ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಾದ- ವಿವಾದಗಳನ್ನು ಆಲಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಅವರು ಇಬ್ಬರೂ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಅಂಜುಮ್‌ಗೆ ೧೦ ಸಾವಿರ ರು. ದಂಡ, ರಹೀಂಖಾನ್‌ಗೆ ೧೫ ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸುಪಾರಿ ಕೊಟ್ಟು ಕೊಲ್ಲಿಸಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ, ಶ್ರೀರಂಗಪಟ್ಟಣದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಕೆ.ಆರ್.ಪೇಟೆ ತಾಲೂಕು ಅಕ್ಕಿ ಹೆಬ್ಬಾಳು ಗ್ರಾಮದ ಅಂಜುಮ್ ಅರಾ ಅಲಿಯಾಸ್ ಜನಾಬ್ (೨೭) ಹಾಗೂ ಮೈಸೂರಿನ ಗೌಸಿಯಾ ನಗರದ ಆಕೆಯ ಪ್ರಿಯಕರ ರಹೀಂಖಾನ್ ಅಲಿಯಾಸ್ ಸನ್ನು (೨೧) ಶಿಕ್ಷೆಗೊಳಗಾದ ಅಪರಾಧಿಗಳು.

ಅಂಜುಮ್ ಮದುವೆಯಾಗಿದ್ದರೂ ಪ್ರಿಯಕರ ರಹೀಂಖಾನ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಇದಕ್ಕೆ ಅಡ್ಡಿಯಾಗಿದ್ದ ನಾಸೀರ್ ಪಾಷನನ್ನು ಪತ್ನಿ ಹಾಗೂ ಪ್ರಿಯಕರ ಸೇರಿ ೨೬ ಅಕ್ಟೋಬರ್ ೨೦೨೧ರಂದು ಸುಪಾರಿ ಕೊಟ್ಟು ಕೊಲ್ಲಿಸಿದ್ದರು. ಪ್ರಕರಣ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಎಸ್.ನಿರಂಜನ್ ತನಿಖೆ ಕೈಗೊಂಡು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದರು. ಅಪರಾಧಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಾದ- ವಿವಾದಗಳನ್ನು ಆಲಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಅವರು ಇಬ್ಬರೂ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಅಂಜುಮ್‌ಗೆ ೧೦ ಸಾವಿರ ರು. ದಂಡ, ರಹೀಂಖಾನ್‌ಗೆ ೧೫ ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಆರಕ್ಷಕ ಅಧೀಕ್ಷಕರು ಶ್ಲಾಘಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಎಂ.ಕೆ.ಪ್ರಪುಲ್ಲಾ ವಾದ ಮಂಡಿಸಿದ್ದರು.