ಸ್ವಉದ್ಯೋಗದಿಂದ ಸ್ವಾವಲಂಬಿ ಬದುಕು: ಬಾಬು ನಾಯ್ಕ

| Published : Jan 25 2024, 02:04 AM IST

ಸಾರಾಂಶ

ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು ಸಾಧ್ಯವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರಿಗಾಗಿ ಜ್ಞಾನವಿಕಾಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಸೊರಬದಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಸೊರಬ

ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು ಸಾಧ್ಯವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರಿಗಾಗಿ ಜ್ಞಾನವಿಕಾಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಹೇಳಿದರು.

ತಾಲೂಕಿನ ತತ್ತೂರು ಗ್ರಾ.ಪಂ. ವ್ಯಾಪ್ತಿಯ ಬಾರಂಗಿ ಗ್ರಾಮದಲ್ಲಿ ಮಂಗಳವಾರ ಶ್ರೀ ಹುಚ್ಚೇಶ್ವರ ಜ್ಞಾನವಿಕಾಸ ಕೇಂದ್ರದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆ ಸ್ವಉದ್ಯೋಗ ತರಬೇತಿ ಪಡೆಯುವುದರಿಂದ ಸಮಾಜದಲ್ಲಿ ಸಮಾನತೆ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಯಾವುದೇ ತರಬೇತಿಯನ್ನು ಪಡೆದು ನೈಪುಣ್ಯತೆ ಸಾಧಿಸಿದ ಮಹಿಳೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು ನೀಡುತ್ತದೆ ಎಂದರು.

ಪ್ರತಿ ತಿಂಗಳು ನಡೆಯುವ ಜ್ಞಾನವಿಕಾಸ ಕಾರ್ಯಕ್ರಮಗಳಾದ ಆರೋಗ್ಯ, ಶಿಕ್ಷಣ, ಕಾನೂನು ಅರಿವು, ಮಕ್ಕಳ ಪಾಲನೆ ಪೋಷಣೆ, ಸಂಸ್ಕೃತಿ ಮತ್ತು ಸಂಸ್ಕಾರ, ಕುಟುಂಬ ನಿರ್ವಹಣೆ, ಸ್ವಉದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ. ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಹೊಲಿಗೆ ತರಬೇತಿಯು 3 ತಿಂಗಳಿಗೆ ಮಾತ್ರ ಸೀಮಿತವಲ್ಲ. ಎಲ್ಲರೂ ಸ್ವಾವಲಂಬಿಯಾಗಿ ಬದುಕಬೇಕಾದರೆ ದೊಡ್ಡ ಮಟ್ಟದಲ್ಲಿ ಸ್ವಉದ್ಯೋಗ ಆರಂಭಿಸಬೇಕು. ಇದಕ್ಕಾಗಿ ಹೆಚ್ಚಿನ ತರಬೇತಿಯನ್ನು ನಮ್ಮದೇ ಟ್ರೈನಿಂಗ್ ಸೆಂಟರ್‌ನಲ್ಲಿ ಪಡೆಯಬಹುದು ಎಂದು ತಿಳಿಸಿದರು.

ಒಕ್ಕೂಟದ ಅಧ್ಯಕ್ಷೆ ನೇತ್ರಾವತಿ ಯೋಜನೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಹೊಲಿಗೆ ತರಬೇತಿ ಪಡೆದ ೨೬ ಜನ ಪ್ರಮಾಣಪತ್ರ ವಿತರಿಸಲಾಯಿತು.

ಹೊಲಿಗೆ ತರಬೇತಿ ಶಿಕ್ಷಕಿ ರಾಜೇಶ್ವರಿ, ವಲಯದ ಮೇಲ್ವಿಚಾರಕ ಸುರೇಶ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶೋಭಾ, ಸೇವಾ ಪ್ರತಿನಿಧಿ ಶಿಲ್ಪ ಸೇರಿದಂತೆ ಬಾರಂಗಿ ಕೇಂದ್ರದ ಮತ್ತು ಸ್ವ-ಸಹಾಯ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

- - -

ಕೋಟ್‌ ಗ್ರಾಮದ ಮಹಿಳೆಯರು ಸ್ವಉದ್ಯೋಗ ಮಾಡಲು ಹೊಲಿಗೆ ತರಬೇತಿ ಪಡೆದುಕೊಂಡಿದ್ದು ಸಂತೋಷದ ವಿಚಾರ. ಧರ್ಮಸ್ಥಳ ಸಂಘದಲ್ಲಿ ಉತ್ತಮ ಕಾರ್ಯಕ್ರಮಗಳು ಇರುತ್ತವೆ. ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು. ಆರ್ಥಿಕ ಸ್ವಾವಲಂಬಿಗೆ ನೀಡುವ ಸಾಲ-ಸೌಲಭ್ಯವನ್ನು ಅಷ್ಟೇ ಪ್ರಾಮಾಣಿಕತೆಯಿಂದ ಮರು ಪಾವತಿಸಬೇಕು

- ಚನ್ನಬಸಪ್ಪ, ಗ್ರಾಮದ ಮುಖಂಡ, ಬಾರಂಗಿ

- - - -24ಕೆಪಿಸೊರಬ01:

ಬಾರಂಗಿ ಗ್ರಾಮದಲ್ಲಿ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿ ಶಿಬಿರದಲ್ಲಿ ತರಬೇತಿ ಪಡೆದ 25 ಮಹಿಳೆಯರಿಗೆ ಪ್ರಮಾಣಪತ್ರ ನೀಡಲಾಯಿತು.