ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಸಾಗಲಿ: ಗೋಪಾಲ್‌

| Published : Oct 30 2023, 12:30 AM IST

ಸಾರಾಂಶ

ಸಂಘದಿಂದ ಪತ್ರಕರ್ತರಿಗೆ ಪ್ರತ್ಯೇಕ ನಿಧಿ ಸ್ಥಾಪನೆ ಉದ್ದೇಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ ಪತ್ರಕರ್ತರು ತಮ್ಮೊಳಗಿನ ಸಂಘರ್ಷ ಮನೋಭಾವದಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ನಗರದ ಪ್ರೆಸ್‌ ಟ್ರಸ್ಟ್‌ನಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ ಹೆಜ್ಜೆ ಇಟ್ಟಿದೆ. ಸಂಘದಿಂದ ಈಗಾಗಲೇ ನಡೆದಿರುವ ಸಮಾಜಮುಖಿ ಕಾರ್ಯಗಳಿಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ತಿಳಿಸಿದರು. ಪತ್ರಕರ್ತರ ಸಂಘ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಸಮಾಜದ ಬೇರೆ ಬೇರೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲ ಮಾಡಬೇಕಾಗುತ್ತದೆ. ಇಂತಹ ಹೊಸ ದಿಕ್ಕಿನಲ್ಲಿ ಆಲೋಚನೆ ಮಾಡಬೇಕಿದೆ. ಸಂಘ ಎಂದ ಮೇಲೆ ಒಬ್ಬೊಬ್ಬರದು ಒಂದೊಂದು ರೀತಿ ಅಭಿಪ್ರಾಯಗಳಿರುತ್ತವೆ. ಇಲ್ಲಿ ಸಣ್ಣ ವ್ಯತ್ಯಾಸಗಳು ಸಹಜ. ನಮ್ಮೊಳಿನ ಸಣ್ಣ ಭಿನ್ನಾಭಿಪ್ರಾಯಗಳನ್ನು ನಾಲ್ಕು ಗೋಡೆಗಳ ಚೌಕಟ್ಟಿನಲ್ಲಿ ಬಗೆಹರಿಸಿಕೊಂಡು ಒಗ್ಗೂಡಿ, ಎಲ್ಲರೂ ಮುನ್ನಡೆಯಬೇಕಿದೆ ಎಂದು ಹೇಳಿದರು. ಪತ್ರಕರ್ತರಿಗೆ ಪ್ರತ್ಯೇಕ ನಿಧಿ: ಸದಾ ಒತ್ತಡದಲ್ಲೇ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅಂಥವರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಒಡಗೂಡಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರಿಗೆ ಪ್ರತ್ಯೇಕ ನಿಧಿ ಸ್ಥಾಪನೆ ಉದ್ದೇಶ ಹೊಂದಲಾಗಿದೆ. ಇದಕ್ಕೆ ಕೆಲ ಗಣ್ಯರು ಒತ್ತಾಸೆಯಾಗಿ ನಿಲ್ಲುವುದಾಗಿ ಹೇಳಿದ್ದಾರೆ. ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕಿದೆ ಎಂದರು. ಸಂಘದ 2022ನೇ-23ನೇ ಸಾಲಿನ ವಾರ್ಷಿಕ ವರದಿ ವಾಚಿಸಿದ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್‌ ಕಾಚಿನಕಟ್ಟೆ, ಸಂಘದ ಉದ್ಘಾಟನೆ ಜೊತೆಗೆ ಮಾದಕ ವಸ್ತು ನಿರ್ಮೂಲನೆ ಅಭಿಯಾನ ನಡೆಸಲಾಯಿತು. ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮಹಿಳಾ ನಾಟಕೋತ್ಸವ ನಡೆಯಿತು. ಗ್ರಾಮ ಭೇಟಿ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡಸಲಾಯಿತು. ಎಲ್ಲ ಕಾರ್ಯಕ್ರಮಗಳಿಗೂ ಉತ್ತಮ ಪ್ರತಿಕ್ರಿಯೆ ವ್ಯಕಕ್ತವಾಗಿದೆ. ಮುಂದೆ ಇದೇ ರೀತಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಎಲ್ಲರೂ ಕೈಜೋಡಿಸಬೇಕಿದೆ ಎಂದರು. ಸಭೆ ಆರಂಭದಲ್ಲಿ ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ನಿರ್ದೇಶಕ ವಿವೇಕ್‌ ಮಹಾಲೆ ವಾರ್ಷಿಕ ಸಭೆ ನೋಟಿಸ್‌ ಓದಿದರು. ನಿರ್ದೇಶಕ ಯೋಗೇಶ್‌ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಹುಲಿಮನೆ ತಿಮ್ಮಪ್ಪ ಸ್ವಾಗತಿಸಿದರು. ಸಂತೋಷ್‌ ಕಾಚಿನಕಟ್ಟೆ ವಂದಿಸಿದರು. ಸಂಘದ ನಿರ್ದೇಶಕ ರಾಮಚಂದ್ರ ಗುಣಾರಿ ಕಾರ್ಯಕ್ರಮ ನಿರೂಪಿಸಿದರು. ಖಜಾಚಿ ಶಿವಮೊಗ್ಗ ನಂದನ್‌, ಸೇರಿದಂತೆ ನಿರ್ದೇಶಕರು, ಕಾರ್ಯಕಾರಣಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. - - - ಬಾಕ್ಸ್ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಬಳಿಕ ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ಸಹಯೋಗದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಸಮಾರಂಭವನ್ನು ಉದ್ಘಾಟಿಸಿ ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ಅಧ್ಯಕ್ಷ ಎನ್‌.ಮಂಜುನಾಥ್‌ ಮಾತನಾಡಿ, ಸಜ್ಜನ ಪತ್ರಕರ್ತರು ಒಂದೆಡೆ ಸೇರಿಸಬೇಕು ಎಂಬ ಉದ್ದೇಶದಿಂದ ಈ ಸಂಘ ರಚನೆಯಾಗಿದೆ. ಸಂಘ ಯಾರೊಬ್ಬರ ಸ್ವತ್ತಲ್ಲ. ಎಲ್ಲರೂ ಸಂಘದ ಕಾರ್ಯ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂಘದ ಸಂಘಟನೆಗೆ ಬಲ ನೀಡಬೇಕಿದೆ ಎಂದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ಕೇವಲ ಪತ್ರಕರ್ತರಿಗೆ ಕ್ಷೇಮಾಭಿವೃದ್ಧಿಗೆ ಮಾತ್ರ ಸೀಮಿತವಾಗಿಲ್ಲ. ಪತ್ರಿಕಾ ವಿತರಕರಿಗೂ ಸೌಲಭ್ಯ ಕೊಡಿಸುವ ನಿಟ್ಟಿನಲ್ಲಿ ಈ ಎರಡೂ ಸಂಘಟನೆಗಳು ಶ್ರಮಿಸುತ್ತಿವೆ ಎಂದು ತಿಳಿಸಿದರು. ಸದಸ್ಯರ ಮಕ್ಕಳಾದ ವೈ.ಎಸ್. ಅನಿಕೇತನ್, ಅಚಲ ದತ್‌, ದೀಪಿಕ ಜಿ.ಸ್ವಾಮಿ, ನಮ್ರತಾ, ತಪಸ್ಯ ಆರ್.ಭಟ್, ಸಾನಿಯಾ ಎಸ್.ಜುಬೇರ್, ಬಿ.ಸಿಂಚನ, ಜೋಸ್ಲಿನ್ ಹೆಲೆನ್ ಟೆಲಿಸ್, ಯೋಗರಾಜ ವಿವೇಕ್ ಮಹಾಲೆ, ಸಿ.ಜಿ.ಐಶ್ವರ್ಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. - - - -29ಎಸ್‌ಎಂಜಿಕೆಪಿ01: ಶಿವಮೊಗ್ಗದ ಪ್ರೆಸ್‌ ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022- 23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.