ಸಫಾಯಿ ಕರ್ಮಚಾರಿಗಳ ಪ್ರಗತಿಗೆ ಅಧಿಕಾರಿಗಳು ಶ್ರಮಿಸಲಿ: ಎಂ. ವೆಂಕಟೇಶನ್

| Published : Jun 14 2024, 01:05 AM IST

ಸಫಾಯಿ ಕರ್ಮಚಾರಿಗಳ ಪ್ರಗತಿಗೆ ಅಧಿಕಾರಿಗಳು ಶ್ರಮಿಸಲಿ: ಎಂ. ವೆಂಕಟೇಶನ್
Share this Article
  • FB
  • TW
  • Linkdin
  • Email

ಸಾರಾಂಶ

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ನಿಗದಿಪಡಿಸಿದ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು ಅಧಿಕಾರಿಗಳ ಜವಾಬ್ದಾರಿ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ವೆಂಕಟೇಶನ್ ಹೇಳಿದರು.

ಗದಗ: ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಇರುವ ಸೌಲಭ್ಯ ತಲುಪಿಸುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಅವರಿಗೆ ದೊರಕಬೇಕಾದ ವೇತನ ಸೌಲಭ್ಯಗಳನ್ನು ಒದಗಿಸುವಲ್ಲಿ ಶ್ರಮಿಸಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ವೆಂಕಟೇಶನ್ ಹೇಳಿದರು.

ಅವರು ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಫಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ನಿಗದಿಪಡಿಸಿದ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು ಅಧಿಕಾರಿಗಳ ಜವಾಬ್ದಾರಿ. ಗುತ್ತಿಗೆ ಸಫಾಯಿ ಕರ್ಮಚಾರಿಗಳಿಗೆ ಗುತ್ತಿಗೆ ಏಜೆನ್ಸಿದಾರರು ಸಮಯಕ್ಕೆ ಸರಿಯಾಗಿ ನಿಗದಿಪಡಿಸಿದ ವೇತನ ಸೌಲಭ್ಯಗಳನ್ನು ವಿತರಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಹಾಗೂ ವೇತನದೊಂದಿಗೆ ಇಎಸ್‌ಐ, ಪಿಎಫ್ ಪಾವತಿಸುವ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ ಮಾತ್ರವೇ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಾರ್ಮಿಕರಿಗೆ ಇರುವ ಸೌಲಭ್ಯಗಳ ಬಗ್ಗೆ ನಿಗದಿಪಡಿಸಿದ ವೇತನಗಳು ಸಂದರ್ಭಾನುಸಾರ ನಿಗದಿತ ಸಮಯಕ್ಕೆ ಪಾವತಿಸುವ ಬಗ್ಗೆ ಪರಿಶೀಲನೆ ಕೈಗೊಳ್ಳಬೇಕು. ಕಾರ್ಮಿಕರ ಕೆಲಸಕ್ಕೆ ಸರಿಯಾಗಿ ವೇತನ ಸಂದಾಯ ಮಾಡುವ ಜವಾಬ್ದಾರಿ ಇಲಾಖಾ ಮುಖ್ಯಸ್ಥರದ್ದಾಗಿದ್ದು, ಅದು ಸರಿಯಾಗಿ ಆಗುತ್ತಿರುವ ಬಗ್ಗೆ ಖಚಿತಪಡಿಸಕೊಳ್ಳಬೇಕು. ಅಲ್ಲದೇ ಕಾರ್ಮಿಕರಿಗೆ ಇರುವ ರಜೆ ಸೌಲಭ್ಯಗಳು ದೊರಕುತ್ತಿರುವ ಬಗ್ಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.

ಜಿಲ್ಲೆಯ ವಿವಿಧ ತಾಲೂಕು ಹಾಗೂ ಸ್ಥಳೀಯ ಸಂಸ್ಥೆಗಳಿಂದ ಆಗಮಿಸಿದ ಸಫಾಯಿ ಕರ್ಮಚಾರಿಗಳು ಮತ್ತು ಪೌರ ಕಾರ್ಮಿಕರೊಂದಿಗೆ ಆಯೋಗದ ಅಧ್ಯಕ್ಷ ಸಂಯಮದಿಂದ ಕುಂದು-ಕೊರತೆಗಳನ್ನು ಆಲಿಸಿ ವೇತನ ಹಾಗೂ ಇತರ ಸಂರಕ್ಷಣಾ ಸೌಲಭ್ಯಗಳು ವಿತರಣೆಯಾಗುತ್ತಿರುವ ಬಗ್ಗೆ ಖಚಿತ ಪಡಿಸಿಕೊಂಡರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಪಂ ಸಿಇಒ ಭರತ್ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ನಗರಸಭೆ ಪೌರಾಯುಕ್ತ ಪ್ರಶಾಂತ ವರಗಪ್ಪನವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ ಇದ್ದರು.