ವಚನ ಸಾಹಿತ್ಯದಲ್ಲಿ ಅಡಗಿರುವ ಒಳ್ಳೆಯ ಜೀವನ ಮೌಲ್ಯಗಳು ಮತ್ತು ಸಂದೇಶಗಳನ್ನು ಅರಿತರೆ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಮಾರ್ಗವಾಗಲಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಹೇಳಿದರು.

ಹೊಸಪೇಟೆ: ವಚನ ಸಾಹಿತ್ಯದಲ್ಲಿ ಅಡಗಿರುವ ಒಳ್ಳೆಯ ಜೀವನ ಮೌಲ್ಯಗಳು ಮತ್ತು ಸಂದೇಶಗಳನ್ನು ಅರಿತರೆ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಮಾರ್ಗವಾಗಲಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಹೇಳಿದರು.

ನಗರದ ಶಂಕರ ಆನಂದ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಚಕೋರ ಸಾಹಿತ್ಯ ವಿಚಾರ ವೇದಿಕೆ ಹಾಗೂ ಶಂಕರ ಆನಂದ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾಹಿತ್ಯದ ಪ್ರಕಾರಗಳಲ್ಲಿ ವಚನ ಸಾಹಿತ್ಯ ತುಂಬಾ ಗಮನ ಸೆಳೆಯುವ ಪ್ರಾಮುಖ್ಯತೆಯನ್ನು ಹೊಂದಿದೆ. ತಂತ್ರಜ್ಞಾನ ಮತ್ತು ಕೃತಕಮತ್ತೆ ಯುಗದಲ್ಲಿ ವಚನಗಳ ಓದುಗರ ಸಂಖ್ಯೆ ಕ್ಷೀಣವಾಗಿದೆ. ವಚನಗಳನ್ನು ಓದಿ ಅವುಗಳ ಮಹತ್ವವನ್ನು ತಿಳಿದುಕೊಳ್ಳಬೇಕಿದೆ. ವಚನಗಳ ತಾತ್ಪರ್ಯವನ್ನು ಸರಿಯಾಗಿ ಅರ್ಥೈಸಿಕೊಂಡರೆ ಸ್ವಯಂಪ್ರೇರಿತ ಬದಲಾವಣೆ ಸಾಧ್ಯವಾಗಲಿದೆ. ಕನ್ನಡ ವಚನಕಾರರು ಅದ್ಭುತ ಸಾಹಿತ್ಯವನ್ನು ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕ ಡಾ. ಮಲ್ಲಿಕಾರ್ಜುನ ಬಿ. ಮಾನ್ಪಡೆ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾಹಿತ್ಯದ ಬಗ್ಗೆ ಹೆಚ್ಚಿನ ಆಸಕ್ತಿ ಮತ್ತು ಅರಿವು ಮೂಡಿಸುವುದಕ್ಕೆ ಚಕೋರ ವಚನ ಸಾಹಿತ್ಯ ವೇದಿಕೆ ಎಂಬ ಕಾರ್ಯಕ್ರಮವನ್ನು ಪಿಯು, ಪದವಿ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ. ಪಠ್ಯಕ್ರಮದ ಜೊತೆಗೆ ವಚನ ಸಾಹಿತ್ಯ, ಕಾದಂಬರಿ, ಕತೆಗಳು ಮತ್ತು ಕಾವ್ಯಗಳನ್ನು ಓದಿಕೊಳ್ಳಬೇಕು. ಕರ್ನಾಟಕ ಸಾಹಿತ್ಯ ಅಕಾಡೆಮಿಯು 100 ಸಾಹಿತ್ಯ ಪುಸ್ತಕಗಳನ್ನು ಮುದ್ರಿಸಿ ಪ್ರಕಟಿಸುತ್ತಿದೆ. ಇಂದಿನ ಯುವಜನತೆ ಮೊಬೈಲ್‌ ಗೀಳು ಬಿಟ್ಟು ಹಾಕಿ ವಚನ ಸಾಹಿತ್ಯವನ್ನು ಓದಿಕೊಳ್ಳಬೇಕು. ವಚನ ಸಾಹಿತ್ಯ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳು ಮಾಡಬೇಕಿದೆ ಎಂದರು.ನಗರದ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಜಿ. ನಾರಾಯಣ ಹೆಬಸೂರ ಮಾತನಾಡಿ, ಬಸವಣ್ಣ, ಅಲ್ಲಮಪ್ರಭು, ಸರ್ವಜ್ಞ, ಅಕ್ಕಮಹಾದೇವಿ ಸೇರಿದಂತೆ ಅನೇಕ ವಚನಕಾರರು ಬರೆದಿರುವ ಪ್ರತಿಯೊಂದು ವಚನವು ಸಹ ತನ್ನದೇ ಆದ ಮಹತ್ವ ಹೊಂದಿದೆ ಎಂದರು.

ವಿಶ್ರಾಂತ ಪ್ರಾಧ್ಯಾಪಕ ಡಾ. ಮೃತ್ಯುಂಜಯ ರುಮಾಲೆ ಅವರು, ಉತ್ತಮ ವ್ಯಕ್ತಿತ್ವ ರೂಪಿಸಲು ವಚನ ಸಾಹಿತ್ಯದ ಬಗ್ಗೆ ಉಪನ್ಯಾಸ ನೀಡಿದರು.

ಶಂಕರ ಆನಂದ ಸಿಂಗ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಿ. ದೇವಣ್ಣ, ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ನಾಗಣ್ಣ ಕಿಲಾರಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಸಂಚಾಲಕ ವೆಂಕಟೇಶ ಬಡಿಗೇರ, ಮುದೇನೂರು ಉಮಾಮಹೇಶ್ವರ ಸೇರಿದಂತೆ ವಿವಿಧ ವಿಷಯಗಳ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.