ಮದಿರೆ ಗ್ರಾಮದ ವಿದ್ಯಾರ್ಥಿಗಳು ಮತ್ತು ಪೋಷಕರು ಸೋಮವಾರ ಬಿಇಒ ಅವರಿಗೆ ಪತ್ರ ಬರೆಯುವ ಮೂಲಕ ಚಳುವಳಿ ಆರಂಭಿಸಿದರು. ಈ ಮೂಲಕ ಸರ್ಕಾರದ ಏಕಪಕ್ಷೀಯ ನಿರ್ಧಾರದ ವಿರುದ್ಧ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕುರುಗೋಡು: ತಾಲೂಕಿನ ಮದಿರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೋಳೂರು ಗ್ರಾಮದಲ್ಲಿ ಆರಂಭಗೊಳ್ಳಲಿರುವ ಕೆಪಿಎಸ್ ಶಾಲೆಗೆ ವಿಲೀನಗೊಳಿಸುವ ಸರ್ಕಾರದ ಕ್ರಮ ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಸೋಮವಾರ ಬಿಇಒ ಅವರಿಗೆ ಪತ್ರ ಬರೆಯುವ ಮೂಲಕ ಚಳುವಳಿ ಆರಂಭಿಸಿದರು. ಈ ಮೂಲಕ ಸರ್ಕಾರದ ಏಕಪಕ್ಷೀಯ ನಿರ್ಧಾರದ ವಿರುದ್ಧ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಗುರಳ್ಳಿ ರಾಜ ಮಾತನಾಡಿ, ರಾಜ್ಯ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಕೆಪಿಎಸ್ ಯೋಜನೆಯಿಂದ ಶಿಕ್ಷಣ ಇಲಾಖೆಯನ್ನು ಸಂಪೂರ್ಣ ಖಾಸಗೀಕರಣ ಮಾಡುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.ಕೆಪಿಎಸ್ ಯೋಜನೆ ಜಾರಿ ಮೊದಲು ಪೋಷಕರ, ಶಿಕ್ಷಣ ತಜ್ಞರ ಮತ್ತು ಶಿಕ್ಷಕರ ಅಭಿಪ್ರಾಯ ಸಂಗ್ರಹಿಸದೆ ಸರ್ವಧಿಕಾರಿ ಧೋರಣೆ ಅನುಸರಿಸಿದೆ. ಶಿಕ್ಷಣ ಇಲಾಖೆಯನ್ನು ಕಾರ್ಪೋರೇಟ್ ಕಂಪನಿಗಳಿಗೆ ಹಸ್ತಾಂತರಿಸುವ ಯೋಜನೆಯಾಗಿದೆ ಎಂದು ಆರೋಪಿಸಿದರು. ಗ್ರಾಮಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸದೆ ಮುಚ್ಚಲು ಹೊರಟಿರುವ ಸರ್ಕಾರ ಜನಾಕ್ರೋಶಕ್ಕೆ ಗುರಿಯಾಗಿದೆ. ಈ ಯೋನೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ರಾಜ್ಯ ಸರ್ಕಾರ ೮ನೇ ಗ್ಯಾರಂಟಿಯಾಗಿದೆ ಎಂದು ಪ್ರಚಾರ ಮಾಡುತ್ತಿರುವುದು ನಾಟಿಕೆಗೇಡಿನ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲ ಸರ್ಕಾರಿ ಶಾಲೆಗಳಿಗೆ ಉತ್ತಮ ಶಿಕ್ಷಕರನ್ನು ನೇಮಿಸಿ ಈಗಿರುವ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವ ವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.ಹೋರಾಟ ಸಮಿತಿ ಸದಸ್ಯೆ ವಿದ್ಯಾವತಿ, ಗ್ರಾಮಸ್ಥರಾದ ದೊಡ್ಡಬಸಪ್ಪ, ಲೋಕೇಶ್, ಲಾಲೆಪ್ಪ, ರಮೇಶ್ ಮತ್ತು ರವಿಚಂದ್ರ ಇದ್ದರು.