ಸಾರಾಂಶ
ಕನ್ನಡಪ್ರಭ ವಾರ್ತೆ ಬೀದರ್
ಬೇಸಿಗೆ ಹೆಚ್ಚಾಗುತ್ತಿರುವುದರಿಂದ ಬೀದರ್ ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಇತರೆ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಬೋರ್ವೆಲ್ ಮತ್ತು ತೆರೆದ ಭಾವಿಗಳಲ್ಲಿ ನೀರು ಬತ್ತಿ ಹೋಗಿ ನೀರಿನ ಹಾಹಾಕಾರ ಎಲ್ಲಾ ಕಡೆ ಈ ಬೇಸಿಗೆಯಲ್ಲಿ ಕಂಡು ಬರುತ್ತದೆ. ವಿಶೇಷವಾಗಿ ಔರಾದ್ ಮತ್ತು ಭಾಲ್ಕಿಯಲ್ಲಿ ನೀರಿನ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತದೆ. ಹಾಗಾಗಿ ಜನರಿಗೆ 24 ಗಂಟೆ ನೀರು ಕೊಡಬೇಕು. ಭಾಲ್ಕಿ ಕ್ಷೇತ್ರದಲ್ಲಿ ಹೆಣ್ಣುಮಕ್ಕಳು ಸೈಕಲ್ ಮೂಲಕ ಒಂದು ಕಿ.ಮೀ. ದೂರದಿಂದ ನೀರು ತರುತ್ತಿದ್ದೇವೆ ಎಂದು ಮನವಿ ಸಲ್ಲಿಸಿದರು. ಇಂತಹ ಪ್ರಕರಣಗಳು ಎಲ್ಲೂ ಕಂಡು ಬರಬಾರಸದು ಎಂದರು.
ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ನಗರಸಭೆ, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಣೆ ಮಾಡಬೇಕು. ಜಾನುವಾರುಗಳಿಗೆ ಬೇಸಿಗೆಯಲ್ಲಿ ಮೇವಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕೆಂದು ಸಚಿವರು ಪಶು ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು.ನಮ್ಮ ಮೊದಲ ಆದ್ಯತೆ ಕುಡಿಯುವ ನೀರಿಗೆ ಕೊಡಬೇಕು. ಯಾವುದೇ ದೂರು ಬಂದರೆ ತಕ್ಷಣ ಭೇಟಿ ನೀಡಬೇಕು. ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಸಹಾಯವಾಣಿ ತೆರೆದು ಅದಕ್ಕೆ ಒಬ್ಬ ನೋಡಲ್ ಅಧಿಕಾರಿ ನೇಮಿಸಬೇಕು ಎಂದು ಹೇಳಿದರು.
ಬಿಸಿಲಿನ ತಾಪಮಾನ ಹೆಚ್ಚಾದರೆ ಮಾಹಿತಿ ನೀಡಬೇಕು. ಜನರಿಗೆ ಡಿ ಹೈಡ್ರೆಟ್ ಆಗದಂತೆ ಆಸ್ಪತ್ರೆಗಳಲ್ಲಿ ಓಆರ್ಸ್ ಪಾಕೇಟ್ಗಳನ್ನು ಇಡಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಾ.7ಕ್ಕೆ ಮುಖ್ಯಮಂತ್ರಿ ಬೀದರ್ ಜಿಲ್ಲೆಗೆ ಬರುತ್ತಿದ್ದು ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಹೇಳಿದರು.
ಆರ್ಥಿಕ ವರ್ಷ ಮುಗಿಲಿಕ್ಕೆ ಬಂದಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯಬೇಕು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹೋದ ಸಲ 3 ಸಾವಿರ ಕೋಟಿ ಹಣ ನೀಡಲಾಗಿತ್ತು. ಈ ವರ್ಷ 5 ಸಾವಿರ ಕೋಟಿ ಹಣ ಮೀಸಲಿಟ್ಟಿದ್ದೇವೆ. ಅಭಿವೃದ್ಧಿ ಕೆಲಸ ಮತ್ತು ಕಾಮಗಾರಿಗಳು ಜಿಲ್ಲೆಯಲ್ಲಿ ನಡೆಯುತ್ತಿದ್ದು ಎಲ್ಲರೂ ಹಗಲಿರುಳು ಶ್ರಮಿಸುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಸಿಇಓ ಡಾ.ಗಿರೀಶ್ ಬದೋಲೆ, ಎಸ್ಪಿ ಚನ್ನಬಸವಣ್ಣ ಎಸ್.ಎಲ್., ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ., ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕರಾದ ಪ್ರಭಾಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಜ್ಞಾನೇಶ್ವರ ನೀರಗುಡಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ, ಜಿಲ್ಲೆಯ ಎಲ್ಲಾ ತಾಲೂಕಿನ ತಹಸೀಲ್ದಾರರು, ತಾ.ಪಂ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.