ಕನ್ನಡಪ್ರಭ ವಾರ್ತೆ ಹುಣಸೂರು
ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನದಡಿ ಮೌಲ್ಯಯುತ ಜೀವನ ನಡೆಸುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆಯನ್ನು ನೀಡೋಣವೆಂದು ಉಪವಿಭಾಗಾಧಿಕಾರಿ ಕೆ.ವಿ. ಕಾವ್ಯರಾಣಿ ಕರೆ ನೀಡಿದರು.ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿಯಿಂದ ಪಟ್ಟಣದ ಮುನೇಶ್ವರ ಕಾವಲ್ ಮೈದಾನದಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ನೀಡಿದ ಸಂವಿಧಾನವನ್ನು ನಮಗೆ ನಾವು ಸಮರ್ಪಿಸಿಕೊಂಡಿದ್ದೇವೆ. ಸಂವಿಧಾನದ ಮೌಲ್ಯಗಳು, ಆದರ್ಶಗಳು ನಮ್ಮ ಜೀವನದಲ್ಲಿ ಪ್ರತಿಬಿಂಬಿಸಬೇಕು. ಅಭಿವೃದ್ಧಿ ಎನ್ನುವುದು ಕೇವಲ ಸರ್ಕಾರ ಮತ್ತು ಅಧಿಕಾರಿಗಳಿಂದ ಮಾತ್ರ ಸಾಧ್ಯವಾಗದು. ದೇಶದ ನಾಗರಿಕರೂ ಇದಕ್ಕೆ ಕೈಜೋಡಿಸಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಡಿ. ಹರೀಶ್ ಗೌಡ ಮಾತನಾಡಿ, ಅಂಬೇಡ್ಕರ್ ನೇತೃತ್ವದಲ್ಲಿ ವಿಶ್ವದಲ್ಲೇ ಅತ್ಯಂತ ವಿಶಿಷ್ಟ ಸಂವಿಧಾನ ನಮಗೆ ದೊರಕಿದೆ. ಅತ್ಯಂತ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿದೆ ಎನ್ನುವ ಹೆಗ್ಗಳಿಕೆಯೊಂದಿಗೆ ಇದೀಗ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕಶಕ್ತಿಯಾಗಿ ಭಾರತ ಮುನ್ನಡೆಯುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಈ ಎಲ್ಲ ಸಾಧನೆಗೆ ಮೂಲ ಅಂಬೇಡ್ಕರ್ ನೀಡಿದ ಸಂವಿಧಾನವೇ ಕಾರಣ. ಜಾತಿ, ಮತ, ಪಂಥಗಳನ್ನು ಮೀರಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಬದುಕೋಣ. ತಾಲೂಕಿನಲ್ಲಿ ಎಲ್ಲರ ಸಹಕಾರದೊಂದಿಗೆ ಅಭಿವೃದ್ಧಿಕಾರ್ಯಗಳನ್ನು ನಡಸಬೇಕಿದ್ದು, ಎಲ್ಲರ ಸಹಕಾರ ಇರಲಿ ಎಂದರು.
ಡಿವೈಎಸ್ಪಿ ರವಿ, ತಹಸೀಲ್ದಾರ್ ಜೆ. ಮಂಜುನಾಥ್, ನಗರಸಭೆ ಪೌರಾಯುಕ್ತೆ ಕೆ. ಮಾನಸ, ಬಿಇಒ ಎಸ್.ಪಿ. ಮಹದೇವ್, ಟಿಎಪಿಸಿಎಂಎಸ್ ಅಧ್ಯಕ್ಷ ಪ್ರೇಮ್ ಕುಮಾರ್, ಮುಖಂಡರಾದ ರಾಘು, ಪುಟ್ಟರಾಜು, ವಿ.ಎನ್. ದಾಸ್, ಮಹದೇವಮ್ಮ, ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕೃಷಿ ಇಲಾಖೆ ವತಿಯಿಂದ ಆತ್ಯ ಯೋಜನೆಯಡಿ ಐವರು ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಮೀನುಗಾರಿಕೆ ಇಲಾಖೆ ವತಿಯಿಂದ 28 ಮಂದಿ ರೈತರಿಗೆ ಮೀನಿನ ಬಲೆ ಕಿಟ್ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ತಲಾ 50 ಸಾವಿರ ರು. ಗಳ ಚೆಕ್ ಅನ್ನು ಶಾಸಕ ಜಿ.ಡಿ. ಹರೀಶ್ಗೌಡ ವಿತರಿಸಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.