ಸಾರಾಂಶ
ಬಳ್ಳಾರಿ: ಸ್ಥಳೀಯವಾಗಿ ಉತ್ಪಾದಿಸಿದ ವಸ್ತುಗಳಿಗೆ ನೇರ ಮಾರುಕಟ್ಟೆ ಸೌಲಭ್ಯ ಒದಗಿಸುವುದು ಬಹಳ ಅಗತ್ಯವಿದೆ. ರೈತರು ಮತ್ತು ನೇಕಾರರು ಇಬ್ಬರೂ ಬಡವರ್ಗದವರಾಗಿದ್ದೂ, ಸ್ವಾವಲಂಬಿ ಬದುಕಿಗಾಗಿ ತಾವೇ ಉತ್ಪಾದಿಸಿದ ವಸ್ತುಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಿಕೊಳ್ಳುವುದು ಅತ್ಯಂತ ಶ್ಲಾಘನೀಯ ಕೆಲಸ ಎಂದು ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಆರ್. ಲಿಂಗರಾಜು ಹೇಳಿದರು. ನವದೆಹಲಿಯ ಅಭಿವೃದ್ಧಿ ಆಯುಕ್ತರು (ಕೈಮಗ್ಗ) ಜವಳಿ ಮಂತ್ರಾಲಯ, ಬೆಂಗಳೂರು ಕೈಮಗ್ಗ ಮತ್ತು ಜವಳಿ ಇಲಾಖೆಯ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿ, (ಕಾವೇರಿ ಹ್ಯಾಂಡ್ಲೂಮ್ಸ್), ಜಿಪಂ ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಗಡಿಗಿ ಚೆನ್ನಪ್ಪ ವೃತ್ತದ ಬಳಿಯ ಗಾಂಧಿ ಭವನದಲ್ಲಿ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ 14 ದಿನಗಳ ರಾಜ್ಯಮಟ್ಟದ ವಿಶೇಷ ಕೈಮಗ್ಗ ಮೇಳ ವಸ್ತ್ರಸಿರಿ-2024 ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಪಂ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಬಿ. ವಿಠಲ ರಾಜು ಪ್ರಾಸ್ತಾವಿಕವಾಗಿ ಮಾತನಾಡಿ, ನಗರದಲ್ಲಿ ಜ. 2ರಿಂದ 15ರ ವರೆಗೆ 14 ದಿನಗಳ ವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ. ಗ್ರಾಹಕರಿಗೆ ಕೈಮಗ್ಗ ನೇಕಾರರಿಂದ ನೇರವಾಗಿ ಗ್ರಾಹಕರಿಗೆ ಶೇ. 20ರಷ್ಟು ರಿಯಾಯಿತಿ ದರದಲ್ಲಿ ಸಿಗಲಿವೆ ಎಂದರು. ಮೇಳದಲ್ಲಿ ಸ್ಥಳೀಯ, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಒಟ್ಟು 61 ಮಳಿಗೆಗಳನ್ನು ಹಾಕಲಾಗಿತ್ತು. ಮಹಾನಗರ ಪಾಲಿಕೆಯ ಉಪಮಹಾಪೌರರಾದ ಬಿ. ಜಾನಕಿ ಅವರು ಮಳಿಗೆಗಳನ್ನು ಸಾಂಕೇತಿಕವಾಗಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಕಾವೇರಿ ಹ್ಯಾಂಡ್ಲೂಮ್ಸ್ನ ಅಧ್ಯಕ್ಷ ಬಿ.ಜೆ. ಗಣೇಶ್, ಕಾವೇರಿ ಹ್ಯಾಂಡ್ಲೂಮ್ಸ್ನ ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಎನ್. ವಿರೂಪಾಕ್ಷ, ಉತ್ತರ ವಲಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ವೀರೇಶ್ ಎಸ್. ಢವಳೆ, ಜವಳಿ ಮಂತ್ರಾಲಯದ ನೇಕಾರರ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಮಾರಿಮುತ್ತು, ಸಹಾಯಕ ನಿರ್ದೇಶಕ ಮಹಾಂತೇಶ್ ಕಂಚಿನ ಮಠ ಮತ್ತಿತರರಿದ್ದರು.