ಸಬ್ ರಿಜಿಸ್ಟರ್ ಕಚೇರಿಗೆ ಲೋಕಾಯುಕ್ತ ಭೇಟಿ

| Published : Jun 13 2025, 03:13 AM IST

ಸಾರಾಂಶ

ನೋಂದಣಿ ವೇಳೆ ಸರ್ವರ್ ಹಾಗೂ ಕಂಪ್ಯೂಟರ್ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅಧಿಕಾರಿಗಳಿಗೆ ದೂರು ನೀಡಿದ್ದು ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ಕಲೆ ಹಾಕಿದರು.

ಕನಕಪುರ: ತಾಲೂಕು ಉಪ ನೋಂದಣಾಧಿಕಾರಿಗಳ ಕಚೇರಿಗೆ ಲೋಕಾಯುಕ್ತರು ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.

ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ರಾಮನಗರ ಲೋಕಾಯುಕ್ತ ಅಧಿಕಾರಿ ಪಿ.ವಿ. ಸ್ನೇಹ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದ ತಂಡ ಕಡತಗಳ ಪರಿಶೀಲನೆ ನಡೆಸಿ ಕೆಲವು ಮಾಹಿತಿಗಳನ್ನು ಪಡೆದಿದ್ದು ಕಡತಗಳ ಪರಿಶೀಲನೆ ನಡೆಸಿದ್ದಾರೆ.

ನೋಂದಣಿ ವೇಳೆ ಸರ್ವರ್ ಹಾಗೂ ಕಂಪ್ಯೂಟರ್ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅಧಿಕಾರಿಗಳಿಗೆ ದೂರು ನೀಡಿದ್ದು ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ಕಲೆ ಹಾಕಿದ ಲೋಕಾಯುಕ್ತ ಅಧಿಕಾರಿಗಳು ಕುಡಿಯುವ ನೀರಿನ ವ್ಯವಸ್ಥೆ, ತಾಯಿ ಮತ್ತು ಮಕ್ಕಳ ಹಾಲುಣಿಸುವ ಕೊಠಡಿ ಹಾಗೂ ನೌಕರರ ಐಡಿ ಕಾರ್ಡ್ ಹಾಗೂ ಅವರ ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ.

ಸತತ ಐದು ಗಂಟೆಗಳಿಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ. ರಾಮನಗರ ಚನ್ನಪಟ್ಟಣ, ಮಾಗಡಿ, ಕನಕಪುರ ಸೇರಿದಂತೆ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಏಕ ಕಾಲದಲ್ಲಿ ಲೋಕಾಯುಕ್ತರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪರಿಶೀಲನೆ ವೇಳೆ ಉಪ ನೋಂದಣಾಧಿಕಾರಿ, ಎ ಸುರೇಶ್ ಅಧಿಕಾರಿಗಳಿಗೆ ಸಂಪೂರ್ಣವಾದ ಮಾಹಿತಿ ನೀಡಿ ಸಹಕರಿಸಿದ್ದಾರೆ.

ಪರಿಶೀಲನೆ ವೇಳೆ ಲೋಕಾಯುಕ್ತ ಸಿಬ್ಬಂದಿ ರಘು,ಲಕ್ಷ್ಮೀ, ರಮ್ಯಾ, ಶಿವಕುಮಾರ್ ಹಾಜರಿದ್ದರು.

ಕೆ ಕೆ ಪಿ ಸುದ್ದಿ 02: ತಾಲ್ಲೂಕು ಉಪನೊಂದಾಣಾಧಿಕಾರಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.