ಸಾರಾಂಶ
ಕುಷ್ಟಗಿ: ಸಂವಿಧಾನ ಜಾರಿಗೆ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ ರವಿ ಅಂಗಡಿ ಹೇಳಿದರು.ತಾಲೂಕಾಡಳಿತ, ತಾಪಂ ಹಾಗೂ ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಟ್ಟಣದ ತಾವರಗೇರಾ ರಸ್ತೆಯಲ್ಲಿ ಇರುವ ಡಾ.ಅಂಬೇಡ್ಕರ ವೃತ್ತದ ಹತ್ತಿರ ನಡೆದ ಸಂವಿಧಾನ ಜಾಗೃತಿಯ ರಥದ ಮೆರವಣಿಗೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ನಮ್ಮ ಸಂವಿಧಾನವು ಅತ್ಯಂತ ಶ್ರೇಷ್ಠ ಗ್ರಂಥವಾಗಿದೆ. ಸಂವಿಧಾನಕ್ಕೆ ಗೌರವ ಕೊಡಬೇಕು. ಸಂವಿಧಾನದ ಆಶಯಗಳನ್ನು ಎಲ್ಲರೂ ಅರಿತು ಅಳವಡಿಸಿಕೊಂಡಾಗ ಮಾತ್ರ ಸಂವಿಧಾನಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.ಸಂವಿಧಾನದ ಆಶಯವನ್ನು ಸಾರುವ ಸಲುವಾಗಿ ಜಾಗೃತಿ ರಥವನ್ನು ತಾಲೂಕಿನ ಆಯಾ ಗ್ರಾಪಂ ಕಾರ್ಯಾಲಯ ಇರುವ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದರು.ಅದ್ಧೂರಿ ಮೆರವಣಿಗೆ:ಪಟ್ಟಣದ ಡಾ.ಅಂಬೇಡ್ಕರ್ ಪುತ್ಥಳಿಗೆ ಹೂಮಾಲೆ ಸಮರ್ಪಣೆ ಮಾಡುವ ಮೂಲಕ ಸಂವಿಧಾನ ಜಾಗೃತಿಯ ಜಾಥಾವನ್ನು ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತ, ಮಾರುತಿ ವೃತ್ತ ಮೂಲಕ ಬಸ್ ನಿಲ್ದಾಣದ ಮಾರ್ಗವಾಗಿ ಮಲ್ಲಯ್ಯ ವೃತ್ತದವರೆಗೆ ಅದ್ಧೂರಿಯಾಗಿ ಜಾಗೃತಿಯ ಜಾಥಾ ಮೆರವಣಿಗೆ ಮಾಡಲಾಯಿತು.ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಕೋಲಾಟ, ನೃತ್ಯ ಹಾಗೂ ಜಾಗೃತಿಯ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು.ಈ ಸಂದರ್ಭದಲ್ಲಿ ತಾಪಂ ಇಒ ನಿಂಗಪ್ಪ ಮಸಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ, ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಚಂದ್ರ ಸಂಗನಾಳ, ಸಿಪಿಐ ಯಶವಂತ ಬಿಸನಳ್ಳಿ, ಸಿಡಿಪಿಒ ಯಲ್ಲಮ್ಮ ಹಂಡಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು ವಿದ್ಯಾರ್ಥಿಗಳು ಶಾಲಾ ಶಿಕ್ಷಕರು ಇದ್ದರು.