ಉಪಚುನಾವಣೆಗೂ ಮುನ್ನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ರಸ್ತೆಯ ದುಸ್ಥಿತಿಯಿಂದ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಕನ್ನಡಪ್ರಭ ವಾರ್ತೆ ಚನ್ನಪಟ್ಟಣ

ನಗರದ ಮಂಗಳವಾರಪೇಟೆಯ ೧೨ನೇ ಕ್ರಾಸ್ ರಸ್ತೆಯ ಕಾಮಗಾರಿಗೆ ಉಪಚುನಾವಣೆಗೂ ಮುನ್ನ ಗುದ್ದಲಿಪೂಜೆ ನೆರವೇರಿಸಲಾಗಿದ್ದರೂ, ಉಪಚುನಾವಣೆ ಮುಗಿದು ವರ್ಷ ಕಳೆದರೂ ಕಾಮಗಾರಿ ಆರಂಭಿಸಿಲ್ಲ ಎಂದು ಆರೋಪಿಸಿ ಮಂಗಳವಾರಪೇಟೆ ಹಾಗೂ ಮರಳುಹೊಲ ಗ್ರಾಮಸ್ಥರು ಸೋಮವಾರ ಅಣಕು ಗುದ್ದಲಿಪೂಜೆ ನಡೆಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸ್ಥಳೀಯ ಶಾಸಕ ಸಿ.ಪಿ.ಯೋಗೇಶ್ವರ್ ಮುಖವಾಡಗಳನ್ನು ಧರಿಸಿದ ಗ್ರಾಮಸ್ಥರು ಅಣಕು ಗುದ್ದಲಿಪೂಜೆ ನೆರವೇರಿಸುವ ಮೂಲಕ ರಸ್ತೆ ಕಾಮಗಾರಿ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉಪಚುನಾವಣೆಗೂ ಮುನ್ನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ರಸ್ತೆಯ ದುಸ್ಥಿತಿಯಿಂದ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷರು ಹಾಗೂ ನಗರಸಭೆ ಇಂಜಿನಿಯರ್ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ರಸ್ತೆ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಅವರು ಭರವಸೆ ನೀಡಿದ ಬಳಿಕ ಪ್ರತಿಭಟನೆ ಅಂತ್ಯಗೊಂಡಿತು.

ಕೂಡಲೇ ಕಾಮಗಾರಿ ಆರಂಭಿಸಿ, ಗುಣಮಟ್ಟದ ರಸ್ತೆ ನಿರ್ಮಿಸಬೇಕು. ಮತ್ತೊಮ್ಮೆ ಭರವಸೆ ಮಾತ್ರ ನೀಡಿ ವಿಳಂಬ ಮಾಡಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದರು.