ಸಿರುಗುಪ್ಪ: ಪ್ರತಿ ವರ್ಷ ಮೇ 31ರಂದು ವಿಶ್ವದಾದ್ಯಂತ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ಉಂಟಾಗುವ ಮಾರಣಾಂತಿಕ ಕಾಯಿಲೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ತಂಬಾಕು ಮುಕ್ತ ಸಮಾಜವನ್ನು ನಿರ್ಮಿಸುವುದು ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದುಹಾಸ್ಯ ಕಲಾವಿದ ಜೆ.ನರಸಿಂಹಮೂರ್ತಿ ತಿಳಿಸಿದರು.

ನಗರದ ಎಲ್ಲಮ್ಮ ದೇವಿ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಂಬಾಕು ಸೇವನೆಯು ಮಾನವನ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿಯಾಗಿದೆ. ಇದು ಕ್ಯಾನ್ಸರ್, ಹೃದಯಾಘಾತ, ಶ್ವಾಸಕೋಶದ ಕಾಯಿಲೆಗಳು ಮತ್ತು ಪಾರ್ಶ್ವವಾಯು ಮುಂತಾದ ಮಾರಣಾಂತಿಕ ಕಾಯಿಲೆಗಳಿಗೆ ಪ್ರಮುಖ ಕಾರಣವಾಗಿದೆ. ತಂಬಾಕು ಬಳಸುವ ವ್ಯಕ್ತಿಯಷ್ಟೇ ಅಲ್ಲದೆ, ಅವರ ಸುತ್ತಮುತ್ತಲಿರುವವರ ಆರೋಗ್ಯದ ಮೇಲೆಯೂ ಇದು ದುಷ್ಪರಿಣಾಮ ಬೀರುತ್ತದೆ. ಯುವ ಸಮುದಾಯವು ಈ ದುಶ್ಚಟಕ್ಕೆ ಬಲಿಯಾಗದಂತೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.ಸಂಸ್ಥೆಯ ಕೃಷಿ ಮೇಲ್ವಿಚಾರಕ ವೀರೇಶ ಸೋಮನಾಳ ಮಾತನಾಡಿದರು. ಯಲ್ಲಮ್ಮದೇವಿ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ವೈ ಡಿ ವೆಂಕಟೇಶ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪ್ರಿಯಾ, ಸೇವಾಪ್ರತಿನಿಧಿ ಲಕ್ಷ್ಮೀ, ತಸ್ಲೀಮ್, ಸಿ ಎಸ್ ಸಿ ಸೇವಾದಾರ ಶರೀಪ್, ತಬಸುಮ್, ಸಂಘದ ಸದಸ್ಯರು ಇದ್ದರು.

ಸಿರುಗುಪ್ಪ ನಗರದ ಎಲ್ಲಮ್ಮದೇವಿ ಪ್ರೌಢಶಾಲೆಯಲ್ಲಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಾಸ್ಯ ಕಲಾವಿದ ಜೈ ನರಸಿಂಹಮೂರ್ತಿ.