ಮುಂಡರಗಿ: ಫೆ. 19ರಿಂದ ಫೆ. 23ರ ವರೆಗೆ ಮುಂಡರಗಿ ತಾಲೂಕಿನ ಒಟ್ಟು 19 ಗ್ರಾಪಂ ಹಾಗೂ ಮುಂಡರಗಿ ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯುವುದರಿಂದ ಈ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಅದ್ಧೂರಿಯಾಗಿ ನೆರವೇರಿಸುವ ಮೂಲಕ ಯಶಸ್ವಿಗೊಳಿಸೋಣ ಎಂದು ತಹಸೀಲ್ದಾರ್ ಧನಂಜಯ ಮಾಲಗತ್ತಿ ಹೇಳಿದರು.ತಹಸೀಲ್ದಾರ್ ಕಚೇರಿಯ ಸಭಾ ಭವನದಲ್ಲಿ ಇತ್ತೀಚೆಗೆ ಜರುಗಿದ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ಮೆರವಣಿಗೆ ನಡೆಯಬೇಕು. ವಿವಿಧ ಕಲಾ ತಂಡಗಳು ಪಾಲ್ಗೊಳ್ಳಬೇಕು. ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಬೇಕು. ಅಚ್ಚುಕಟ್ಟಾದ ಕಾರ್ಯಕ್ರಮಕ್ಕೆ ಆಯಾ ಪಿಡಿಒಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಗ್ರಾಮದ ಸರ್ವ ಸಮಾಜದವರು, ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರನ್ನು ಆಹ್ವಾನಿಸಬೇಕು ಎಂದು ಹೇಳಿದರು.ಕಾರ್ಯಕ್ರಮವನ್ನು ಸುವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು. ಏನಾದರೂ ಲೋಪ ಕಂಡುಬಂದಲ್ಲಿ ಅಂಥವರ ವಿರುದ್ಧ ಶಿಸ್ತುಕ್ರಮಕ್ಕೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗುವುದು. ಎಲ್ಲ ಇಲಾಖೆಗಳ ಪಂಚಾಯಿತಿ ವ್ಯಾಪ್ತಿಯ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ಶಾಲಾ-ಕಾಲೇಜುಗಳ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಶಿಕ್ಷಕರು, ಅಂಗನವಾಡಿ ಮೇಲ್ವಿಚಾರಕರು, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಮಾತನಾಡಿ, ಸ್ಥಳೀಯ ಕಲಾ ತಂಡಗಳಾದ ಡೊಳ್ಳುಕುಣಿತ, ಹಲಗೆ ಕುಣಿತ, ತಮಟೆ ವಾದ್ಯ, ಕುಂಭದ ಮೆರವಣಿಗೆ, ಸೈಕಲ್ ಜಾಥಾ, ಬೈಕ್ ಜಾಥಾಗಳನ್ನು ಹಮ್ಮಿಕೊಳ್ಳುವ ಮುಖಾಂತರ ಅದ್ಧೂರಿ ಮೆರವಣಿಗೆ ಮಾಡಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉದಯಕುಮಾರ ಯಲಿವಾಳ ಮಾತನಾಡಿ, ಫೆ. 23ರಂದು ಪುರಸಭೆ ವ್ಯಾಪ್ತಿಯಲ್ಲಿ ಜಾಥಾದ ಕೊನೆಯ ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಅಂದು ಪುರಸಭೆ ವ್ಯಾಪ್ತಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಅಂದು ಎಲ್ಲ ಜನಪ್ರತಿನಿಧಿಗಳು, ಮುಖಂಡರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಎಲ್ಲ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಈ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದರು.ಎಚ್.ಡಿ. ಪೂಜಾರ್, ಲಕ್ಷ್ಮಣ ತಗಡಿನಮನಿ, ಅಡಿವೆಪ್ಪ ಚಲವಾದಿ, ಪರಶುರಾಮ, ಜ್ಯೋತಿ ಹಾನಗಲ್, ಅಶ್ವಿನಿ ಗೌಡರ, ಹುಚ್ಚಪ್ಪ, ವಿ.ಎಸ್. ಗಟ್ಟಿ, ನಿಂಗರಾಜ ಹಾಲಿನವರ, ಪ್ರವೀಣ, ದುರುಗಪ್ಪ ಉಪಸ್ಥಿತರಿದ್ದರು.
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸೋಣ-ತಹಸೀಲ್ದಾರ್ ಧನಂಜಯ
ಫೆ. 19ರಿಂದ ಫೆ. 23ರ ವರೆಗೆ ಮುಂಡರಗಿ ತಾಲೂಕಿನ ಒಟ್ಟು 19 ಗ್ರಾಪಂ ಹಾಗೂ ಮುಂಡರಗಿ ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯುವುದರಿಂದ ಈ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಅದ್ಧೂರಿಯಾಗಿ ನೆರವೇರಿಸುವ ಮೂಲಕ ಯಶಸ್ವಿಗೊಳಿಸೋಣ ಎಂದು ತಹಸೀಲ್ದಾರ್ ಧನಂಜಯ ಮಾಲಗತ್ತಿ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.