ಉಡುಪಿ: 2026-27ನೇ ಸಾಲಿನ ಹವಾಮಾನ ಆಧರಿತ ಬೆಳೆ ವಿಮೆ ಯೋಜನೆಯ ನೋಂದಾವಣೆ ಅವಧಿ ಜೂ. 30ರ ಅಂತ್ಯಕ್ಕೆ ಮುಕ್ತಾಯಗೊಳ್ಳುತ್ತಿದ್ದು, ಎಲ್ಲ ರೈತರ ನೋಂದಾವಣೆ ಸಾಧ್ಯವಾಗಿಲ್ಲದ ಕಾರಣ ನೋಂದಾವಣೆಯನ್ನು ಒಂದು ತಿಂಗಳ ಅವಧಿಗೆ ವಿಸ್ತರಿಸಬೇಕು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರದ ಕೃಷಿ ಮತ್ತು ತೋಟಗಾರಿಕಾ ಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರದ ಕೃಷಿ ಕಾರ್ಯದರ್ಶಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ವಿಶೇಷವಾಗಿ ಅಡಿಕೆ, ಕಾಳುಮೆಣಸು ಸೇರಿದಂತೆ ಇನ್ನಿತರ ತೋಟಗಾರಿಕಾ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ರೈತರು ಆಸಕ್ತಿ ಹೊಂದಿದ್ದಾರೆ. ಆದರೆ ಜಿಲ್ಲೆಯಲ್ಲಿ ತಡವಾಗಿ ಬಂದ ಮಳೆ ಮತ್ತು ಪ್ರತಿಕೂಲ ಹವಾಮಾನ, ಕೃಷಿ ಚಟುವಟಿಕೆ ಹಾಗೂ ರೈತಾಪಿ ವರ್ಗದ ಕೆಲಸದ ಒತ್ತಡ ಹಾಗೂ ಸಾಲು ಸಾಲಾಗಿ ಬಂದ ಸರ್ಕಾರಿ ರಜೆಗಳಿಂದ ಬ್ಯಾಂಕ್ ವ್ಯವಹಾರ ವಿಳಂಬವಾಗಿದ್ದು, ರೈತರು ವಿಮಾ ಸೌಲಭ್ಯವನ್ನು ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ.ಅಲ್ಲದೆ ಬೆಳೆ ವಿಮೆಯ ಯೋಜನೆಯಡಿ ತಾಂತ್ರಿಕ ದೋಷಗಳನ್ನು ಸರಿಪಡಿಸುವುದು ವಿಳಂಬವಾದ ಹಿನ್ನೆಲೆಯಲ್ಲಿ ಅನೇಕ ರೈತರು ವಿಮಾ ಯೋಜನೆಯನ್ನು ಪಡೆಯಲು ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹವಾಮಾನ ಆಧರಿತ ಬೆಳೆ ವಿಮೆ ಯೋಜನೆಯ ಪ್ರಯೋಜನ ಎಲ್ಲ ರೈತಾಪಿ ವರ್ಗಕ್ಕೆ ಸಿಗುವಂತೆ ಅವಧಿಯನ್ನು ಮುಂದಿನ 1 ತಿಂಗಳುಗಳ ಕಾಲ ವಿಸ್ತರಿಸಬೇಕು ಎಂದು ಕೋಟ ಪತ್ರದಲ್ಲಿ ಆಗ್ರಹಿಸಿದ್ದಾರೆ.