ಹಾವೇರಿ: ಬಾಲಕಾರ್ಮಿಕ ಮುಕ್ತ ಜಿಲ್ಲೆ ಮಾಡುವುದು ಜಿಲ್ಲಾಡಳಿತದ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ತಿಳಿಸಿದರು.ನಗರದ ಜಿಲ್ಲಾ ಗುರುಭವನದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.ಯಾವುದೇ ಮಗು ಶಾಲೆಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಕಡ್ಡಾಯ ಶಿಕ್ಷಣ ಜಾರಿಗೆ ತಂದಿದೆ. ಶಿಕ್ಷಣದಿಂದ ಮಹತ್ವದ ಬದಲಾವಣೆ ಸಾಧ್ಯ. ದೇಶದ ಆರ್ಥಿಕ ಬೆಳವಣಿಗೆಗೆ ಶಿಕ್ಷಣ ಸಹಕಾರಿಯಾಗಿದೆ. ಮಕ್ಕಳು ಬಾಲ್ಯಾವಸ್ಥೆಯಲ್ಲಿ ತಮ್ಮ ಹಕ್ಕುಗಳನ್ನು ಪಡೆಯುವ ಜತೆಗೆ ಶಿಕ್ಷಣವಂತರಾಗಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳಿಸದೇ ಶಾಲೆಗೆ ದಾಖಲಿಸುವ ಮೂಲಕ ಅವರಿಗೆ ಉಜ್ವಲ ಭವಿಷ್ಯ ಕಟ್ಟಿಕೊಡಬೇಕು ಎಂದು ಸಲಹೆ ನೀಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಉಚಿತ ಶಿಕ್ಷಣದ ಜತೆಗೆ ಪಠ್ಯಪುಸ್ತಕ, ಸಮವಸ್ತ್ರ, ಉಪಾಹಾರ, ಮೊಟ್ಟೆ, ರಾಗಿ ಮಾಲ್ಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಮಕ್ಕಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಮಾತನಾಡಿ, ಮಕ್ಕಳ ಮೇಲೆ ದೌರ್ಜನ್ಯ ನಡೆದಾಗ, ಕಾಣೆಯಾದ ಹಾಗೂ ಶಾಲೆಯಿಂದ ಹೊರಗಳಿದ ಮಕ್ಕಳು ಕಂಡುಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಿದರೆ, ಅಂತಹ ಮಕ್ಕಳ ಸಮಸ್ಯೆ ಪರಿಹರಿಸಲಾಗುವುದು ಹಾಗೂ ಪುನರ್ವಸತಿ ಕಲ್ಪಿಸಲಾಗುವುದು. ಮಕ್ಕಳ ಸಹಾಯವಾಣಿ ದಿನದ 24 ಗಂಟೆಯು ಕಾರ್ಯನಿರ್ವಹಿಸುತ್ತದೆ ಎಂದರು.ಸಹಾಯಕ ಕಾನೂನು ನೆರವು ಅಭಿರಕ್ಷಕ ಎನ್.ಎನ್. ದಿಳ್ಳೆಪ್ಪನವರ ಅವರು ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ ) ಕಾಯ್ದೆ- 1986 ಹಾಗೂ ತಿದ್ದುಪಡಿ ಕಾಯ್ದೆ-2016 ಕುರಿತು ಹಾಗೂ ಆಶಾ ಕಿರಣ ರೂರಲ್ ಡೆವಲಪ್ಮೆಂಟ್ ಸೊಸೈಟಿ ಅಧ್ಯಕ್ಷ ಮುತ್ತುರಾಜ ಮಾದರ ಬಾಲಕಾರ್ಮಿಕ ಪದ್ಧತಿಯ ಕಾರ್ಯ ವಿಧಾನ ಮತ್ತು ತಡೆಗಟ್ಟುವಿಕೆ ಕ್ರಮಗಳ ಕುರಿತು ಉಪನ್ಯಾಸ ನೀಡಿದರು.ಪ್ರಶಸ್ತಿ ಪತ್ರ ವಿತರಣೆ: ಇದೇ ಸಂದರ್ಭದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.ಡಿಎಸ್ಪಿ ಎಂ.ಎಸ್. ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಹಾಗೂ ಕಾರ್ಮಿಕ ನಿರೀಕ್ಷಕ ಮಹಾಂತೇಶ ಹಿರೇಮಠ ಇತರರಿದ್ದರು.ಜಿಲ್ಲಾ ಕಾರ್ಮಿಕ ಅಧಿಕಾರಿ ತರನ್ನುಮ ಬೆಂಗಾಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಪಾ ನಿರೂಪಿಸಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ರಾಘವೇಂದ್ರ ಶಿರೂರ ವಂದಿಸಿದರು.ಜಾಥಾ: ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಬಿಪಿನ್ ಎಚ್.ಎಂ. ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಭಾರತಿ ಎಚ್., ಜಿಲ್ಲಾ ಕಾರ್ಮಿಕ ಅಧಿಕಾರಿ ತರನ್ನುಮ ಬೆಂಗಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ಮುಖ್ಯೋಪಾಧ್ಯಾಯರಾದ ಶೋಭಾ ಜಾಘಟಗೇರಿ ಇತರರು ಭಾಗವಹಿಸಿದ್ದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ
ಪೋಷಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳಿಸದೇ ಶಾಲೆಗೆ ದಾಖಲಿಸುವ ಮೂಲಕ ಅವರಿಗೆ ಉಜ್ವಲ ಭವಿಷ್ಯ ಕಟ್ಟಿಕೊಡಬೇಕು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.