ಸಾರಾಂಶ
ಕೊಪ್ಪಳ : ನಗರ ಪ್ರದೇಶದಲ್ಲಿಯೇ ಮತದಾನ ಕಡಿಮೆಯಾಗುತ್ತಿದ್ದು, ಈ ಬಾರಿ ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ತಿಳಿಸಿದರು.
ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಕೊಪ್ಪಳ ವಿಧಾನಸಭಾ ಕ್ಷೇತ್ರದ 133-149-150-151-153 ಮತಗಟ್ಟೆಗಳ ವ್ಯಾಪ್ತಿಯ ಬಿಟಿ ಪಾಟೀಲ್ ನಗರದ ಜನರಿಗೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನರು, ಹೊಸ ಮತದಾರರು, ಹಿರಿಯ ನಾಗರಿಕರು, ಮಹಿಳೆಯರು, ಅಂಗವಿಕಲರಿಗೆ ಮತಗಟ್ಟೆಗಳಲ್ಲಿ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವೀಲ್ಚೇರ್, ರ್ಯಾಂಪ್ ಶೌಚಾಲಯ ಇತರ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.ನಗರ ನಿವಾಸಿಗಳು ನಿಮ್ಮ ಮನೆಯ ಸುತ್ತಲಿನ ನಾಗರಿಕರಿಗೂ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಿ ಮತದಾನ ಪ್ರಮಾಣ ಹೆಚ್ಚಿಸಿ ದಾಖಲೆ ಬರೆಯಲು ಕಾರಣೀಭೂತರಾಗುವಂತೆ ತಿಳಿಸಿದರು.
ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ ಎಂದು ನಗರಸಭೆಯ ಆಯುಕ್ತ ಗಣಪತಿ ಪಾಟೀಲ್ ಮತದಾರರಿಗೆ ಜಾಗೃತಿ ಮೂಡಿಸಿದರು.
ನಗರದ ಹಿರಿಯ ನಾಗರಿಕ ಸುರೇಶ ನಾಡಗೇರ ಮಾತನಾಡಿ, ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ. ದೇಶದ ಭವಿಷ್ಯಕ್ಕಾಗಿ ನಿಮ್ಮದೊಂದು ಮತ ಅತ್ಯಅಮೂಲ್ಯವಾದದ್ದು, ಮತದಾರರು ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಿ ನಗರದಲ್ಲಿ ಮತದಾನ ಪ್ರಮಾಣ ಪ್ರತಿಶತ ಹೆಚ್ಚಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ನಿವೃತ್ತ ನೌಕರರು, ಹಿರಿಯ ನಾಗರಿಕರು, ಮಹಿಳೆಯರು, ಯುವ-ಮತದಾರರು, ವಿಶೇಷ ಚೇತನರು & ನಗರ ಸಭೆಯ ಸಿಬ್ಬಂದಿ ಉಪಸ್ಥಿತರಿದ್ದರು.