ಗುಣಮಟ್ಟದ ಕಾಮಗಾರಿ ನಡೆಯುವಂತೆ ಸ್ಥಳೀಯರು ಎಚ್ಚರ ವಹಿಸಬೇಕು: ಎಚ್.ಟಿ.ಮಂಜು

| Published : Aug 20 2025, 01:30 AM IST

ಸಾರಾಂಶ

ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅತಿಮುಖ್ಯ. ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಕ್ಷಾಂತರ ರು. ಅನುದಾನ ಬಿಡುಗಡೆ ಮಾಡುತ್ತವೆ. ಸರ್ಕಾರದ ಹಣ ಸದ್ಬಳಕೆಯಾಗಬೇಕು. ಗುಣಮಟ್ಟದ ಕಾಮಗಾರಿಗಳ ಬಗ್ಗೆ ಆಯಾ ಭಾಗದ ಜನ ನಿಗಾ ವಹಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಕ್ಷೇತ್ರದಲ್ಲಿ ನಡೆಯುವ ಕಾಮಗಾರಿಗಳು ಗುಣಮಟ್ಟದಲ್ಲಿ ನಡೆಯುವಂತೆ ಸ್ಥಳೀಯರು ಎಚ್ಚರಿಕೆ ವಹಿಸಬೇಕು ಎಂದು ಶಾಸಕ ಎಚ್.ಟಿ.ಮಂಜು ಕ್ಷೇತ್ರದ ಜನರಲ್ಲಿ ಮನವಿ ಮಾಡಿದರು.

ತಾಲೂಕಿನ ಮರಡಹಳ್ಳಿ ಮತ್ತು ಸಿಂಗನಹಳ್ಳಿ ಗ್ರಾಮಗಳಲ್ಲಿ ತಲಾ 10 ಲಕ್ಷ ರು. ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಸೇರಿದಂತೆ ತಾಲೂಕಿನ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಗುತ್ತಿಗೆದಾರರು ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಂಡು ಉತ್ತಮ ಕೆಲಸ ನಿರ್ವಹಿಸಬೇಕು. ನಾನು ಗುಣಮಟ್ಟದಲ್ಲಿ ಯಾವುದೇ ರಾಜೀ ಮಾಡಿಕೊಳ್ಳಲ್ಲ. ಒಂದು ವೇಳೆ ಕಳಪೆ ಕಾಮಗಾರಿ ನಡೆದರೆ ಅದನ್ನು ಸ್ಥಳೀಯರು ವಿರೋಧಿಸಬೇಕು ಎಂದರು.

ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅತಿಮುಖ್ಯ. ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಕ್ಷಾಂತರ ರು. ಅನುದಾನ ಬಿಡುಗಡೆ ಮಾಡುತ್ತವೆ. ಸರ್ಕಾರದ ಹಣ ಸದ್ಬಳಕೆಯಾಗಬೇಕು. ಗುಣಮಟ್ಟದ ಕಾಮಗಾರಿಗಳ ಬಗ್ಗೆ ಆಯಾ ಭಾಗದ ಜನ ನಿಗಾ ವಹಿಸಬೇಕು ಎಂದರು.

ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದರೆ ತಕ್ಷಣ ನನ್ನ ಗಮನಕ್ಕೆ ತಂದರೆ ಗುತ್ತಿಗೆದಾರರ ವಿರುದ್ಧ ಸೂಕ್ತ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಪಾರಸ್ಸು ಮಾಡಿ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವ ಕೆಲಸ ಮಾಡುತ್ತೇನೆ ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರವು ಶೇ.90 ರಷ್ಟು ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸುತ್ತಿದೆ. ಇದರಿಂದ ಮೂಲ ಸೌಲಭ್ಯಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಅಷ್ಟೋ ಇಷ್ಟೋ ನೀಡುತ್ತಿರುವ ಅನುದಾನದಲ್ಲಿ ಹಂತ ಹಂತವಾಗಿ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ ಎಂದರು.

ಈ ವೇಳೆ ಜೆಡಿಎಸ್ ಮುಖಂಡರ ಅಕ್ಕಿಹೆಬ್ಬಾಳು ರಘು, ದಿಶಾ ಸಮಿತಿ ಸದಸ್ಯ ನರಸನಾಯಕ್, ಗುತ್ತಿಗೆದಾರ ಜೈನಹಳ್ಳಿ ದಿನೇಶ್, ಸಂತೋಷ್, ಪ್ರವೀಣ್, ಜೀವನ್, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.