಾನ ನೀಡುವಲ್ಲಿಯೇ ಕಾಲ ಕಳೆಯುತ್ತಿದೆ. ಇತರೆ ಮೂಲ ಸೌಲಭ್ಯಗಳಿಗೆ ಅಗತ್ಯ ಅನುದಾನವನ್ನೇ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕನಿಷ್ಠ ಪಕ್ಷ ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರೆಗಳು ಮತ್ತು ಇಂಜಕ್ಷನ್ ಗಳನ್ನು ಪೂರೈಕೆ ಮಾಡದೇ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಕಳೆದ ತಿಂಗಳು ಇಡೀ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆ ವೈದ್ಯರೇ ಇದರ ವಿರುದ್ಧ ಹೋರಾಟ ಮಾಡಿದ್ದಾರೆ ಎಂದರು.

ಸರ್ಕಾರ ಇನ್ನಾದರೂ ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ಜನರಿಗೆ ಅಗತ್ಯವಿರುವ ಮಾತ್ರೆಗಳು ಹಾಗೂ ಇಂಜಕ್ಷನ್ ಔಷಧಗಳನ್ನು ವಿತರಣೆ ಮಾಡಲು ಕ್ರಮ ವಹಿಸಬೇಕು. ಆಸ್ಪತ್ರೆಗಳಿಗೆ ಕನಿಷ್ಠ ಸಿಬ್ಬಂದಿ ವರ್ಗದವರನ್ನು ನೇಮಕ ಮಾಡಬೇಕು. ಇಲ್ಲದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆ ಏಳುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ಸರ್ಕಾರವು ವಿಪಕ್ಷಗಳ ಶಾಸಕರಿಗೆ ನೀಡುತ್ತಿರುವ ಅನುದಾನವನ್ನು ಅಗತ್ಯ ಇರುವ ಗ್ರಾಮಗಳ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಆದ್ಯತೆ ಮೇರೆಗೆ ನೀಡುವ ಮೂಲಕ ಮತ ನೀಡಿದ ಜನರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.

ನನ್ನ ಕ್ಷೇತ್ರಕ್ಕೆ ರಾಜ್ಯ ಸರ್ಕಾರನ ನೀಡುತ್ತಿರುವ ಅನುದಾನ ಆನೆ ಹೊಟ್ಟಿಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ಹಾಗಾಗಿ 2028ಕ್ಕೆ ನಮ್ಮ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರವು ಅಧಿಕಾರಕ್ಕೆ ಬರುವುದು ಶೇ.100ರಷ್ಟು ಸತ್ಯ. ಆಗ ಮತ್ತೊಮ್ಮೆ ನನಗೆ ಆಶೀರ್ವಾದ ಮಾಡಿದರೆ ತಾಲೂಕಿನ ಎಲ್ಲಾ ಜನರ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ವೇಳೆ ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಬಿ.ನಾಗೇಶ್, ಜೆಡಿಎಸ್ ಮುಖಂಡರಾದ ಸಂಗಾಪುರ ಪುಟ್ಟಸ್ವಾಮೀಗೌಡ, ಯಗಚಗುಪ್ಪೆ ಎಲ್‌ಐಸಿ ಶಿವಪ್ಪ, ತಾಪಂ ಮಾಜಿ ಸದಸ್ಯ ಬೂಕನಕೆರೆ ಹೆಳವೇಗೌಡ, ಆಲಂಬಾಡಿ ಕರಿಶೆಟ್ಟಿ, ವೆಂಕಟೇಶ್, ಚನ್ನಕೃಷ್ಣ, ತಾಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಖಾಲೋಕೇಶ್, ಅಕ್ಕಿಹೆಬ್ಬಾಳು ಹೋಬಳಿ ಜೆಡಿಎಸ್ ಅಧ್ಯಕ್ಷ ಮಂಚೀಬೀಡು ಬಸವಲಿಂಗಪ್ಪ, ಮಾಂಬಳ್ಳಿ ಕಾಂತರಾಜು, ಕೆಆರ್ ಐಡಿಎಲ್ ಎಂಜಿನಿಯರ್ ಚೇತನ್, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.