ಚಿತ್ರದುರ್ಗದ ಕಲಾ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಆರೋಗ್ಯ ದಿನಾಚರಣೆಯನ್ನು ಪ್ರೊ.ತಾರಿಣಿ ಶುಭದಾಯಿನಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ, ಜೀವನ ಶೈಲಿ ಬದಲಾವಣೆಯೊಂದಿಗೆ ಹವ್ಯಾಸ ಬದಲಾಯಿಸಿಕೊಂಡಲ್ಲಿ ಅದೃಷ್ಟ ಬದಲಾಗುತ್ತದೆ ಎಂದು ಚಿತ್ರದುರ್ಗ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಹೇಳಿದರು.

ನಗರದ ಸರ್ಕಾರಿ ಕಲಾ (ಸ್ವಾಯತ್ತ) ಕಾಲೇಜಿನಲ್ಲಿ ಆರೋಗ್ಯ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಎನ್‍ಎಸ್‍ಎಸ್ ಘಟಕ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಬೆಳವಣಿಗೆಗಳು ಜನರ ಜೀವಿತಾವಧಿಯನ್ನು ಹೆಚ್ಚಿಸುತ್ತಿವೆ. ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಞಾನದೊಂದಿಗೆ ನಿಲ್ಲೋಣ. ರೋಗ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸೋಣ. ಸ್ವಚ್ಛತೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ. ಮಧುಮೇಹ, ಕ್ಯಾನ್ಸರ್ ಹಾವಳಿ ಹೆಚ್ಚಾಗದಂತೆ ಜೀವನ ಶೈಲಿ ಬದಲಾವಣೆ ಮಾಡಿಕೊಂಡು ಸದೃಢ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದಾಪುಗಾಲು ಹಾಕಬೇಕು ಎಂದು ತಿಳಿಸಿದರು.

ರೋಗಗಳು ದೇವರ ಕಾಟ, ಪಾಪ ಪುಣ್ಯದ ಫಲವಲ್ಲ. ಉತ್ತಮ ಆರೋಗ್ಯ ಅಭ್ಯಾಸಗಳಿಂದ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿ ರೋಗಗಳು ಸುಳಿಯದಂತೆ ತಡೆಯಬಹುದು ಎಂದು ಕಿವಿಮಾತು ಹೇಳಿದರು.

ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ತಾರಿಣಿ ಶುಭದಾಯಿನಿ ಮಾತನಾಡಿ, ಆರೋಗ್ಯವೇ ಮಹಾಭಾಗ್ಯ. ಆರೋಗ್ಯ ಹೊಂದಿದ್ದರೆ ಏನೆಲ್ಲಾ ಸಾಧಿಸಬಹುದು. ಆರೋಗ್ಯ ಇಲಾಖೆ ಅಧಿಕಾರಿಗಳು ಮಾರ್ಗದರ್ಶನ ನೀಡಿದಂತೆ ನಾವುಗಳೆಲ್ಲರೂ ಪಾಲಿಸಿದರೆ ಆರೋಗ್ಯವಂತ ದೇಶ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಚಾಲಕ ಪ್ರದೀಪ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್‍ಎಸ್‍ಎಸ್ ಘಟಕದ ಅಧಿಕಾರಿ ಬಸವರಾಜ್, ಪ್ರಸಾದ್, ಉಪನ್ಯಾಸಕಿ ಡಾ.ಸೌಮ್ಯ ಇದ್ದರು.