ಸಾರಾಂಶ
ಹಳೇ ಹುಬ್ಬಳ್ಳಿ ಪ್ರಕರಣದಲ್ಲಿ ಪಾರದರ್ಶಕವಾಗಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಶೇ. 90ರಷ್ಟು ಅಮಾಯಕರನ್ನು ಬಂಧಿಸಲಾಗಿದೆ ಎಂಬುದನ್ನು ಸಚಿವರು ಮೊದಲು ಅರಿತುಕೊಳ್ಳಬೇಕು. ರಾಜಕೀಯ ದುರುದ್ದೇಶದಿಂದ ಬಹುತೇಕ ಅಮಾಯಕರನ್ನು ಬಂಧಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟು ಚುನಾವಣೆ ಎದುರಿಸಬೇಕೆ ಹೊರತು ಧರ್ಮ, ಜಾತಿ ವಿಚಾರಗಳ ಬಗ್ಗೆ ಮತ್ತು ಒಂದು ಕೋಮಿನ ವಿರುದ್ಧ ನಿರಂತರವಾಗಿ ಹೇಳಿಕೆ ನೀಡುತ್ತಿರುವುದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಘನತೆಗೆ ತಕ್ಕುದಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿತರ ಬಿಡುಗಡೆ ಕುರಿತು ಕೇಂದ್ರ ಸಚಿವರು ನೀಡಿರುವ ಹೇಳಿಕೆಗೆ ಶಾಸಕ ಅಬ್ಬಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಳೇ ಹುಬ್ಬಳ್ಳಿ ಪ್ರಕರಣದಲ್ಲಿ ಪಾರದರ್ಶಕವಾಗಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಶೇ. 90ರಷ್ಟು ಅಮಾಯಕರನ್ನು ಬಂಧಿಸಲಾಗಿದೆ ಎಂಬುದನ್ನು ಸಚಿವರು ಮೊದಲು ಅರಿತುಕೊಳ್ಳಬೇಕು. ರಾಜಕೀಯ ದುರುದ್ದೇಶದಿಂದ ಬಹುತೇಕ ಅಮಾಯಕರನ್ನು ಬಂಧಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಅವರ ಮೇಲೆ ಉದ್ದೇಶಪೂರ್ವಕವಾಗಿ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗಿದೆ. ಅಮಾಯಕರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಗಿದೆಯಷ್ಟೇ. ಅದನ್ನೇ ಕೇಂದ್ರ ಸಚಿವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.