ಎಲ್ಲರ ಮನೆಗಳ ಮೇಲೂ ಕನ್ನಡ ಬಾವುಟ ಹಾರಲಿ- ಕನ್ನಡದ ಹಬ್ಬವನ್ನು ಮನೆಯ ಹಬ್ಬದಂತೆ ಆಚರಿಸಬೇಕು : ಸಚಿವ ಚಲುವರಾಯಸ್ವಾಮಿ

| Published : Dec 07 2024, 12:33 AM IST / Updated: Dec 07 2024, 12:12 PM IST

ಎಲ್ಲರ ಮನೆಗಳ ಮೇಲೂ ಕನ್ನಡ ಬಾವುಟ ಹಾರಲಿ- ಕನ್ನಡದ ಹಬ್ಬವನ್ನು ಮನೆಯ ಹಬ್ಬದಂತೆ ಆಚರಿಸಬೇಕು : ಸಚಿವ ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

  ಕನ್ನಡದ ಹಬ್ಬವನ್ನು ಮನೆಯ ಹಬ್ಬದಂತೆ ಆಚರಿಸಬೇಕು. ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಿ.15 ರಂದು ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿರುವ ಮ್ಯಾರಥಾನ್ ನಲ್ಲಿ ನಗರದ ಪ್ರತಿ ಮನೆಯಿಂದ ಕನಿಷ್ಠ ಒಬ್ಬ ಸದಸ್ಯರಾದರೂ ಪಾಲ್ಗೊಳ್ಳಬೇಕು.

 ಮಂಡ್ಯ : ಜಿಲ್ಲೆಯ ಎಲ್ಲಾ ಮನೆಗಳ ಮೇಲೂ ಕನ್ನಡ ಬಾವುಟ ಹಾರಿಸುವ ಮೂಲಕ ಜಿಲ್ಲೆಯ ಜನತೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಸ್ವಾಗತಿಸಿ ಸಮ್ಮೇಳನ ಯಶಸ್ಸಿಗೆ ಶ್ರಮಿಸುವಂತೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದರು.

ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರ ಅಲಂಕಾರ ಸಮಿತಿ ವತಿಯಿಂದ ಸ್ವರ್ಣಸಂದ್ರದಲ್ಲಿ ಆಯೋಜಿಸಿದ್ದ ಮನೆ ಮನೆಗಳಲ್ಲಿ ಕನ್ನಡ ಬಾವುಟ ಹಾರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿ, ಮನೆ ಮನೆಗಳ ಮೇಲೆ ಕನ್ನಡ ಬಾವುಟ ಕಟ್ಟುವ ಕಾರ್ಯಕ್ರಮ ಕೇವಲ ಮಂಡ್ಯ ನಗರಕ್ಕೆ ಸೀಮಿತವಾಗದೇ ಜಿಲ್ಲೆಯ ಎಲ್ಲರ ಮನೆಗಳ ಮೇಲೂ ಕನ್ನಡ ಬಾವುಟ ಹಾರಾಡಬೇಕು ಎಂದರು.

ತಾಲೂಕು ಕೇಂದ್ರ, ಗ್ರಾಮ ಪಂಚಾಯತಿ ಕಚೇರಿಗಳ ಮೇಲೂ ಕನ್ನಡ ಬಾವುಟ ಹಾರಿಸಿ ಕನ್ನಡದ ಹಬ್ಬವನ್ನು ಮನೆಯ ಹಬ್ಬದಂತೆ ಆಚರಿಸಬೇಕು. ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಿ.15 ರಂದು ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿರುವ ಮ್ಯಾರಥಾನ್ ನಲ್ಲಿ ನಗರದ ಪ್ರತಿ ಮನೆಯಿಂದ ಕನಿಷ್ಠ ಒಬ್ಬ ಸದಸ್ಯರಾದರೂ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಶಾಸಕ ರವಿಕುಮಾರ್ ಮಾತನಾಡಿ, 30 ವರ್ಷಗಳ ಬಳಿಕ ಮಂಡ್ಯದಲ್ಲಿ ಸಮ್ಮೇಳನ ನಡೆಯುತ್ತಿದೆ. ಪ್ರತಿ ಪ್ರಜೆಯೂ ಭಾಗವಹಿಸಬೇಕು. ಇನ್ನೊಂದು ವಾರದಲ್ಲಿ ನಗರದ ಎಲ್ಲಾ ಮನೆಗಳ ಮೇಲೆ ಕನ್ನಡ ಬಾವುಟಗಳು ಹಾರಾಡಲಿವೆ ಎಂದು ಹೇಳಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಮಾತನಾಡಿ, ಎಲ್ಲರ ಮನೆ ಮೇಲೆ ಕನ್ನಡ ಬಾವುಟ ಹಾರಿದಾಗ ಮನೆ, ಮನದಲ್ಲಿ ಕನ್ನಡದ ಕಂಪು ಮೂಡಲಿದೆ. ಬಾವುಟ ಹಾರಾಟ ನಮ್ಮ ಏಕತೆ, ಐಕ್ಯತೆ, ಅಸ್ಮಿತೆಯ ಸಂಕೇತ. ಇದು ಕನ್ನಡದ ಹಿರಿಮೆ. ಕನ್ನಡದ ಅಭಿಮಾನದ ಕುರುಹು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ರಮೇಶ ಬಂಡೀಸಿದ್ದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ನಗರಸಭೆ ಅಧ್ಯಕ್ಷ ಪ್ರಕಾಶ್, ಮುಡಾ ಅಧ್ಯಕ್ಷ ನಹೀಂ, ಕಸಾಪ ಜಿಲ್ಲಾ ಸಂಚಾಲಕರಾದ ಮೀರಾ ಶಿವಲಿಂಗಯ್ಯ ಸೇರಿದಂತೆ ನಗರಸಭಾ ಸದಸ್ಯರು, ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.