ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ ಬಸವಣ್ಣನವರ ಒಂದಾದರೂ ವಚನವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅನೇಕ ಸಮಸ್ಯೆಗಳಿಗೆ ಪರಿಹಾರ ಲಭಿಸುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ ಬಸವಣ್ಣನವರ ಒಂದಾದರೂ ವಚನವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅನೇಕ ಸಮಸ್ಯೆಗಳಿಗೆ ಪರಿಹಾರ ಲಭಿಸುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳನ್ನು ಸಾರಿ, ಸಮಾಜದ ದಿಕ್ಕನ್ನು ಬದಲಾಯಿಸಿದ ಕ್ರಾಂತಿಕಾರಿ ಯುಗಪುರುಷನ ಜಯಂತಿಯಂದು ನಾವು ಅವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡಬೇಕು.ಸಾರ್ವತ್ರಿಕವಾಗಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದ ವಿಶ್ವದ ಮೊದಲ ಸಂಸತ್ತು ಎಂದರೆ ಅದು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ. ಅವರು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿಕೊಟ್ಟಿದ್ದಾರೆ.
ಜಾಗತಿಕ ಸಮಸ್ಯೆಗಳಿಗೆ ಬಸವಣ್ಣನವರ ವಚನಗಳು ಲಸಿಕೆ ಇದ್ದಂತೆ. ನಮ್ಮ ಮಕ್ಕಳಿಗೆ ತಿಳಿಸುವ ಪ್ರಯತ್ನ ಮಾಡಿದಲ್ಲಿ ವೈದ್ಯರ ಅವಶ್ಯಕತೆ ಅಷ್ಟಾಗಿ ಇರುವುದಿಲ್ಲ ಎಂದರು.ಭದ್ರಾವತಿಯ ಆಧ್ಯಾತ್ಮಿಕ ಚಿಂತಕರು ಹಾಗೂ ಮನೋ ಚಿಕಿತ್ಸಕರಾದ ಡಾ. ಸಂತೋಷ್ ಕುಮಾರ್ ವಿಶೇಷ ಉಪನ್ಯಾಸ ನೀಡಿ, ಮನುಕುಲದ ಉದ್ದಾರಕ್ಕಾಗಿ ಜನಿಸಿದವರ ದಿನವನ್ನು ಜಯಂತಿ ಎನ್ನಲಾಗುತ್ತದೆ. ಅಜ್ಞಾನದ ಮೇಲೆ ಜ್ಞಾನದ ವಿಜಯ, ಸ್ವಾರ್ಥದ ಮೇಲೆ ಪರೋಪಕಾರದ ಜಯ, ಕತ್ತಲ ಮೇಲೆ ಬೆಳಕಿನ ಜಯ ಗಳಿಸಿರುವವರ, ದ್ವೈತ ಗೆದ್ದು ಅದ್ವೈತ ಸಾಧಿಸಿದವರ ಜಯಂತಿಯನ್ನು ಆಚರಿಸುತ್ತೇವೆ. ಆತ್ಮಾವಲೋಕನ ಮಾಡಿಕೊಳ್ಳುವ ದಿನ ಇದಾಗಿದ್ದು, ಬಸವೇಶ್ವರರ ಒಂದಾದರೂ ವಚನವನ್ನು ಅಳವಡಿಸಿಕೊಂಡಲ್ಲಿ ಈ ದಿನ ಸಾರ್ಥಕವಾಗುತ್ತದೆ ಎಂದರು.
ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿಗಳು ಹಾಗೂ ಬಸವ ಕೇಂದ್ರದ ಡಾ.ಬಸವ ಮರುಳಸಿದ್ದ ಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್, ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಚೇತನ್ ಕೆ, ಸೂಡಾ ಅಧ್ಯಕ್ಷರಾದ ಎಚ್.ಎಸ್. ಸುಂದರೇಶ್,
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ, ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಎಸ್.ಎಸ್. ಜ್ಯೋತಿಪ್ರಕಾಶ್, ಗೌರವ ಕಾರ್ಯದರ್ಶಿಗಳಾದ ಎಸ್. ಪಿ. ದಿನೇಶ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್, ಸಮಾಜದ ಮುಖಂಡರು ಹಾಜರಿದ್ದರು.