ಡಂಬಳ: ಯುವಜನತೆ ದೇಶದ ಭವಿಷ್ಯ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ತಂತ್ರಜ್ಞಾನವನ್ನು ಸದುಪಯೋಗ ಪಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಉಪತಹಸೀಲ್ದಾರ್ ಎಸ್.ಎಸ್. ಬಿಚಾಲಿ ಹೇಳಿದರು.
ಡಂಬಳ ಗ್ರಾಮದ ಸರ್ಕಾರಿ ಪ್ರಾಥಮಿಕ ಇಂಗ್ಲಿಷ್ ಮಾಧ್ಯಮವಾಗಿರುವ ಉರ್ದು ಶಾಲೆಯಲ್ಲಿ 80ನೇ ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ನಾವು ಭಾರತೀಯರು ಎಂಬ ಭಾವನೆಯೊಂದಿಗೆ ಎಲ್ಲರೂ ಮುನ್ನಡೆಯಬೇಕು ಎಂದರು.ಸಮಾಜದ ಹಿರಿಯರಾದ ಹುಸೇನಸಾಬ ಹೊಸಬಾವಿ ಮತ್ತು ಸಮಾಜ ಸೇವಕ ಬುಡ್ನೆಸಾಬ ಅತ್ತಾರ ಮಾತನಾಡಿ, ದೇಶದ ಸಂವಿಧಾನ ನಮಗೆ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ನೀಡಿದೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರೂ ದೇಶದ ಕಾನೂನುಗಳನ್ನು ಗೌರವಿಸಿ, ಪರಿಸರವನ್ನು ಸಂರಕ್ಷಿಸಿ, ಸಾರ್ವಜನಿಕ ಆಸ್ತಿಯನ್ನು ಕಾಪಾಡಿ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಬೆಳೆಸುವ ಜವಾಬ್ದಾರಿ ಹೊಂದಿದ್ದೇವೆ ಎಂದರು.
ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಹೋರಾಟಗಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮುಂಡರಗಿ ಭೀಮರಾಯರು, ಹಮ್ಮಿಗಿ ಕೆಂಚನಗೌಡರು, ಇಟಗಿಯ ವೀರಭದ್ರಯ್ಯನವರು, ಶಿರೂರು ವೀರಭದ್ರಪ್ಪ, ಶಿವಮೂರ್ತಿಸ್ವಾಮಿ ಅಳವಂಡಿ, ಜನಾರ್ದನರಾಯ ದೇಸಾಯಿ, ಎಲ್.ಕೆ. ಷರೀಫ್, ಬಿಂದು ಮಾಧವರಾವ್, ಕಂಪ್ಲಿಮನಿ, ಬಿ.ಕೆ. ಪ್ರಾಣೇಶಾಚಾರ್ಯರು, ಮುರಡಿ ಭೀಮಜ್ಜ ಸೇರಿದಂತೆ ಮೊದಲಾದವರನ್ನು ಸ್ಮರಿಸಬೇಕಿದೆ ಎಂದರು.ಅಂಜುಮನ್ ಸಮಿತಿಯ ಅಧ್ಯಕ್ಷ ಬಶೀರಹಮ್ಮದ ತಾಂಬೋಟಿ ಶಾಲೆಯ ಒಂದನೇ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ₹1000 ವಿತರಿಸಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಎಂ.ಜೆ. ಕಾಸ್ತಾರ, ಅಂಜುಮನ್ ಅಧ್ಯಕ್ಷ ಬಶೀರಹಮ್ಮದ ತಾಂಬೋಟಿ, ಕಂದಾಯ ಅಧಿಕಾರಿ ಪ್ರಭು ಬಾಗಲಿ, ಮುಖ್ಯೋಪಾಧ್ಯಾಯ ಎಸ್.ಎಂ. ಶೇಖ, ಗ್ರಾಮ ಆಡಳಿತಾಧಿಕಾರಿ ಲಕ್ಷ್ಮಣ ಗುಡಸಲಮನಿ, ಎಂ.ಎಂ. ವಿಭೂತಿ, ಸಾಗರ ಚಿತ್ರಗಾರ, ಮುದಕೇಶ ತಳಗೇರಿ, ಎನ್.ಬಿ. ಶೇಖ, ಎಸ್.ಬಿ. ಕನವಳ್ಳಿ, ಹಸೀನಾ ಬಿ., ಎಸ್ಡಿಎಂಸಿ ಸದಸ್ಯರು, ಮಹಿಳೆಯರು, ವಿದ್ಯಾರ್ಥಿಗಳು ಇದ್ದರು.