ಸಾರಾಂಶ
- ಹೊನ್ನಾಳಿಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಆಗ್ರಹ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ರಾಜ್ಯದಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಹೋಗುವ ಜನರಿಗೆ ಅವರ ಪ್ರಾಣದ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.ಸೋಮವಾರ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕೂಡಲೇ ಪ್ರಕರಣ ಲೋಕಾಯುಕ್ತರಿಂದ ತನಿಖೆ ಮಾಡಿಸಬೇಕು. ಈ ಪ್ರಕರಣ ಸಮರ್ಪಕ ನಿಭಾಯಿಸುವಲ್ಲಿ ವಿಫಲರಾಗಿರುವ ಆರೋಗ್ಯ ಸಚಿವ ಹಾಗೂ ವೈದ್ಯಕೀಯ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು.
ಆರು ತಿಂಗಳ ಹಿಂದೆಯೇ ಡ್ರಗ್ಸ್ ಕಂಟ್ರೋಲ್ ವಿಭಾಗದಿಂದ ನಿಷೇಧಿಸಿರುವ ಈ ಐ.ವಿ. ಔಷಧಿಯನ್ನು ಬಾಣಂತಿಯರಿಗೆ ನೀಡಿದ್ದಾರೆ. ಇದರ ಪರಿಣಾಮ ಬಾಣಂತಿಯರು ಸಾವನ್ನಪ್ಪಿದ್ದಾರೆ. ಈಗಾಗಲೇ ನಿಷೇಧಿಸಿರುವ ಔಷಧಿಯು ಯಾರ ಪ್ರಭಾವಕ್ಕೆ ಒಳಗಾಗಿ ಬೀಮ್ಸ್ ಆಸ್ಪತ್ರೆಗೆ ತಲುಪಿದೆ ಹಾಗೂ ನಿಷೇಧಿಸಿದ ಐವಿ ಔಷಧಿಯನ್ನು ಸರ್ಕಾರ ಏಕೆ ಖರೀದಿಸಿದೆ ಎಂಬುದು ತನಿಖೆಗೆ ಒಳಪಡಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ಕಳೆದ 11 ತಿಂಗಳಲ್ಲಿ 111 ಶಿಶುಗಳು ಮೃತಪಟ್ಟಿವೆ. ರಾಜ್ಯದಲ್ಲಿ ರೈತರು, ಬಾಣಂತಿಯರ ಸರಣಿ ಸಾವುಗಳ ನಡುವೆಯೂ ರಾಜ್ಯ ಸರ್ಕಾರ ಹಾಸನದಲ್ಲಿ ಸಮಾವೇಶ ನಡೆಸಲು ಮುಂದಾಗಿದೆ. ಇದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ ರೇಣುಕಾಚಾರ್ಯ ಅವರು, ತಮ್ಮ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಬಿಜೆಪಿ ವಿರುದ್ಧ ವಿನಾಕಾರಣ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಛೀಮಾರಿ ಹಾಕುತ್ತಿದ್ದಾರೆ ಎಂದರು.
ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ಮುಖಂಡರಾದ ನೆಲಹೊನ್ನೆ ಮಂಜುನಾಥ್, ಅರಕೆರೆ ನಾಗರಾಜ್, ರವಿಕುಮಾರ್, ಮಾರಿಕೊಪ್ಪ ಹನುಮಂತಪ್ಪ ಇತರರು ಇದ್ದರು.- - -
ಟಾಪ್ ಕೋಟ್ಕಾಂಗ್ರೆಸ್ನಲ್ಲಿ ಮೇಲ್ನೋಟಕ್ಕೆ ಎಲ್ಲಾ ನಾಯಕರು ಒಂದಾಗಿದ್ದರೂ ಆಂತರಿಕವಾಗಿ ಸಿಎಂ ಕುರ್ಚಿಗೆ ಹಾಗೂ ಸಚಿವ ಸ್ಥಾನಗಳಿಗೆ ತೆರೆಮರೆಯಲ್ಲಿ ಪೈಪೋಟಿ ನಡೆಯುತ್ತಿದೆ. ಆದರೂ ಮಾಧ್ಯಮಗಳ ಮುಂದೆ ನಾವುಗಳು ಕಿತ್ತಾಡುತ್ತಿಲ್ಲ, ಎಲ್ಲರೂ ಒಂದಾಗಿದ್ದೇವೆ ಎಂದು ತೋರಿಸಿಕೊಳ್ಳುತ್ತಿದ್ದಾರೆ
- ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಮುಖಂಡ- - - -2ಎಚ್.ಎಲ್.ಐ2:
ಹೊನ್ನಾಳಿಯಲ್ಲಿ ಎಂ.ಪಿ.ರೇಣುಕಾಚಾರ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.